ಹುಬ್ಬಳ್ಳಿ: ‘ಎಸ್ಡಿಪಿಐ, ಪಿಎಫ್ಐ ಸಂಘಟನೆಗಳು ಕಾಂಗ್ರೆಸ್ ಸಾಕಿದ ಕೂಸುಗಳು. ಅವುಗಳ ನಿಷೇಧಕ್ಕೆ ಕೇಂದ್ರ, ರಾಜ್ಯ ಸರ್ಕಾರಗಳು ಪರಿಶೀಲಿಸಿ ಕ್ರಮ ಕೈಗೊಳ್ಳಲಿವೆ’ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕೇರಳ ಮತ್ತು ಕರ್ನಾಟಕದಲ್ಲಿ ಎಸ್ಡಿಪಿಐ ಮತ್ತು ಪಿಎಫ್ಐ ಸಂಘಟನೆಗಳ ಕಾರ್ಯಕರ್ತರು ಭಾರತದ ವಿರುದ್ಧ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ. ಪ್ರಚೋದನಾತ್ಮಕ ಘೋಷಣೆ ಕೂಗುತ್ತ ಸಮಾಜದಲ್ಲಿ ಶಾಂತಿ ಕದಡುತ್ತಿದ್ದಾರೆ. ನಿಷೇಧಿತ ಸಿಮಿ ಸಂಘಟನೆಯ ಹಿಂದಿನ ಸ್ವರೂಪವೇ ಇವರಾಗಿದ್ದು, ಈ ಸಂಘಟನೆಗಳ ಹೆಸರಲ್ಲಿ ಬಂದಿದ್ದಾರೆ. ರಾಜ್ಯ ಮತ್ತು ಕೇಂದ್ರ ಸರ್ಕಾರ ಕಾನೂನಾತ್ಮಕವಾಗಿ ಪರಿಶೀಲಿಸಿ ಕ್ರಮ ಕೈಗೊಳ್ಳಲಿವೆ’ ಎಂದರು.
‘ಸಿದ್ದರಾಮಯ್ಯ ಅವರಿಗೆ ಸರಿಯಾದ ಮೂಲ ಸ್ಥಾನವಿಲ್ಲ, ಹೀಗಿದ್ದಾಗ ಆರ್ಎಸ್ಎಸ್ ಮೂಲ ಕೆದುಕುತ್ತಾರೆ. ಮೂಲ ಜಾಗದಿಂದಲೇ ಅವರನ್ನು ಓಡಿಸಿದ್ದಾರೆ. ಅದನ್ನೆಲ್ಲ ಅವರು ಈಗ ಮರೆತಿದ್ದಾರೆ. ತುಷ್ಟೀಕರಣ ರಾಜಕಾರಣ ಮಾಡುತ್ತಾರೆ, ಎಸ್ಡಿಪಿಐ ಮತ್ತು ಪಿಎಫ್ಐ ಸಂಘಟನೆಗೆ ಸದಾ ಕುಮ್ಮಕ್ಕು ನೀಡುತ್ತಾ ಬಂದಿದ್ದಾರೆ. ಕರ್ನಾಟಕದಲ್ಲಿ ಕಾಂಗ್ರೆಸ್, ಕೇರಳದಲ್ಲಿ ಕಮ್ಯುನಿಸ್ಟ್ ಈ ನಡೆ ಅನುಸರಿಸುತ್ತಿವೆ. ಇದರಿಂದಾಗಿ ಜನರೇ ಅವರನ್ನು ಸೋಲಿಸುತ್ತಿದ್ದಾರೆ’ ಎಂದು ವ್ಯಂಗ್ಯವಾಡಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.