ADVERTISEMENT

195 ತಾಲ್ಲೂಕುಗಳು ಬರ ಪೀಡಿತ; ಸಿಎಂಗೆ ಸಂಪುಟ ಉಪಸಮಿತಿ ಶಿಫಾರಸು –ಕೃಷ್ಣಬೈರೇಗೌಡ

​ಪ್ರಜಾವಾಣಿ ವಾರ್ತೆ
Published 13 ಸೆಪ್ಟೆಂಬರ್ 2023, 15:44 IST
Last Updated 13 ಸೆಪ್ಟೆಂಬರ್ 2023, 15:44 IST
<div class="paragraphs"><p>ಬೆಂಗಳೂರು ಉತ್ತರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೃಷ್ಣ ಬೈರೇಗೌಡ </p></div>

ಬೆಂಗಳೂರು ಉತ್ತರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೃಷ್ಣ ಬೈರೇಗೌಡ

   

–ಪ್ರಜಾವಾಣಿ ಚಿತ್ರ

ಬೆಂಗಳೂರು: ರಾಜ್ಯದಲ್ಲಿ ತೀವ್ರ ಮಳೆ ಕೊರತೆ ಇರುವ 195 ತಾಲ್ಲೂಕುಗಳನ್ನು ಬರ ಪೀಡಿತ ಎಂದು ಘೋಷಣೆ ಮಾಡುವಂತೆ ಮುಖ್ಯಮಂತ್ರಿಯವರಿಗೆ ಶಿಫಾರಸು ಮಾಡಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.

ADVERTISEMENT

ಈ ಕುರಿತ ಸಚಿವ ಸಂಪುಟ ಉಪಸಮಿತಿ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಈ ವಿಷಯ ಹೇಳಿದರು.

ಕಳೆದ ಒಂದು ವಾರದಿಂದ ರಾಜ್ಯದಾದ್ಯಂತ ಬೆಳೆ ಸಮೀಕ್ಷೆ ಮತ್ತು ಬೆಳೆ ಪರಿಶೀಲನೆ ನಡೆಸಲಾಗಿದೆ. ಕೇಂದ್ರದ ಮಾರ್ಗಸೂಚಿಯಂತೆ 161 ತಾಲ್ಲೂಕುಗಳು ಬರ ಘೋಷಣೆಗೆ ಅರ್ಹವಾಗಿವೆ. ಇದಲ್ಲದೇ 34 ತಾಲ್ಲೂಕುಗಳಲ್ಲೂ ಪರಿಸ್ಥಿತಿ ಚಿಂತಾಜನಕವಾಗಿದ್ದು, ಕೇಂದ್ರದ ಮಾರ್ಗಸೂಚಿ ಅನ್ವಯಿಸದಿದ್ದರೂ ಈ ತಾಲ್ಲೂಕುಗಳನ್ನು ಸಹ ಪಟ್ಟಿಗೆ ಸೇರಿಸಲಾಗಿದೆ. ಈ ಕುರಿತು ಕೇಂದ್ರಕ್ಕೆ ಮನವಿ ಸಲ್ಲಿಸಲು ಸಿದ್ಧತೆ ನಡೆಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.

ಕಳೆದ ವಾರ ನಡೆದ ನಾಲ್ಕನೇ ಸಂಪುಟ ಉಪಸಮಿತಿ ಸಭೆಯಲ್ಲಿ 62 ತಾಲ್ಲೂಕುಗಳು ಕೇಂದ್ರ ಮಾರ್ಗಸೂಚಿಯಂತೆ ಬರ ಘೋಷಣೆಗೆ ಅರ್ಹ ಎಂಬ ತೀರ್ಮಾನಕ್ಕೆ ಬರಲಾಗಿತ್ತು. ಆದರೂ ಈ ವರ್ಷ ರಾಜ್ಯದಾದ್ಯಂತ ತೀವ್ರ ಮಳೆ ಕೊರತೆ ಇದ್ದ ಕಾರಣಕ್ಕೆ 134 ತಾಲ್ಲೂಕುಗಳಲ್ಲಿ ಮತ್ತೊಂದು ಸುತ್ತಿನ ಬೆಳೆ ಸಮೀಕ್ಷೆ ಮತ್ತು ಬೆಳೆ ಪರಿಶೀಲನೆಗೆ ಸೂಚಿಸಲಾಗಿತ್ತು ಎಂದು ಕೃಷ್ಣಬೈರೇಗೌಡ ಹೇಳಿದರು.

195 ತಾಲ್ಲೂಕುಗಳಲ್ಲದೇ ಇನ್ನೂ 40 ತಾಲ್ಲೂಕುಗಳಲ್ಲಿ ಭಾಗಶಃ ಬರದ ಸ್ಥಿತಿ ಇದೆ. ಆದರೆ ಈ ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲು ಕೇಂದ್ರದ ಮಾರ್ಗಸೂಚಿ ಅಡ್ಡಿಯಾಗಿದೆ. ಆದ್ದರಿಂದ 15 ದಿನಗಳ ನಂತರ ಉಪಗ್ರಹ ಚಿತ್ರಗಳನ್ನು ಆಧರಿಸಿ ಮತ್ತೊಂದು ಸುತ್ತಿನ ಬೆಳೆ ಸಮೀಕ್ಷೆಗೆ ಸೂಚಿಸಲಾಗುವುದು. ಈ ಸಂದರ್ಭದಲ್ಲಿ ಸಮೀಕ್ಷೆಗೆ ಒಳಪಟ್ಟ ತಾಲ್ಲೂಕುಗಳು ಬರ ಮಾರ್ಗಸೂಚಿಗೆ ಅನ್ವಯಿಸಿದರೆ ಎರಡನೇ ಹಂತದಲ್ಲಿ ಬರ ಘೋಷಣೆ ಮಾಡಲಾಗುವುದು ಎಂದೂ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.