ತೋರಣಗಲ್ನ ಜಿಂದಾಲ್ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ
ಬಳ್ಳಾರಿ: ಕರ್ನಾಟಕ ಮತ್ತು ತಮಿಳುನಾಡು ನಡುವೆ ಕಾವೇರಿ ನೀರು ಹಂಚಿಕೆ ಬಿಕ್ಕಟ್ಟಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಮಧ್ಯೆ ಪ್ರವೇಶಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.
ಆಲಮಟ್ಟಿ ಜಲಾಶಯಕ್ಕೆ ಬಾಗಿನ ಅರ್ಪಿಸಲು ಹೋಗುವ ದಾರಿಯಲ್ಲಿ ಇಲ್ಲಿನ ತೋರಣಗಲ್ನ ಜಿಂದಾಲ್ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಆರ್ಎಸ್ನಲ್ಲಿ 113 ಅಡಿ ನೀರು ಬಂದಿದೆ. ಹಾರಂಗಿ ಕಬಿನಿಯಲ್ಲಿ ನೀರು ಬರಬೇಕಿತ್ತು. ಆದರೆ ಮಳೆ ಕೊರತೆಯಿಂದ ನೀರಿನ ಕೊರತೆ ಕಾಡಿದೆ. ಮೇಕೆದಾಟು ವಿಚಾರವಾಗಿ ತಮಿಳುನಾಡು ಸರ್ಕಾರ ಅನಗತ್ಯ ವಿರೋಧ ವ್ಯಕ್ತಪಡಿಸುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.
105 ತಾಲೂಕುಗಳಲ್ಲಿ ಶೀಘ್ರ ಬರ ಘೋಷಣೆ...
ಸೆಪ್ಟೆಂಬರ್ 4ರಂದು ಸಚಿವ ಸಂಪುಟದ ಉಪ ಸಮಿತಿ ಸಭೆ ನಡೆಯಲಿದೆ. ಒಟ್ಟು 114 ತಾಲೂಕುಗಳಲ್ಲಿ ಜಂಟಿ ಸಮೀಕ್ಷೆ ಆಗಿದೆ. 105 ತಾಲೂಕುಗಳಲ್ಲಿ ಬರ ಘೋಷಣೆ ಮಾಡಲಾಗುವುದು. ನಂತರ 73 ತಾಲೂಕುಗಳ ಘೋಷಣೆಗೆ ಸೇರ್ಪಡೆ ಮಾಡಲಾಗುವುದು ಎಂದು ಅವರು ಹೇಳಿದ್ದಾರೆ.
ಒಂದು ದೇಶ ಒಂದು ಚುನಾವಣೆ ಜಾರಿ ಕಷ್ಟ: ಸಿದ್ದರಾಮಯ್ಯ
ಒಂದು ದೇಶ ಒಂದು ಚುನಾವಣೆ ಜಾರಿ ಎಲ್ಲ ರಾಜ್ಯಗಳಿಗೆ ಕಷ್ಟ ಆಗಲಿದೆ ಎನ್ನುವುದು ನನ್ನ ವೈಯಕ್ತಿಕ ವಿಚಾರ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ವಿಧಾನಸಭೆ ಸೇರಿದಂತೆ ಸ್ಥಳೀಯ ಚುನಾವಣೆಗಳನ್ನು ನಡೆಸುವುದು ಸುಲಭವಲ್ಲ. ಮಾಜಿ ರಾಷ್ಟ್ರಪತಿ ಕೋವಿಂದ್ ಅವರ ನೇತೃತ್ವದ ಸಮಿತಿ ವರದಿ ನೀಡಲಿ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.