
ಬೈರತಿ ಬಸವರಾಜ್ ಮತ್ತು ಬಿಕ್ಲು ಶಿವ
ಬೆಂಗಳೂರು: ‘ರೌಡಿ ಶೀಟರ್ ಬಿಕ್ಲು ಶಿವು ಅಲಿಯಾಸ್ ಶಿವಕುಮಾರ್ ಕೊಲೆ ಪ್ರಕರಣದಲ್ಲಿ ಇತರೆ ಆರೋಪಿಗಳ ವಿರುದ್ಧ ತನಿಖೆ ನಡೆಸಿ ದೋಷಾರೋಪ ಪಟ್ಟಿ ಸಲ್ಲಿಸಿರುವ ಸಿಐಡಿ, ಬೈರತಿ ಬಸವರಾಜ ಅವರ ವಿರುದ್ಧ ಮಾತ್ರ ದೋಷಾರೋಪ ಪಟ್ಟಿ ಸಲ್ಲಿಸಿಲ್ಲ. ಅವರ ವಿರುದ್ಧ ತನಿಖೆ ನಡೆಸಲಾಗುವುದು ಎಂದಷ್ಟೇ ಹೇಳಿದೆ’ ಎಂದು ಆರೋಪಿ ಪರ ಹಿರಿಯ ವಕೀಲರು ಹೈಕೋರ್ಟ್ಗೆ ಅರುಹಿದರು.
ಪ್ರಕರಣದಲ್ಲಿ ಐದನೇ ಆರೋಪಿಯಾಗಿರುವ ಬಿಜೆಪಿ ಶಾಸಕ ಬೈರತಿ ಬಸವರಾಜ ಅವರು ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿರುವ ಕ್ರಿಮಿನಲ್ ಅರ್ಜಿಯನ್ನು ನ್ಯಾಯಮೂರ್ತಿ ಎಸ್.ಸುನಿಲ್ ದತ್ ಯಾದವ್ ಅವರಿದ್ದ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.
ವಿಚಾರಣೆ ವೇಳೆ ಬಸವರಾಜ ಪರ ಪದಾಂಕಿತ ಹಿರಿಯ ವಕೀಲ ಸಂದೇಶ್ ಜೆ.ಚೌಟ, ‘ತನಿಖೆಯು 2025ರ ಜುಲೈ 24ಕ್ಕೆ ಸಿಐಡಿ ಪೊಲೀಸರಿಗೆ ವರ್ಗಾವಣೆಯಾಯಿತು. ಅಲ್ಲಿಂದ ಈತನಕ ತನಿಖೆಗೆ ಹಾಜರಾಗುವಂತೆ ತನಿಖಾಧಿಕಾರಿಗಳು ಅರ್ಜಿದಾರರಿಗೆ ನೋಟಿಸ್ ನೀಡಿಲ್ಲ. ಅದಕ್ಕೂ ಮುನ್ನ ಜುಲೈ 19 ಮತ್ತು 23ರಂದು ಭಾರತೀನಗರ ಠಾಣಾ ಪೊಲೀಸರ ಮುಂದೆ ಬಸವರಾಜ ಅವರು ಹಾಜರಾಗಿ ಹೇಳಿಕೆ ನೀಡಿದ್ದರು. ಈ ಹೇಳಿಕೆಗಳು ಸುಳ್ಳು ಎನ್ನುವುದು ನಿರೀಕ್ಷಣಾ ಜಾಮೀನು ರದ್ದುಪಡಿಸುವಂತೆ ಕೋರುವುದಕ್ಕೆ ಆಧಾರ ಎನಿಸುವುದಿಲ್ಲ’ ಎಂದು ಪ್ರತಿಪಾದಿಸಿದರು. ವಿಚಾರಣೆಯನ್ನು ಬುಧವಾರಕ್ಕೆ (ಜ.14) ಮುಂದೂಡಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.