ADVERTISEMENT

ಕಾವೇರಿ ಆರತಿ: 10 ಸಾವಿರ ಜನ ವೀಕ್ಷಣೆಗೆ ವ್ಯವಸ್ಥೆ: ಡಿ.ಕೆ. ಶಿವಕುಮಾರ್‌

ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಮಾಹಿತಿ

​ಪ್ರಜಾವಾಣಿ ವಾರ್ತೆ
Published 3 ಮೇ 2025, 15:58 IST
Last Updated 3 ಮೇ 2025, 15:58 IST
<div class="paragraphs"><p>ಡಿ.ಕೆ ಶಿವಕುಮಾರ್‌</p></div>

ಡಿ.ಕೆ ಶಿವಕುಮಾರ್‌

   

ಫೇಸ್‌ಬುಕ್‌ ಚಿತ್ರ

ಬೆಂಗಳೂರು: ದಸರಾ ಹಬ್ಬದ ಜತೆಗೇ ಕೆಆರ್‌ಎಸ್‌ ಜಲಾಶಯದಲ್ಲಿ ಕಾವೇರಿ ಆರತಿ ಕಾರ್ಯಕ್ರಮ ಆಯೋಜಿಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಹೇಳಿದರು.

ADVERTISEMENT

ಪೂರ್ವಸಿದ್ಧತಾ ಸಭೆಯ ನಂತರ ಸುದ್ದಿಗಾರರ ಜತೆ ಮಾತನಾಡಿದ ಅವರು, ಕರ್ನಾಟಕದ ಸಂಸ್ಕೃತಿ, ತಮಿಳುನಾಡು ಹಾಗೂ ಕೇರಳ ಸಂಪ್ರದಾಯಗಳನ್ನು ಒಳಗೊಂಡಂತೆ ಕಾರ್ಯಕ್ರಮ ಆಯೋಜಿಸಲು ಚರ್ಚೆ ನಡೆದಿದೆ. ಸುಮಾರು 10 ಸಾವಿರ ಜನ ಈ ಕಾರ್ಯಕ್ರಮವನ್ನು ವೀಕ್ಷಣೆ ಮಾಡುವಂತೆ ಯೋಜನೆ ರೂಪಿಸಲಾಗುತ್ತಿದೆ. ಮಳೆಯಿಂದ ರಕ್ಷಣೆ, ಕಲಾವಿದರು, ಪೂಜೆ ನೆರವೇರಿಸುವರಿಗೆ ಸ್ಥಳಾವಕಾಶ ಸೇರಿದಂತೆ ಎಲ್ಲಾದಕ್ಕೂ ನೀಲನಕ್ಷೆ ರೂಪಿಸುವಂತೆ ಸಮಿತಿಗೆ ಸೂಚಿಸಲಾಗಿದೆ. ಕಾವೇರಿ ನದಿ ಕುರಿತು ಸಂಗೀತ ಕಾರ್ಯಕ್ರಮ ನೀಡುವವರಿಗೂ ಅವಕಾಶ ಕಲ್ಪಿಸಲಾಗುವುದು ಎಂದರು.

ಕಾರ್ಯಕ್ರಮದ ಉಸ್ತುವಾರಿಗಾಗಿ ಬೆಂಗಳೂರು ಜಲಮಂಡಳಿ ಅಧ್ಯಕ್ಷ ರಾಮ್‌ ಪ್ರಸಾತ್‌ ಮನೋಹರ್‌ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ. ಧಾರ್ಮಿಕ ದತ್ತಿ ಇಲಾಖೆ, ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳು ಸಹಯೋಗ ನೀಡಲಿವೆ. ನಾಲ್ಕು ಗ್ರಾಮ ಪಂಚಾಯ್ತಿಗಳನ್ನು ಸೇರಿಸಿ ಯೋಜನಾ ಪ್ರಾಧಿಕಾರ ಮಾಡಲು ತೀರ್ಮಾನಿಸಲಾಗಿದೆ. ನೀರಾವರಿ ಇಲಾಖೆಯಿಂದ ₹100 ಕೋಟಿ ಹಣ ಮೀಸಲಿಡಲಾಗಿದೆ ಎಂದರು.

ಭದ್ರತಾ ದೃಷ್ಟಿಯಿಂದ ವೇದಿಕೆಯನ್ನು ಅಣೆಕಟ್ಟಿನಿಂದ ಸ್ವಲ್ಪ ದೂರವೇ ಮಾಡುತ್ತಿದ್ದೇವೆ. ಇದರ ಜವಾಬ್ದಾರಿಯನ್ನು ತಾಂತ್ರಿಕ ಸಮಿತಿಗೆ ವಹಿಸಲಾಗಿದೆ. ಸದಾ ನೀರು ಹರಿಯುವ ಜಾಗದಲ್ಲಿ ಮಾಡಬೇಕಿದೆ. ಬೆಂಗಳೂರಿಗೆ ನೀರು ಹರಿಯುವ ಒಂದು ಜಾಗವನ್ನು ಗುರುತಿಸಲಾಗಿದೆ. ಆರತಿಗಾಗಿ ನಿರ್ಮಿಸಲಾಗುವ ವೇದಿಕೆಯು ನಾಲ್ಕು ದಿಕ್ಕಿನಲ್ಲೂ ಕಾಣುವಂತೆ ವ್ಯವಸ್ಥೆ ಮಾಡಲಾಗುವುದು. ಸಾರ್ವಜನಿಕರಿಗೂ ಪೂಜೆ ಸಲ್ಲಿಸುವ ಅವಕಾಶ ಕಲ್ಪಿಸಲಾಗುವುದು ಎಂದು ಮಾಹಿತಿ ನೀಡಿದರು.

ಈ ಕಾರ್ಯಕ್ರಮಕ್ಕಾಗಿ ಪ್ರತ್ಯೇಕವಾದ ಮೂಲಸೌಕರ್ಯವನ್ನು ಹೊಸದಾಗಿ ಕಲ್ಪಿಸಲಾಗುತ್ತಿದೆ. ಭದ್ರತೆ, ಸಂಚಾರಿ ವ್ಯವಸ್ಥೆ, ವಾಹನ ನಿಲುಗಡೆಗೆ ಅವಕಾಶ ಕಲ್ಪಿಸಬೇಕು. ಸಾಂಸ್ಕೃತಿಕ ಹಾಗೂ ಧಾರ್ಮಿಕ ತಂಡಗಳಿಗೆ ಎಲ್ಲಾ ರೀತಿಯ ಸೌಕರ್ಯ ಒದಗಿಸಲಾಗುವುದು. ಅದಕ್ಕಾಗಿ ಅಧಿಕ ವೆಚ್ಚವಾಗಲಿದೆ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.