ADVERTISEMENT

ವೆಚ್ಚದ ಬಿಸಿ, ಹುದ್ದೆ ಕಡಿತ?: ಸಮಗ್ರ ವರದಿಗಾಗಿ ಸಂಪುಟ ಉಪಸಮಿತಿ ರಚನೆ

​ಪ್ರಜಾವಾಣಿ ವಾರ್ತೆ
Published 17 ಫೆಬ್ರುವರಿ 2020, 23:05 IST
Last Updated 17 ಫೆಬ್ರುವರಿ 2020, 23:05 IST
   

ಬೆಂಗಳೂರು: ಆಯವ್ಯಯದ ಶೇ 70 ರಷ್ಟು ಸಂಪನ್ಮೂಲ ನೌಕರರ ವೇತನಕ್ಕೆ ಬಳಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಹೊರೆ ತಗ್ಗಿಸಲು ವಿವಿಧ ಇಲಾಖೆಗಳಲ್ಲಿರುವ ಅನಗತ್ಯ ಹುದ್ದೆಗಳನ್ನು ಕಡಿತಗೊಳಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ.

ಈ ಸಂಬಂಧ ಸಮಗ್ರ ವರದಿ ಪಡೆಯಲು ಸೋಮವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಸಂಪುಟ ಉಪಸಮಿತಿಯನ್ನು ರಚಿಸಲಾಗಿದೆ.

ಸರ್ಕಾರಕ್ಕೆ ಬರುತ್ತಿರುವ ಆದಾಯದಲ್ಲಿ ಬಹುಪಾಲು ನೌಕರರ ವೇತನಕ್ಕೇ ವ್ಯಯವಾಗುತ್ತಿದೆ. ಮುಂಬರುವ ದಿನಗಳಲ್ಲಿ ಈ ವೆಚ್ಚದ ಗಾತ್ರ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಆದ್ದರಿಂದ, ಯಾವ ಇಲಾಖೆಗಳಲ್ಲಿ ಹೆಚ್ಚುವರಿ ಹುದ್ದೆಗಳಿವೆ, ಯಾವ ಇಲಾಖೆಗಳಲ್ಲಿ ಹುದ್ದೆಗಳನ್ನು ವಿಲೀನ ಮಾಡಬಹುದು ಎಂಬುದನ್ನು ಉಪಸಮಿತಿ ಅಧ್ಯಯನ ನಡೆಸಿ ವರದಿ ನೀಡಲಿದೆ.

ADVERTISEMENT

ರಾಜ್ಯ ಸರ್ಕಾರ ತೀವ್ರ ಹಣಕಾಸಿನ ಮುಗ್ಗಟ್ಟು ಅನುಭವಿಸುತ್ತಿದ್ದು, ಹಲವು ಯೋಜನೆಗಳಿಗೆ ಹಣಕಾಸು ಹೊಂದಿಸಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ ಅನಗತ್ಯ ವೆಚ್ಚಕ್ಕೆ ಕಡಿವಾಣ ಹಾಕಲು ಹುದ್ದೆಗಳ ಕಡಿತಕ್ಕೆ ಸರ್ಕಾರ ಮುಂದಾಗಿದೆ. ಕೆಲವು ಇಲಾಖೆಗಳನ್ನು ವಿಲೀನಗೊಳಿಸಿ, ಸಿಬ್ಬಂದಿ ಕಡಿಮೆ ಮಾಡಲಾಗುವುದು. ಉಳಿಯುವ ಸಿಬ್ಬಂದಿ ಹೆಚ್ಚಿನ ಹೊರೆ ತೆಗೆದುಕೊಳ್ಳಬೇಕಾಗುತ್ತದೆ.

ನೈಸ್‌ ಭೂಮಿ ವಶಕ್ಕೆ ಉಪಸಮಿತಿ
ನೈಸ್‌ ಕಂಪನಿಗೆ ಸೇರಿದ 370 ಎಕರೆ ಭೂಮಿ ವಶಕ್ಕೆ ತೆಗೆದುಕೊಳ್ಳುವುದೂ ಸೇರಿ ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ವರದಿ ಪಡೆಯಲು ಸಂಪುಟ ಉಪಸಮಿತಿಯನ್ನು ರಚಿಸಲಾಗಿದೆ.

₹600 ಕೋಟಿ ಮೌಲ್ಯದ ಜಮೀನಿಗೆ ಸಂಬಂಧಿಸಿದಂತೆ ಸರ್ಕಾರ ಮತ್ತು ನೈಸ್‌ ಮಧ್ಯೆ ವ್ಯಾಜ್ಯವಿದೆ. ನಗರದಲ್ಲಿ ಅಭಿವೃದ್ಧಿ ಕಾರ್ಯ ತ್ವರಿತಗೊಳಿಸುವ ಉದ್ದೇಶದಿಂದ ಸಂಪುಟ ಉಪಸಮಿತಿ ರಚಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.