
ಬೆಂಗಳೂರು: ‘ಚಿಕ್ಕಬಳ್ಳಾಪುರದ ಸದಾಶಿವನಗರ ಬಡಾವಣೆಯಲ್ಲಿ ನಾಗರಿಕ ಸೌಲಭ್ಯಕ್ಕಾಗಿ (ಸಿಎ) ಮೀಸಲಿಟ್ಟ ನಿವೇಶನವನ್ನು ಕಾಂಗ್ರೆಸ್ ಭವನ ಟ್ರಸ್ಟ್ಗೆ ನೋಂದಣಿ ಮಾಡಿಕೊಟ್ಟಿರುವ ಚಿಕ್ಕಬಳ್ಳಾಪುರ ನಗರಾಭಿವೃದ್ಧಿ ಪ್ರಾಧಿಕಾರದ (ಸಿಯುಡಿಎ) ಕ್ರಮ ರದ್ದುಪಡಿಸಬೇಕು’ ಎಂದು ಕೋರಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಲಾಗಿದೆ.
ಈ ಕುರಿತಂತೆ ಕಾವಲ್ ಬೈರಸಂದ್ರದ ಎಂಎಂ ಬಡಾವಣೆ ನಿವಾಸಿ ಬಿ.ಕೃಷ್ಣಮೂರ್ತಿ ರಿಟ್ ಅರ್ಜಿ ಸಲ್ಲಿಸಿದ್ದು ಇದು ಇನ್ನಷ್ಟೇ ವಿಚಾರಣೆಗೆ ಬರಬೇಕಿದೆ. ಅರ್ಜಿಯಲ್ಲಿ ರಾಜ್ಯ ನಗರಾಭಿವೃಧ್ಧಿ ಇಲಾಖೆ ಪ್ರಧಾನ ಕಾರ್ಯದರ್ಶಿ ಸಿಯುಡಿಎ ಆಯುಕ್ತ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷ ಮತ್ತು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯನ್ನು (ಕೆಪಿಸಿಸಿ) ಪ್ರತಿವಾದಿಗಳನ್ನಾಗಿ ಮಾಡಲಾಗಿದೆ.
ಆಕ್ಷೇಪ: ‘ನಾಗರಿಕ ಸೌಲಭ್ಯಕ್ಕಾಗಿ ಮೀಸಲಿಟ್ಟ 3404.26 ಚದರ ಮೀಟರ್ ವಿಸ್ತೀರ್ಣದ ನಿವೇಶನವನ್ನು ಪ್ರಾಧಿಕಾರವು 2025ರ ಜುಲೈ 1ರಂದು ಕಾಂಗ್ರೆಸ್ ಭವನ ಟ್ರಸ್ಟ್ ಹೆಸರಿಗೆ ಮಾರಾಟ ಮಾಡಿ ಶುದ್ಧ ಕ್ರಯಕ್ಕೆ ನೋಂದಣಿ ಮಾಡಿಕೊಟ್ಟಿದೆ. ರಾಜಕೀಯ ಪಕ್ಷದ ಕಚೇರಿಗೆ ಭೂಮಿ ಮಂಜೂರು ಮಾಡಿರುವುದು ಕರ್ನಾಟಕ ನಗರಾಭಿವೃದ್ಧಿ ಪ್ರಾಧಿಕಾರಗಳ ಕಾಯ್ದೆ-1987 ಕರ್ನಾಟಕ ನಗರಾಭಿವೃದ್ಧಿ (ನಾಗರಿಕ ಸೌಲಭ್ಯ ನಿವೇಶನಗಳ ಮಂಜೂರಾತಿ) ಅಧಿನಿಯಮಗಳು-1991ರ ಮತ್ತು ಸಾರ್ವಜನಿಕ ನಂಬಿಕೆ ತತ್ವಕ್ಕೆ ವಿರುದ್ಧವಾಗಿದೆ’ ಎಂದು ಅರ್ಜಿದಾರರು ಆಕ್ಷೇಪಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.