ಹುಬ್ಬಳ್ಳಿ: ಮುಖ್ಯಮಂತ್ರಿ ಸ್ಥಾನದಿಂದ ಬಸವರಾಜ ಬೊಮ್ಮಾಯಿ ಅವರನ್ನು ಕೆಳಗಿಸುವ ಯಾವ ಪ್ರಸ್ತಾವವೂ ಪಕ್ಷದ ವರಿಷ್ಠರ ಮುಂದಿಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು.
ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಕೆ.ಎಸ್. ಈಶ್ವರಪ್ಪ ಅವರು ಮುರುಗೇಶ ನಿರಾಣಿ ಈಗಲೇ ಮುಖ್ಯಮಂತ್ರಿ ಆಗುತ್ತಾರೆ ಎಂದು ಹೇಳಿಲ್ಲ. ಅಲ್ಲದೆ, ಮುಖ್ಯಮಂತ್ರಿ ಬದಲಾವಣೆ ಎನ್ನುವುದು ಸಹ ಊಹಾಪೋಹ. ಅಂತಹ ಹೇಳಿಕೆಗಳನ್ನು ಯಾರೂ ನೀಡಬಾರದು ಎಂದು ಈಗಾಗಲೇ ವರಿಷ್ಠರು ರಾಜ್ಯದ ಮುಖಂಡರಿಗೆ ಸೂಚನೆ ನೀಡಿದ್ದಾರೆ ಎಂದರು.
ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದು ರಾಜಕೀಯ ವಿಷಯವಾಗಿ ಅಲ್ಲ. ಆ ಕುರಿತು ಇಬ್ಬರೂ ಯಾವ ಹೇಳಿಕೆಯನ್ನೂ ನೀಡಿಲ್ಲ. ಜೆಡಿಎಸ್ ಮೈತ್ರಿ ಕುರಿತು ಮುಖ್ಯಮಂತ್ರಿ ನೀಡಿರುವ ಹೇಳಿಕೆ ನನಗೆ ಗೊತ್ತಿಲ್ಲ. ನನ್ನ ವೈಯಕ್ತಿಕ ಅಭಿಪ್ರಾಯವನ್ನು ಕೋರ್ ಕಮಿಟಿಯಲ್ಲಿ ತಿಳಿಸುತ್ತೇನೆ ಎಂದು ಹೇಳಿದರು.
ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆ ಅಡಿ ರೈತರಿಂದ ಬೆಳೆ ವಿಮೆ ತುಂಬಿಸಿಕೊಳ್ಳುವ ಕಂಪನಿಗಳು ವಂಚನೆ ಮಾಡುತ್ತಿರುವ ಕುರಿತು ದೂರುಗಳಿವೆ. ಅಂತಹ ಕಂಪನಿಗಳನ್ನು ಕಪ್ಪು ಪಟ್ಟಿಗೆ ಹಾಕುವ ಅಧಿಕಾರ ರಾಜ್ಯ ಸರ್ಕಾರಕ್ಕೆ ಇದೆ ಎಂದು ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.