ADVERTISEMENT

ಬಿಜೆಪಿ ಪ್ರಮುಖರ ಸಮಿತಿ ಸಭೆ: ಸಚಿವಾಕಾಂಕ್ಷಿಗಳಲ್ಲಿ ಗರಿಗೆದರಿದ ಉತ್ಸಾಹ

​ಪ್ರಜಾವಾಣಿ ವಾರ್ತೆ
Published 1 ಜನವರಿ 2021, 19:31 IST
Last Updated 1 ಜನವರಿ 2021, 19:31 IST
ಅರುಣ್‌ ಸಿಂಗ್‌
ಅರುಣ್‌ ಸಿಂಗ್‌   

ಬೆಂಗಳೂರು/ಶಿವಮೊಗ್ಗ: ಸಚಿವ ಸ್ಥಾನದ ಆಸೆ ಹೊತ್ತು ‘ಚಾತಕಪಕ್ಷಿ’ಗಳಂತೆ ಕಾದು ಕುಳಿತಿರುವ ಬಿಜೆಪಿ ಶಾಸಕರು ಪಕ್ಷದ ರಾಜ್ಯ ಉಸ್ತುವಾರಿ ಅರುಣ್‌ ಸಿಂಗ್‌ ಅವರು ಈ ಬಾರಿಯಾದರೂ ತಮಗೆ ‘ಸಿಹಿ ಸುದ್ದಿ’ ನೀಡಬಹುದು ಎಂಬ ನಿರೀಕ್ಷೆಯಲ್ಲಿದ್ದಾರೆ.

ಒಂದು ವೇಳೆ ಪಕ್ಷದ ವರಿಷ್ಠರು ಸಂಪುಟ ವಿಸ್ತರಣೆಗೆ ಸಂದೇಶ ಕಳಿಸಿದ್ದರೆ, ಸಿಂಗ್‌ ಅವರು ಅದನ್ನು ಮುಖ್ಯಮಂತ್ರಿಗೆಶನಿವಾರ ತಿಳಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.

ಶಿವಮೊಗ್ಗದಲ್ಲಿ ಶನಿವಾರ ಮತ್ತು ಭಾನುವಾರ ನಡೆಯುವ ರಾಜ್ಯ ಬಿಜೆಪಿ ಪ್ರಮುಖರ ಸಮಿತಿ ಸಭೆ ಹಾಗೂ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸಲು ಶುಕ್ರವಾರ ರಾತ್ರಿ ಅರುಣ್‌ ಸಿಂಗ್‌ ಬೆಂಗಳೂರಿಗೆ ಬಂದಿಳಿದರು.

ADVERTISEMENT

ಗ್ರಾಮ ಪಂಚಾಯಿತಿ ಚುನಾವಣೆ ಮುಗಿದು, ಫಲಿತಾಂಶ ಬಂದಿರುವುದರಿಂದ ಈಗ ಸಂಪುಟ ವಿಸ್ತರಣೆಗೆ ಯಾವುದೇ ಅಡ್ಡಿ ಇಲ್ಲ. ಈ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಗೆದ್ದಿರುವುದರಿಂದ ಯಡಿಯೂರಪ್ಪ ಅವರ ಬಲವೂ ಹೆಚ್ಚಿದೆ. ಹೀಗಾಗಿ ವರಿಷ್ಠರು ಸಂಪುಟ ವಿಸ್ತರಣೆ ಅಥವಾ ಪುನಾರಚನೆಗೆ ಅವಕಾಶ ನೀಡಬಹುದು ಎಂಬ ಲೆಕ್ಕಾಚಾರ ಸಚಿವಾಕಾಂಕ್ಷಿ ಶಾಸಕರದು ಎಂದೂ ಮೂಲಗಳು ತಿಳಿಸಿವೆ.

ಪ್ರಮುಖ ಸಮಿತಿ ಸಭೆಯಲ್ಲಿ ಕಳೆದ ಒಂದು ವರ್ಷದಲ್ಲಿ ಸರ್ಕಾರ ಕೈಗೊಂಡ ಅಭಿವೃದ್ಧಿ ಕಾರ್ಯಗಳು ಮತ್ತು ಮುಂದೆ ಕೈಗೊಳ್ಳಲಿರುವ ಕಾರ್ಯಗಳ ಬಗ್ಗೆಯೂ ಸಭೆಯಲ್ಲಿ ಮುಖ್ಯಮಂತ್ರಿಯವರು ಪ್ರಸ್ತಾವ ಮುಂದಿಡಲಿದ್ದು, ಈ ಸಂಬಂಧ ಶುಕ್ರವಾರವೇ ಅಧಿಕಾರಿಗಳ ಜತೆ ಸಭೆ ನಡೆಸಿ ಮಾಹಿತಿಗಳನ್ನು ಪಡೆದರು.

