ಕಲಬುರ್ಗಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪೌರತ್ವ (ತಿದ್ದುಪಡಿ) ಕಾಯ್ದೆ (ಸಿಎಎ), ರಾಷ್ಟ್ರೀಯ ಪೌರತ್ವ ನೋಂದಣಿ (ಎನ್ಆರ್ಸಿ) ಹಾಗೂ ರಾಷ್ಟ್ರೀಯ ಜನಸಂಖ್ಯಾ ನೋಂದಣಿ (ಎನ್ಪಿಆರ್) ಪ್ರಕ್ರಿಯೆ ಸಂದರ್ಭದಲ್ಲಿ ಯಾವುದೇ ದಾಖಲೆ ತೋರಿಸದೇ ಅಸಹಕಾರ ತೋರುವ ನಿರ್ಣಯವನ್ನು ಮಂಗಳವಾರ ಇಲ್ಲಿ ನಡೆದ ‘ರಾಷ್ಟ್ರೀಯ ಸಮಾವೇಶ’ದಲ್ಲಿ ಕೈಗೊಳ್ಳಲಾಯಿತು.
‘ಕಲಬುರ್ಗಿ ಪೀಪಲ್ಸ್ ಫೋರಂ’ನಿಂದ ಆಯೋಜಿಸಿದ್ದ ಈ ಸಮಾವೇಶದಲ್ಲಿಕಲಬುರ್ಗಿ, ಬೀದರ್, ಯಾದಗಿರಿ, ರಾಯಚೂರು, ಕೊಪ್ಪಳ ಹಾಗೂ ವಿಜಯಪುರ ಜಿಲ್ಲೆ ಗಳಿಂದ ಅಸಂಖ್ಯ ಜನರು ಭಾಗವಹಿಸಿದ್ದರು.
‘ಜನರನ್ನು ಧರ್ಮದ ಆಧಾರದ ಮೇಲೆ ಒಡೆದು ಆಳುವ ತನ್ನ ಕಾರ್ಯಸೂಚಿಯನ್ವಯವೇ ಬಿಜೆಪಿ ಇಂತಹ ವಿಭಜಕ ನೀತಿಗಳನ್ನು ಜಾರಿಗೆ ತರುತ್ತಿದೆ. ಇದರಿಂದ ಮುಸ್ಲಿಮರಿಗಷ್ಟೇ ಅಲ್ಲದೇ ಇತರೆ ಧರ್ಮೀಯರಿಗೂ ಸಮಸ್ಯೆ ಆಗುತ್ತದೆ. ಮುಸ್ಲಿಂರನ್ನು ಇತರರು ಸಂಶಯದ ದೃಷ್ಟಿಯಿಂದಲೇ ನೋಡುವಂತಹ ವಾತಾವರಣವನ್ನು ಬಿಜೆಪಿ ಸೃಷ್ಟಿಸುತ್ತಿದೆ’ ಎಂದು ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ದೂರಿದರು.
ಸಿಪಿಎಂ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ ಅವರು, , ‘ಸಂವಿಧಾನದ ಆಶಯಗಳನ್ನು ಬುಡಮೇಲು ಮಾಡಿ ಭಾರತವನ್ನು ಹಿಂದೂರಾಷ್ಟ್ರವನ್ನಾಗಿ ಪರಿವರ್ತಿಸುವುದು ಬಿಜೆಪಿಯ ಪ್ರಮುಖ ಕಾರ್ಯಸೂಚಿ’ ಎಂದು ಟೀಕಿಸಿದರು. ಎಐಸಿಸಿ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಖರ್ಗೆ, ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಯ ವಿವಿಧ ಪಕ್ಷಗಳ ಮುಖಂಡರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.