ADVERTISEMENT

ಬಿಜೆಪಿ ದೀನ–ದಲಿತರ ಪರ ಎಂಬುದು ಸಾಬೀತು: ಪ್ರಲ್ಹಾದ ಜೋಶಿ

ಎಸ್‌ಸಿ, ಎಸ್‌ಟಿ ಮೀಸಲಾತಿ ಹೆಚ್ಚಳಕ್ಕೆ ಕೇಂದ್ರ ಸಚಿವ ಪ್ರತಿಕ್ರಿಯೆ

​ಪ್ರಜಾವಾಣಿ ವಾರ್ತೆ
Published 9 ಅಕ್ಟೋಬರ್ 2022, 8:37 IST
Last Updated 9 ಅಕ್ಟೋಬರ್ 2022, 8:37 IST
   

ಹುಬ್ಬಳ್ಳಿ: ‘ಎಸ್‌ಸಿ ಮತ್ತು ಎಸ್‌ಟಿ ಸಮುದಾಯಗಳಿಗೆ ರಾಜ್ಯ ಸರ್ಕಾರ ಮೀಸಲಾತಿ ಹೆಚ್ಚಳ ಮಾಡಿರುವುದು ಐತಿಹಾಸಿಕ. ಕಾಂಗ್ರೆಸ್ ದಲಿತರನ್ನು ಕೇವಲ ವೋಟ್ ಬ್ಯಾಂಕ್‌ಗಳೆಂದು ತಿಳಿದುಕೊಂಡಿತ್ತು. ಹಿಂದುಳಿದದವರ ಕಲ್ಯಾಣವನ್ನು ಸಹ ಮಾಡಲಿಲ್ಲ. ಇದೇ ಕಾರಣಕ್ಕೆ ದಲಿತರ ಸ್ಥಿತಿ ಇಂದಿಗೂ ಹೀನಾಯವಾಗಿದೆ’ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು.

ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಮೀಸಲಾತಿ ಪ್ರಮಾಣವನ್ನು ಹೆಚ್ಚಿಸುವುದರೊಂದಿಗೆ, ಬಿಜೆಪಿ ದೀನ–ದಲಿತರ ಹಾಗೂ ಬಡವರ ಪರವಾದ ಪಕ್ಷ ಎಂದು ಸಾಬೀತು ಮಾಡಿದೆ. ಇದಕ್ಕೆ ಕಾರಣವಾದ ಮುಖ್ಯಮಂತ್ರಿ, ಸಚಿವರು ಹಾಗೂ ಸ್ವಾಮೀಜಿಗಳಿಗೆ ಅಭಿನಂದನೆ ಸಲ್ಲಿಸುತ್ತೇನೆ’ ಎಂದರು.

‘ಪಂಚಮಸಾಲಿ ಸೇರಿದಂತೆ ಅನೇಕ ಸಮುದಾಯಗಳು ಮೀಸಲಾತಿಗಾಗಿ ಹೋರಾಟ ಮಾಡುತ್ತಿವೆ. ಈ ಬಗ್ಗೆಯೂ ಮುಖ್ಯಮಂತ್ರಿ ಸರಿಯಾದ ನಿರ್ಧಾರ ತೆಗೆದುಕೊಳ್ಳುತ್ತಾರೆ. ಅವರು ಕೊಟ್ಟಿರುವ ಭರವಸೆಯನ್ನು ಈಡೇರಿಸುತ್ತಾರೆ ಎಂಬ ನಂಬಿಕೆ ಇದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ADVERTISEMENT

‘ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಅಪ್ರಯೋಜಕ ಎಂದು ಬಿಂಬಿಸುವ ಅವಶ್ಯಕತೆ ಬಿಜೆಪಿಗಿಲ್ಲ. ಜನರೇ ರಾಹುಲ್ ಅವರು ನಿಷ್ಪ್ರಯೋಜಕ ಎಂದು ತೀರ್ಮಾನಿಸಿದ್ದಾರೆ.ಹೀಗಾಗಿಯೇ ದೇಶದಾದ್ಯಂತ ಕಾಂಗ್ರೆಸ್ ನೆಲ ಕಚ್ಚಿದೆ. ಭಾರತ ಜೋಡೋ ಯಾತ್ರೆಯಿಂದ ರಾಹುಲ್ ಗಾಂಧಿ ಮತ್ತು ಸಿದ್ದರಾಮಯ್ಯ ಅವರ ಆರೋಗ್ಯ ಸುಧಾರಿಸಬಹುದೇ ಹೊರತು, ಅವರ ಪಕ್ಷಕ್ಕೆ ಯಾವುದೇ ಲಾಭವಿಲ್ಲ’ ಎಂದರು.

ಶಾಸಕ ಜಗದೀಶ ಶೆಟ್ಟರ್ ಮಾತನಾಡಿ, ‘ಮೀಸಲಾತಿ ಹೆಚ್ಚಳದೊಂದಿಗೆ, ದಲಿತ ಸಮುದಾಯದ ಬಹುದಿನಗಳ ಬೇಡಿಕೆ ಈಡೇರಿದೆ. ನ್ಯಾ. ನಾಗಮೋಹನ‌ದಾಸ್ ವರದಿಯಂತೆ ಮೀಸಲಾತಿ ಏರಿಕೆ ಮಾಡಿ, ಆ ಸಮುದಾಯಕ್ಕೆ ನ್ಯಾಯ ಒದಗಿಸಲಾಗಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.