ADVERTISEMENT

ನಾಲ್ಕು ದಿನ ಕಳೆದರೂ ಸಚಿವರಿಗೆ ಸಿಗದ ಖಾತೆ

​ಪ್ರಜಾವಾಣಿ ವಾರ್ತೆ
Published 17 ಜೂನ್ 2019, 18:51 IST
Last Updated 17 ಜೂನ್ 2019, 18:51 IST
   

ಬೆಂಗಳೂರು: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನೇತೃತ್ವದ ಮೈತ್ರಿ ಸರ್ಕಾರಕ್ಕೆ ಇಬ್ಬರು ನೂತನ ಸಚಿವರು ಸೇರ್ಪಡೆಯಾಗಿ ನಾಲ್ಕು ದಿನ ಕಳೆದರೂ ಇನ್ನೂ ಖಾತೆ ಹಂಚಿಕೆಯಾಗಿಲ್ಲ.

ಆರ್. ಶಂಕರ್, ಎಚ್. ನಾಗೇಶ್ ಅವರು ಸಚಿವರಾಗಿ ಜೂನ್ 14ರಂದು ಪ್ರಮಾಣ ವಚನ ಸ್ವೀಕರಿಸಿದ್ದರು. ಖಾತೆ ಹಂಚಿಕೆ ಮಾಡಬೇಕಿದ್ದ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಜೂನ್ 14ರಂದೇ ರಾತ್ರಿ ದೆಹಲಿಗೆ ತೆರಳಿದ್ದು, ಭಾನುವಾರ ವಾಪಸಾಗಿದ್ದಾರೆ. ಸೋಮವಾರ ಚನ್ನಪಟ್ಟಣ ಕ್ಷೇತ್ರದಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದು, ಮಂಗಳವಾರ ಸಹ ಕ್ಷೇತ್ರದ ಸಭೆಗಳಲ್ಲಿ ಭಾಗವಹಿಸಲಿದ್ದಾರೆ.

ಮೈತ್ರಿ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಸಹ ದೆಹಲಿಗೆ ತೆರಳಿದ್ದು, ಖಾತೆ ಹಂಚಿಕೆ ಸಂಬಂಧ ಅವರ ಜತೆಗೂ ಮುಖ್ಯಮಂತ್ರಿ ಸಮಾಲೋಚನೆ ನಡೆಸಲಿದ್ದಾರೆ. ಅವರೂ ಮಂಗಳವಾರ ದೆಹಲಿಯಿಂದ ವಾಪಸಾಗಲಿದ್ದಾರೆ.ಹಾಗಾಗಿ ಖಾತೆ ಹಂಚಿಕೆಗೆ ಇನ್ನೂ ಒಂದೆರಡು ದಿನಗಳು ಬೇಕಾಗಬಹುದು ಎಂದು ಹೇಳಲಾಗುತ್ತಿದೆ.

ADVERTISEMENT

ರಾಣೆಬೆನ್ನೂರು ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸುವ ಆರ್.ಶಂಕರ್, ಮೈತ್ರಿ ಸರ್ಕಾರದಲ್ಲಿ ಎರಡನೇ ಬಾರಿಗೆ ಸಚಿವರಾದ ನಂತರ ಕ್ಷೇತ್ರದಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಹಳ್ಳಿಗಳಿಗೆ ಭೇಟಿ ನೀಡಿ, ಮತದಾರರಿಗೆ ಕೃತಜ್ಞತೆ ಸಲ್ಲಿಸುತ್ತಿದ್ದಾರೆ. ಜತೆಗೆ ಮಾದರಿ ಕ್ಷೇತ್ರವನ್ನಾಗಿ ಅಭಿವೃದ್ಧಿಪಡಿಸುವುದಾಗಿ ಭರವಸೆ ನೀಡುತ್ತಿದ್ದು, ಕ್ಷೇತ್ರ ಸುತ್ತಾಟ ಮುಂದುವರಿಸಿದ್ದಾರೆ.

ಮುಳಬಾಗಲು ವಿಧಾನಸಭಾ ಕ್ಷೇತ್ರದ ಎಚ್.ನಾಗೇಶ್, ಮೊದಲ ಬಾರಿಗೆ ಸಚಿವರಾಗಿದ್ದು, ಪ್ರಮಾಣ ವಚನ ಸ್ವೀಕರಿಸಿದ ನಂತರ ಕ್ಷೇತ್ರಕ್ಕೆ ಭೇಟಿ ನೀಡಿಲ್ಲ. ಸಚಿವರಾಗಿದ್ದಕ್ಕೆ ಕ್ಷೇತ್ರದಲ್ಲಿ ಸಂಭ್ರಮಾಚರಣೆಯೂ ನಡೆದಿಲ್ಲ. ಖಾತೆ ನಿರೀಕ್ಷೆಯಲ್ಲೇ ಬೆಂಗಳೂರಿನಲ್ಲಿ ಇದ್ದಾರೆ ಎನ್ನಲಾಗಿದೆ.

ಆಪರೇಷನ್ ಕಮಲಕ್ಕೆ ತುತ್ತಾಗಬಹುದಾದ ಸಾಧ್ಯತೆಯ ಹಿನ್ನೆಲೆಯಲ್ಲಿ ತುರ್ತಾಗಿ ಇಬ್ಬರನ್ನು ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.