
ಬಿಜೆಪಿ ರಾಜ್ಯ ಕಾರ್ಯಕಾರಣಿ ಸಭೆ
ಬೆಂಗಳೂರು: ಬಿ.ವೈ.ವಿಜಯೇಂದ್ರ ನೇತೃತ್ವದ ತಂಡ ಮುಂದಿನ ವಿಧಾನಸಭಾ ಚುನಾವಣೆಯನ್ನು ಎದುರಿಸಿ ಬಹುಮತ ಸಾಧಿಸಲಿದೆ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ರಾಧಾಮೋಹನ್ ದಾಸ್ ಅಗರವಾಲ್ ತಿಳಿಸಿದರು.
ಬಿಜೆಪಿ ವಿಶೇಷ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿ ಅವರು, ವಿಧಾನಸಭೆ ಮತ್ತು ವಿಧಾನಪರಿಷತ್ತಿನಲ್ಲಿ ಆರ್. ಅಶೋಕ ಮತ್ತು ಛಲವಾದಿ ನಾರಾಯಣ ಸ್ವಾಮಿ ಅವರು ಭ್ರಷ್ಟ ಸರ್ಕಾರವನ್ನು ಕಟ್ಟಿ ಹಾಕುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಸದನದ ಒಳಗೆ ಮತ್ತು ಹೊರಗೆ ಈ ಮೂವರ ತಂಡ ಸರ್ಕಾರ ವಿರುದ್ಧ ಹೋರಾಟ ನಡೆಸುತ್ತಿದೆ. ಈ ಸಂಘರ್ಷ ನಿರಂತರವಾಗಿರಲಿ. ಮುಂಬರುವ ವಿಧಾನಸಭಾ ಉಪ ಚುನಾವಣೆಗಳು, ವಿಧಾನಪರಿಷತ್, ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಗೆಲ್ಲಬೇಕು. ಇದಕ್ಕೆ ಸಂಘಟಿತ ಪ್ರಯತ್ನ ಇರಬೇಕು ಎಂದು ಸಲಹೆ ನೀಡಿದರು.
ರಾಜ್ಯ ಸರ್ಕಾರ ರೋಹಿತ್ ವೇಮುಲಾ ಮಸೂದೆಯಲ್ಲಿ ಎಸ್ ಸಿ ಎಸ್ ಟಿ ಜತೆಗೆ ಮುಸ್ಲಿಮರನ್ನೂ ಸೇರಿಸಿದೆ. ಇದು ಸಾಮಾಜಿಕ ಸಾಮರಸ್ಯ ಹದಗೆಡಲು ಕಾರಣ ಆಗುತ್ತದೆ. ಎಸ್ ಸಿ ಮತ್ತು ಎಸ್ ಟಿಗಳಿಗೆ ಮಾತ್ರ ಈ ಕಾಯ್ದೆ ಅನ್ವಯ ಆಗಬೇಕು ಎಂದು ಅವರು ಹೇಳಿದರು.
ಸಾರ್ವಜನಿಕ ಜೀವನದಲ್ಲಿ 50 ವರ್ಷ ಪೂರ್ಣಗೊಳಿಸಿದ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಅವರನ್ನು ಅಭಿನಂದಿಸಲಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.