ಸಿದ್ದರಾಮಯ್ಯ , ಮುಖ್ಯಮಂತ್ರಿ
ಬೆಂಗಳೂರು: ಹಿಂದುಳಿದ ವರ್ಗಗಳ ಆಯೋಗ ನಡೆಸುತ್ತಿರುವ ಜಾತಿವಾರು ಸಮೀಕ್ಷೆ ಮತ್ತು ಈ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬೆನ್ನಿಗೆ ನಿಲ್ಲಲು ಕಾಂಗ್ರೆಸ್ ಪಕ್ಷದ ಹಿಂದುಳಿದ ವರ್ಗಗಳ ಸಚಿವರು, ಶಾಸಕರು, ವಿಧಾನಪರಿಷತ್ ಸದಸ್ಯರು, ಹಿಂದುಳಿದ ವರ್ಗಗಳ ಮುಖಂಡರು ಒಕ್ಕೊರಲಿನಿಂದ ನಿರ್ಧರಿಸಿದ್ದಾರೆ.
ರ್ಯಾಡಿಸನ್ ಬ್ಲ್ಯೂ ಹೋಟೆಲ್ನಲ್ಲಿ ಗುರುವಾರ ನಡೆದ ಕಾಂಗ್ರೆಸ್ ಪಕ್ಷದ ಹಿಂದುಳಿದ ವರ್ಗಗಳ ಮುಖಂಡರ ಸಭೆಯ ಬಳಿಕ ಮಾತನಾಡಿದ ಸಣ್ಣ ನೀರಾವರಿ ಸಚಿವ ಎನ್.ಎಸ್. ಬೋಸರಾಜು, ‘ಬಹುಮತದಿಂದ ಈ ನಿರ್ಧಾರ ಕೈಗೊಳ್ಳಲಾಯಿತು’ ಎಂದರು.
‘ಹಿಂದುಳಿದ ಜಾತಿಗಳು ಶಿಕ್ಷಣ, ಉದ್ಯೋಗ, ರಾಜಕೀಯ, ಆರ್ಥಿಕ ಸೌಲಭ್ಯ ಪಡೆಯಲು ಈ ಸಮೀಕ್ಷೆ ಅಗತ್ಯವಾಗಿದೆ. ಹೀಗಾಗಿ, ಹಿಂದುಳಿದ ವರ್ಗಗಳ ಜನರು ಸಮೀಕ್ಷೆಯಲ್ಲಿ ಸಕ್ರಿಯವಾಗಿ ಭಾಗವಹಿಸುವಂತೆ ಪ್ರೇರೇಪಿಸಲು ಒಕ್ಕೊರಲಿನಿಂದ ನಿರ್ಧರಿಸಲಾಯಿತು’ ಎಂದರು.
ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯಿಲಿ, ‘ಈ ಸಭೆ ಮೊದಲೇ ಆಗಬೇಕಿತ್ತು. ನಮ್ಮ ದೇಶ ಪ್ರಜಾಪ್ರಭುತ್ವ ಅಡಿಯಲ್ಲಿ ನಡೆಯಬೇಕು. ಹಿಂದುಳಿದ ವರ್ಗಗಳಿಗೆ ಸರಿಯಾದ ಮೀಸಲಾತಿ ಸಿಗಬೇಕು. ಸಾಮಾಜಿಕ, ಶೈಕ್ಷಣಿಕ ಹಕ್ಕು ಕಸಿಯಲು ಯಾರಿಂದಲೂ ಸಾಧ್ಯವಿಲ್ಲ. ಅದನ್ನು ವಿರೋಧಿಸುವ ಕೆಲಸ ಆಗಬಾರದು’ ಎಂದರು.
ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್, ‘ಜನಜಾಗೃತಿಗಾಗಿ ಅಹಿಂದ ನಾಯಕರು ಸಭೆ ಸೇರಿದ್ದೇವೆ. ಪ್ರಣಾಳಿಕೆಯಲ್ಲಿ ಕೊಟ್ಟಿದ್ದ ಆಶ್ವಾಸನೆಯಂತೆ ಸಮೀಕ್ಷೆ ಮಾಡಲು ಹೊರಟಿದ್ದೇವೆ. ಅಹಿಂದ, ಮೀಸಲಾತಿ ವಿರುದ್ಧ ಇರುವವರು ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ’ ಎಂದರು.
ಸಚಿವರಾದ ಸಂತೋಷ್ ಲಾಡ್, ಮಧು ಬಂಗಾರಪ್ಪ, ಬೈರತಿ ಸುರೇಶ್, ಶಾಸಕರಾದ ಎ.ಎಸ್. ಪೊನ್ನಣ್ಣ, ಭೀಮಣ್ಣ ನಾಯ್ಕ್, ಶ್ರೀನಿವಾಸ್, ಪ್ರದೀಪ್ ಈಶ್ವರ್, ಪುಟ್ಟರಂಗ ಶೆಟ್ಟಿ, ಬಸವರಾಜ್ ಶಿವಣ್ಣನವರ್, ಗವಿಯಪ್ಪ, ಪರಿಷತ್ ಸದಸ್ಯರಾದ ಯತೀಂದ್ರ ಸಿದ್ದರಾಮಯ್ಯ, ಉಮಾಶ್ರೀ, ರಮೇಶ್ ಬಾಬು, ತಿಪ್ಪಣ್ಣ ಕಮಕನೂರು, ಮಾಜಿ ಸಭಾಪತಿ ವಿ.ಆರ್. ಸುದರ್ಶನ್, ಹಿಂದುಳಿದ ವರ್ಗಗಳ ನಾಯಕರು ಸಭೆಯಲ್ಲಿದ್ದರು.
197 ಹಿಂದುಳಿದ ಜಾತಿಗಳ ಅಂಕಿಅಂಶಗಳು ಗೊತ್ತಾಗಬೇಕಿದೆ. ಯಾರು ಎಷ್ಟು ಹಿಂದುಳಿದಿದ್ದಾರೆ ಎಂದು ತಿಳಿಯಲು ಈ ಸಮೀಕ್ಷೆ ಅಗತ್ಯವಾಗಿದೆಬಿ.ಕೆ. ಹರಿಪ್ರಸಾದ್, ವಿಧಾನ ಪರಿಷತ್ ಸದಸ್ಯ
ಹಲವು ವಿಚಾರಗಳ ಬಗ್ಗೆ ಸಭೆಯಲ್ಲಿ ಚರ್ಚಿಸಿದ್ದೇವೆ. ಸಮೀಕ್ಷೆಯ ಕುರಿತು ಸಮುದಾಯಗಳಿಗೆ ಹಿಂದುಳಿದ ವರ್ಗಗಳ ಸಚಿವರು ಜಾಗೃತಿ ಮೂಡಿಸಬೇಕುವೀರಪ್ಪ ಮೊಯಿಲಿ, ಮಾಜಿ ಮುಖ್ಯಮಂತ್ರಿ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.