ADVERTISEMENT

ಕೆಪಿಎಸ್‌ಸಿ: 362 ಅಭ್ಯರ್ಥಿಗಳ ರಕ್ಷಣೆಗೆ ನಿರ್ಧಾರ

​ಪ್ರಜಾವಾಣಿ ವಾರ್ತೆ
Published 7 ಜನವರಿ 2022, 3:37 IST
Last Updated 7 ಜನವರಿ 2022, 3:37 IST
   

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) 2011ನೇ ಸಾಲಿನಲ್ಲಿ ನಡೆಸಿದ್ದ ಗೆಜೆಟೆಡ್‌ ಪ್ರೊಬೇಷನರಿ ಅಧಿಕಾರಿಗಳ ನೇಮಕಾತಿ ಪರೀಕ್ಷೆಯಲ್ಲಿ ಆಯ್ಕೆಯಾಗಿದ್ದ 362 ಅಭ್ಯರ್ಥಿಗಳಿಗೆ ರಕ್ಷಣೆ ನೀಡಲು ಅಗತ್ಯ ಕ್ರಮವಹಿಸಲು ಗುರುವಾರ ನಡೆದ ಸಚಿವ ಸಂಪುಟ ಸಭೆ ನಿರ್ಧರಿಸಿದೆ.

ಈ ಮಾಹಿತಿ ನೀಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ, ‘ಅಭ್ಯರ್ಥಿಗಳಿಗೆ ನ್ಯಾಯ ಒದಗಿಸಲು ಸಂಪುಟ ತೀರ್ಮಾನಿಸಿದೆ. ಅದಕ್ಕೆ ಪೂರಕವಾಗಿ ಕಡತಗಳನ್ನು ಅಧ್ಯಯನ ಮಾಡಿ, ಪ್ರಸ್ತಾವ ಸಿದ್ಧಪಡಿಸುವಂತೆ ಮುಖ್ಯಮಂತ್ರಿಯವರು ನನಗೆ ಜವಾಬ್ದಾರಿ ನೀಡಿದ್ದಾರೆ’ ಎಂದರು.

2011ರಲ್ಲಿ 362 ಗೆಜೆಟೆಡ್‌ ಪ್ರೊಬೇಷನರಿ ಹುದ್ದೆಗಳ ಭರ್ತಿಗೆಕೆಪಿಎಸ್‌ಸಿ ನಡೆಸಿದ ಪರೀಕ್ಷೆಯಲ್ಲಿ ಅಕ್ರಮ, ಭ್ರಷ್ಟಾಚಾರ ನಡೆದಿದೆ ಎಂಬ ಆರೋಪ ಕೇಳಿ ಬಂದಿತ್ತು. ಈ ಕುರಿತು ಸಿಐಡಿ ತನಿಖೆಯೂ ನಡೆದಿತ್ತು. 362 ಅಭ್ಯರ್ಥಿಗಳ ನೇಮಕಾತಿ ರದ್ದುಗೊಳಿಸಿ ಹೈಕೋರ್ಟ್‌ ಆದೇಶ ಹೊರಡಿಸಿತ್ತು. ಈ ಪ್ರಕರಣದಲ್ಲಿ ಕೆಪಿಎಸ್‌ಸಿಯ ಆಗಿನ ಅಧ್ಯಕ್ಷರು ಮತ್ತು ಸದಸ್ಯರ ವಿರುದ್ಧ ವಿಚಾರಣೆಗೆ ಅನುಮತಿ ನೀಡಲು ಸರ್ಕಾರ ನಿರಾಕರಿಸಿತ್ತು.

ADVERTISEMENT

ಎಲ್ಲ 362 ಜನರಿಗೂ ಮರುನೇಮಕಾತಿ ಆದೇಶ ನೀಡಬೇಕೆಂಬ ಆಗ್ರಹ ಕೇಳಿಬಂದಿತ್ತು. ರಕ್ಷಣೆ ನೀಡುವುದಾಗಿ ಸರ್ಕಾರ ವಿಧಾನಮಂಡಲದಲ್ಲೇ ಭರವಸೆ ನೀಡಿತ್ತು. ತುಮಕೂರು ಸಿದ್ಧಗಂಗಾಮಠದ ಸಿದ್ಧಲಿಂಗ ಸ್ವಾಮೀಜಿ ಮತ್ತು ಸಿರಿಗೆರೆಯ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಅವರೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಇತ್ತೀಚೆಗೆ ಪತ್ರ ಬರೆದು ಇದೇ ಬೇಡಿಕೆ ಮುಂದಿಟ್ಟಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.