ಗ್ರಾಮ ಪಂಚಾಯಿತಿ ಚುನಾವಣೆಯ ಸಾಧನೆ ಮತ್ತು ಅದರಲ್ಲಿ ಗೆದ್ದಿರುವ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳನ್ನು ಕರೆಯಿಸಿ ಅಭಿನಂದನೆ ಸಲ್ಲಿಸುವ ಕಾರ್ಯಕ್ರಮವೊಂದನ್ನು ಹಮ್ಮಿಕೊಳ್ಳುವ ಬಗ್ಗೆ ಚರ್ಚೆ ನಡೆಯಲಿದೆ. ಈ ಹಿಂದೆ ಪಕ್ಷದ ಪ್ರಮುಖರ ಸಮಿತಿ ಸಭೆಯಲ್ಲಿ ತೀರ್ಮಾನ ಮಾಡಿದಂತೆ ಗೋಹತ್ಯೆ ನಿಷೇಧ ಕಾಯ್ದೆಯನ್ನು ವಿಧಾನಸಭೆಯಲ್ಲಿ ಅಂಗೀಕಾರ ಪಡೆದು, ಸುಗ್ರೀವಾಜ್ಞೆ ಹೊರಡಿಸಿರುವುದನ್ನು ಸಭೆಯಲ್ಲಿ ಅರುಣ್‌ ಸಿಂಗ್‌ ಅವರ ಗಮನಕ್ಕೆ ತರಲಾಗುವುದು. ‘ಲವ್‌ ಜಿಹಾದ್‌’ ತಡೆಗೆ ಕಾಯ್ದೆ ತರುವ ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆಸಲಾಗುವುದು ಎಂದು ಮೂಲಗಳು ಹೇಳಿವೆ.

ಅರುಣ್‌ ಸಿಂಗ್‌ ಅವರು ಕುಮಾರಕೃಪಾ ಅತಿಥಿ ಗೃಹದಲ್ಲಿ ವಾಸ್ತವ್ಯ ಹೂಡಿದ್ದಾರೆ. ಶನಿವಾರ ಬೆಳಿಗ್ಗೆ ಕಾರ್ಯಕರ್ತರು ಮತ್ತು ಪ್ರಮುಖ ನಾಯಕರನ್ನು ಭೇಟಿ ಮಾಡುವ ಸಾಧ್ಯತೆ ಇದೆ.

ಮಧ್ಯಾಹ್ನ 12 ಗಂಟೆಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಜತೆಗೆ ಹೆಲಿಕಾಪ್ಟರ್‌ನಲ್ಲಿ ಶಿವಮೊಗ್ಗಕ್ಕೆ ತೆರಳಲಿದ್ದಾರೆ. ಶನಿವಾರ ರಾತ್ರಿ 8 ಕ್ಕೆ ಪ್ರಮುಖರ ಸಮಿತಿ ಸಭೆ ನಡೆಯಲಿದೆ. ಭಾನುವಾರ ಬೆಳಿಗ್ಗೆ 10.30 ರಿಂದ ಸಂಜೆ 4.30 ರವರೆಗೆ ಪಕ್ಷದ ರಾಜ್ಯ ವಿಶೇಷ ಸಭೆಯಲ್ಲಿ ಭಾಗವಹಿಸಲಿದ್ದಾರೆ.

ರಾಜ್ಯ ಘಟಕದ ಅಧ್ಯಕ್ಷ ನಳಿನ್‌ ಕುಮಾರ್ ಕಟೀಲ್, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ರಾಜ್ಯ ಸಹ ಉಸ್ತುವಾರಿ ಡಿ.ಕೆ.ಅರುಣಾ, ಕೇಂದ್ರ ಸಚಿವರಾದ ಪ್ರಲ್ಹಾದ ಜೋಶಿ, ಡಿ.ವಿ. ಸದಾನಂದ ಗೌಡ ಸೇರಿ ಪ್ರಮುಖರು ಭಾಗವಹಿಸಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.