ಬೆಂಗಳೂರು: ಮಾಜಿ ಸಚಿವ ರಮೇಶ ಜಾರಕಿಹೊಳಿ ಅವರ ಸಿಡಿ ಪ್ರಕರಣದ ಸಂತ್ರಸ್ತ ಯುವತಿಯು ರಕ್ಷಣೆ ಕೋರಿ ವಿಡಿಯೊ ಬಿಡುಗಡೆ ಮಾಡುತ್ತಿದ್ದಂತೆ, ರಾಜ್ಯ ಮಹಿಳಾ ಆಯೋಗವು ಶನಿವಾರ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದೆ.
‘ಪ್ರಕರಣದಿಂದ ಮಾನಹಾನಿಯಾಗಿದ್ದು, ಹಲವು ಬಾರಿ ಆತ್ಮಹತ್ಯೆಗೂ ಪ್ರಯತ್ನಿಸಿದ್ದೇನೆ. ನನಗೆ ರಕ್ಷಣೆ ಒದಗಿಸಬೇಕು’ ಎಂದು ಯುವತಿ ವಿಡಿಯೊದಲ್ಲಿ ಹೇಳಿಕೊಂಡಿದ್ದಾರೆ.
‘ಯುವತಿಯು ಭಯಗೊಂಡಿರುವುದು ಮತ್ತು ಆತಂಕದಲ್ಲಿರುವುದು ಅವರ ಹೇಳಿಕೆಯಿಂದ ಸ್ಪಷ್ಟವಾಗುತ್ತಿದೆ. ಅವರಿಗೆ ರಕ್ಷಣೆ ಒದಗಿಸುವುದು ಸರ್ಕಾರದ ಜವಾಬ್ದಾರಿ. ಈ ನಿಟ್ಟಿನಲ್ಲಿ ನಾವು ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದ್ದೇವೆ. ಗೃಹ ಸಚಿವರು ಮತ್ತು ನಗರ ಪೊಲೀಸ್ ಕಮಿಷನರ್ ಕಮಲ್ ಪಂತ್ ಸೇರಿದಂತೆ ಸಂಬಂಧಪಟ್ಟ ಎಲ್ಲರಿಗೂ ಈ ಬಗ್ಗೆ ಆಯೋಗದಿಂದ ಪತ್ರ ಬರೆಯಲಾಗುವುದು. ಯುವತಿಗೆ ರಕ್ಷಣೆ ಒದಗಿಸಬೇಕು ಎಂದು ಕೋರಲಾಗುವುದು’ ಎಂದು ಆಯೋಗದ ಅಧ್ಯಕ್ಷ ಪ್ರಮೀಳಾ ನಾಯ್ಡು ‘ಪ್ರಜಾವಾಣಿ’ಗೆ ತಿಳಿಸಿದರು.
‘ಯಾವುದೇ ಸಮಸ್ಯೆಗೆ ಆತ್ಮಹತ್ಯೆಯೇ ಪರಿಹಾರವಲ್ಲ. ಯುವತಿ ಎದೆಗುಂದಬಾರದು. ಧೈರ್ಯದಿಂದ ಸವಾಲು ಎದುರಿಸಬೇಕು’ ಎಂದೂ ಅವರು ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.