ADVERTISEMENT

ಶೀಘ್ರ ಸಂಪುಟ ವಿಸ್ತರಣೆ ಭರವಸೆ: ಯಡಿಯೂರಪ್ಪ ನಿವಾಸದಲ್ಲಿ ಗರಿಗೆದರಿದ ರಾಜಕೀಯ

​ಪ್ರಜಾವಾಣಿ ವಾರ್ತೆ
Published 10 ಡಿಸೆಂಬರ್ 2019, 7:18 IST
Last Updated 10 ಡಿಸೆಂಬರ್ 2019, 7:18 IST
ಬಿ.ಎಸ್.ಯಡಿಯೂರಪ್ಪ (ಸಂಗ್ರಹ ಚಿತ್ರ)
ಬಿ.ಎಸ್.ಯಡಿಯೂರಪ್ಪ (ಸಂಗ್ರಹ ಚಿತ್ರ)   

ಬೆಂಗಳೂರು:ಮಂಡ್ಯ ಜಿಲ್ಲೆಯಲ್ಲಿ ಮೊದಲ ಬಾರಿಗೆ ಬಿಜೆಪಿ ಬಾವುಟ ಹಾರಿದೆ. ಮುಂದಿನ ದಿನಗಳಲ್ಲಿ ಇನ್ನೂ ಎರಡು ಕ್ಷೇತ್ರದಲ್ಲಿ ಬಿಜೆಪಿ ಗೆಲ್ಲಲಿದೆ ಎಂದು ಕೆ.ಆರ್.ಪೇಟೆ ಶಾಸಕ ನಾರಾಯಣಗೌಡ ಮಂಗಳವಾರ ಹೇಳಿದರು.

ಡಾಲರ್ಸ್‌ ಕಾಲೊನಿಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ ನಂತರಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು,ಯಡಿಯೂರಪ್ಪ ಜನ್ಮಭೂಮಿಯಲ್ಲಿ ಬಿಜೆಪಿ ಪಾರುಪಾತ್ಯ ಸ್ಥಾಪಿಸಲಿದೆ. ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ನನ್ನ ಸೋಲಿಸಲು ಇನ್ನಿಲ್ಲದ ಕಸರತ್ತು ಮಾಡಿ ಈಗ ಸುಮ್ಮನಾಗಿದ್ದಾರೆ ಎಂದು ತಿಳಿಸಿದರು.

ಒಂದೆರೆಡು ದಿನಗಳಲ್ಲಿ ಸಂಪುಟ ವಿಸ್ತರಣೆ: ಯಡಿಯೂರಪ್ಪ

ADVERTISEMENT

ಉಪಚುನಾವಣೆಯಲ್ಲಿ ಗೆದ್ದ ಎಲ್ಲರಿಗೂ ಸಚಿವ ಸ್ಥಾನ ನೀಡುತ್ತೇವೆ. ಅವರಿಂದಲೇ ಈ ಸರ್ಕಾರ ಮುಂದುವರೆಯಲು ಅವಕಾಶವಾಗಿದೆ. ಒಂದೆರಡು ದಿನಗಳಲ್ಲಿ ಸಂಪುಟ ವಿಸ್ತರಣೆ ಮಾಡಿ ನಾನು ಕೊಟ್ಟ ಮಾತು ಉಳಿಸಿಕೊಳ್ಳುತ್ತೇನೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದರು.

ಯಾವ ಖಾತೆ ನೀಡಿದರೂ ಸರಿ: ಭೈರತಿ

ಕೆ.ಆರ್.ಪುರಂ ಕ್ಷೇತ್ರದ ಜನತೆ ದಾಖಲೆ ಅಂತರದಲ್ಲಿ ನನಗೆ ಗೆಲುವು ನೀಡಿದ್ದಾರೆ. ನನಗೆ ಸಚಿವ ಸ್ಥಾನ ಸಿಗುವುದು ಖಚಿತ.‌ ಯಾವ ಖಾತೆ ನೀಡಬೇಕೆಂಬುದು ಮುಖ್ಯಮಂತ್ರಿ ಗಳ ವಿವೇಚನೆಗೆ ಬಿಟ್ಟಿದ್ದು. ಕ್ಷೇತ್ರದ ಅಭಿವೃದ್ಧಿ ದೃಷ್ಟಿಯಿಂದ ಯಾವ ಜವಾಬ್ದಾರಿ ನೀಡಿದರೂ ಸಮರ್ಥವಾಗಿ ನಿಬಾಯಿಸುತ್ತೇನೆ ಎಂದು ಕೆ.ಆರ್.ಪುರಂ ಶಾಸಕ ಭೈರತಿ ಬಸವರಾಜು ಹೇಳಿದರು.

ಬಚ್ಚೇಗೌಡ ವಿರುದ್ಧ ಸಿಎಂಗೆ ಎಂಟಿಬಿ ದೂರು?

ಹೊಸಕೋಟೆ ಕ್ಷೇತ್ರದಲ್ಲಿ ಸೋತ ನಂತರ ಮೊದಲ ಬಾರಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿಯಾದ ಎಂಟಿಬಿ ನಾಗರಾಜ್,ಸೋಲಿನ ಕಾರಣಗಳನ್ನು ವಿವರಿಸಿದರು. ಸಂಸದ ಬಚ್ಚೇಗೌಡ ವಿರುದ್ಧ ದೂರಿದರು ಎನ್ನಲಾಗಿದೆ.

ಮುಖ್ಯಮಂತ್ರಿ ನಿವಾಸದಿಂದ ಹಿಂದಿರುಗುವಾಗ ಮಾಧ್ಯಮ ಪ್ರತಿನಿಧಿಗಳೊಂದಿಗೆ ಎಂಟಿಬಿ ಮಾತನಾಡಲಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.