ADVERTISEMENT

ಶರತ್ ವರ್ಗಾವಣೆ: ಆದೇಶ ಕಾಯ್ದಿರಿಸಿದ ಸಿಎಟಿ

​ಪ್ರಜಾವಾಣಿ ವಾರ್ತೆ
Published 23 ಡಿಸೆಂಬರ್ 2020, 19:10 IST
Last Updated 23 ಡಿಸೆಂಬರ್ 2020, 19:10 IST
ಹೈಕೋರ್ಟ್
ಹೈಕೋರ್ಟ್   

ಬೆಂಗಳೂರು: ಮೈಸೂರು ಜಿಲ್ಲಾಧಿಕಾರಿ ಹುದ್ದೆಯಿಂದ ಬಿ. ಶರತ್ ಅವರನ್ನು ಅವಧಿ ಪೂರ್ವ ವರ್ಗಾವಣೆ ಮಾಡಿರುವ ಸರ್ಕಾರದ ಕ್ರಮ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಪೂರ್ಣಗೊಳಿಸಿರುವ ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿ (ಸಿಎಟಿ) ಅಂತಿಮ ಆದೇಶ ಕಾಯ್ದಿರಿಸಿದೆ.

‘ಕನಿಷ್ಠ ಎರಡು ವರ್ಷ ಪೂರ್ಣಗೊಳ್ಳುವ ಮುನ್ನ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಬಾರದು ಎಂದು ಸುಪ್ರೀಂ ಕೋರ್ಟ್ ಆದೇಶವಿದೆ. ಈ ಆದೇಶದಂತೆ ರಾಜ್ಯ ಸರ್ಕಾರ ಮಂಡಳಿ ರಚನೆ ಮಾಡಿತ್ತು. ಆದರೆ, ಪ್ರಸ್ತುತ ಮಂಡಳಿ ಕಾರ್ಯನಿರ್ವಹಿಸುತ್ತಿಲ್ಲ. ಹೀಗಾಗಿ, ಆಡಳಿತದ ಮುಖ್ಯಸ್ಥರ ವಿವೇಚನಾ ಅಧಿಕಾರ ಬಳಸಿ ಶರತ್ ಅವರನ್ನು ವರ್ಗಾವಣೆ ಮಾಡಲಾಗಿದೆ. ಈ ಪ್ರಕ್ರಿಯೆಯಲ್ಲಿ ಯಾವುದೇ ನಿಯಮ ಉಲ್ಲಂಘನೆಯಾಗಿಲ್ಲ’ ‌ಎಂದು ಅಡ್ವೋಕೇಟ್ ಜನರಲ್ ಪ್ರಭುಲಿಂಗ ನಾವಡಗಿ ವಾದ ಮಂಡಿಸಿದರು.

‘2013ರಲ್ಲಿ ಐಎಎಸ್ ಅಧಿಕಾರಿಯಾಗಿರುವ ಅರ್ಜಿದಾರರನ್ನು ಈವರೆಗೂ ಐದು ಬಾರಿ ವರ್ಗಾವಣೆ ಮಾಡಲಾಗಿದೆ. ಇದು ಸುಪ್ರೀಂ ಕೋರ್ಟ್ ಆದೇಶದ ಉಲ್ಲಂಘನೆ. ಸರ್ಕಾರದ ಆದೇಶ ರದ್ದು ಮಾಡಬೇಕು’ ಎಂದು ಅರ್ಜಿದಾರರ ಪರ ವಕೀಲರು ಕೋರಿದರು. ವಾದ-ಪ್ರತಿವಾದ ಆಲಿಸಿದ ನ್ಯಾಯಮಂಡಳಿ ಅಂತಿಮ ಆದೇಶ ಕಾಯ್ದಿರಿಸಿತು.

ADVERTISEMENT

ಆಗಸ್ಟ್‌ 28ರಂದು ಮೈಸೂರು ಜಿಲ್ಲಾಧಿಕಾರಿ ಹುದ್ದೆಗೆ ನಿಯೋಜಿಸಿ ಸರ್ಕಾರ ಆದೇಶ ಹೊರಡಿಸಿತ್ತು. ನಂತರ ಸೂಕ್ತ ಕಾರಣ ನೀಡದೆ ಸೆ.28ರಂದು ವರ್ಗಾವಣೆ ಮಾಡಿತ್ತು. ಇದನ್ನು ಪ್ರಶ್ನಿಸಿ ಶರತ್ ಸಿಎಟಿ ಮೊರೆ ಹೋಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.