ADVERTISEMENT

ಹೊಸದಾಗಿ ವಿಜಯನಗರ ಜಿಲ್ಲೆ ರಚನೆಗೆ ಸಚಿವ ಸಂಪುಟ ಸಭೆ ಒಪ್ಪಿಗೆ

​ಪ್ರಜಾವಾಣಿ ವಾರ್ತೆ
Published 18 ನವೆಂಬರ್ 2020, 12:18 IST
Last Updated 18 ನವೆಂಬರ್ 2020, 12:18 IST
ಅರಣ್ಯ ಸಚಿವ ಆನಂದ್‌ ಸಿಂಗ್
ಅರಣ್ಯ ಸಚಿವ ಆನಂದ್‌ ಸಿಂಗ್   

ಬೆಂಗಳೂರು: ಬಳ್ಳಾರಿ ಜಿಲ್ಲೆಯನ್ನು ವಿಭಜಿಸಿ ಹೊಸದಾಗಿ ವಿಜಯನಗರ ಜಿಲ್ಲೆ ರಚಿಸಲು ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.

‘ಇದು ರಾಜ್ಯದ 31ನೇ ಜಿಲ್ಲೆಯಾಗಲಿದ್ದು, ಇದಕ್ಕೆ ಯಾವ ಯಾವ ತಾಲ್ಲೂಕುಗಳನ್ನು ಸೇರಿಸಬೇಕು ಎಂಬ ಬಗ್ಗೆ ಮುಂದಿನ ದಿನಗಳಲ್ಲಿ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳಲಾಗುವುದು’ ಎಂದು ಅರಣ್ಯ ಸಚಿವ ಆನಂದ್‌ ಸಿಂಗ್‌ ಅವರು ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

‘ವಿಜಯನಗರ ಜಿಲ್ಲೆ ರಚನೆಗೆ ಸಚಿವ ಸಂಪುಟದಲ್ಲಿ ಒಮ್ಮತದ ಒಪ್ಪಿಗೆ ಸಿಕ್ಕಿದೆ. ವಿಜಯನಗರ ಜಿಲ್ಲೆ ಸ್ಥಾಪನೆಗಾಗಿ ಹಲವು ದಶಕಗಳಿಂದ ಹೋರಾಟ ನಡೆದಿತ್ತು. ಒಂದು ಕಾಲದಲ್ಲಿ ವಿಜಯನಗರ ಹಿಂದೂ ಸಾಮ್ರಾಜ್ಯದ ಹೃದಯ ಸಾಮ್ರಾಟ ಎಂಬ ಸ್ಥಾನ ಪಡೆದಿತ್ತು. ಇದು ಜಿಲ್ಲಾ ಕೇಂದ್ರವಾಗಬೇಕು ಎಂಬುದು ಎಲ್ಲರ ಅಪೇಕ್ಷೆಯಾಗಿತ್ತು. ಇದಕ್ಕಾಗಿ ಪಕ್ಷಾತೀತವಾಗಿ ಹೋರಾಟ ನಡೆದಿತ್ತು. ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ಐತಿಹಾಸಿಕ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ. ಜಿಲ್ಲೆಯ ವಿಭಜನೆಗೆ ಕೆಲವರ ವಿರೋಧವಿತ್ತು. ಅಂತಿಮವಾಗಿ ಎಲ್ಲರ ವಿಶ್ವಾಸವನ್ನು ತೆಗೆದುಕೊಂಡೇ ಈ ನಿರ್ಣಯ ತೆಗೆದುಕೊಳ್ಳಲಾಯಿತು’ ಎಂದು ಆನಂದ್‌ ಸಿಂಗ್‌ ತಿಳಿಸಿದರು.

ADVERTISEMENT

ವಿಜಯನಗರ ಜಿಲ್ಲೆಯ ರಚನೆಗೆ ಸಂಬಂಧಿಸಿದಂತೆ ಹಿಂದಿನಿಂದಲೂ ಹೋರಾಟ ನಡೆದಿತ್ತು. ಈ ವಿಷಯಕ್ಕೆ ಸಂಬಂಧಿಸಿದಂತೆ ಕೆಲವು ಸಂದರ್ಭದಲ್ಲಿ ಪರ ಮತ್ತು ವಿರೋಧ ಅಭಿಪ್ರಾಯ ವ್ಯಕ್ತವಾಗಿತ್ತು. ಅಂತಿಮವಾಗಿ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡೇ ತೀರ್ಮಾನ ತೆಗೆದುಕೊಳ್ಳಲಾಗಿದೆ. ಆಡಳಿತಾತ್ಮಕವಾಗಿ ಉತ್ತಮ ನಿರ್ಧಾರ ಎಂದು ಸಮಾಜಕಲ್ಯಾಣ ಸಚಿವ ಶ್ರೀರಾಮುಲು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.