ಕಲಬುರ್ಗಿ: ‘ಏಕರೂಪದ ಶಿಕ್ಷಣ ವ್ಯವಸ್ಥೆ ಜಾರಿಗೊಳಿಸುವ ನಿಟ್ಟಿನಲ್ಲಿ ಉತ್ಸಾಹದಿಂದ ಕಾರ್ಯೋನ್ಮುಖವಾಗಿರುವ ಕೇಂದ್ರ ಸರ್ಕಾರವು ಭಾರತದ ಬಹುಭಾಷಿಕ ಸೊಗಡನ್ನು ಗೌರವಿಸಲಿ. ಆ ನಿಟ್ಟಿನಲ್ಲಿ ಕ್ರಮಗಳನ್ನು ಕೈಗೊಳ್ಳಲಿ’ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರೊ.ಎಸ್.ಜಿ.ಸಿದ್ದರಾಮಯ್ಯ ಆಗ್ರಹಿಸಿದರು.
ನಗರದಲ್ಲಿ ಭಾನುವಾರ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ಪರೀಕ್ಷೆ ಕನ್ನಡದಲ್ಲಿಬರೆದು ಉತ್ತಮ ಅಂಕ ಗಳಿಸಿದ ಕಲಬುರ್ಗಿ ವಿಭಾಗದ ವಿದ್ಯಾರ್ಥಿಗಳಿಗೆ ಕನ್ನಡ ಭಾಷಾ ಮಾಧ್ಯಮ ಪ್ರಶಸ್ತಿ ವಿತರಿಸಿ ಅವರು ಮಾತನಾಡಿದರು.
‘ಕೇಂದ್ರ ಸರ್ಕಾರವು ಏಕರೂಪ ಶಿಕ್ಷಣದ ವರದಿಯನ್ನು ಪ್ರಕಟಿಸಿದ್ದು, ಅದಕ್ಕೆ ಜುಲೈ 31ರೊಳಗೆ ಪ್ರತಿಕ್ರಿಯೆ ನೀಡಲು ಸೂಚಿಸಿದೆ. ಕೇಂದ್ರ ಸರ್ಕಾರವು ಸ್ಥಳೀಯ ಭಾಷೆಯಲ್ಲಿಯೂ ಶಿಕ್ಷಣ ನೀಡುವ ಬೇಡಿಕೆ ಬಗ್ಗೆ ಸಕಾರಾತ್ಮಕವಾಗಿ ಸ್ಪಂದಿಸಬೇಕು. ಹಾಗಾಗಿ, ಪ್ರತಿಕ್ರಿಯೆ ನೀಡಲು ಕೊಟ್ಟ ಗಡುವನ್ನು ಇನ್ನಷ್ಟು ವಿಸ್ತರಿಸಬೇಕು’ ಎಂದರು.
‘ವಲಸೆ ಸ್ವಾಗತಾರ್ಹ. ಆದರೆ, ಅದು ಅತಿಕ್ರಮಣವಾಗಬಾರದು. ಕೊಡು–ಕೊಳ್ಳುವಿಕೆಯ ಸೌಹಾರ್ದದಂತೆ ಇದು ನಡೆಯಬೇಕು’ ಎಂದರು.‘ರಾಷ್ಟ್ರಮಟ್ಟದ ಪರೀಕ್ಷೆಗಳನ್ನು ಕನ್ನಡ ಭಾಷೆಯಲ್ಲಿಯೂ ಬರೆಯಲು ಕೇಂದ್ರ ಸರ್ಕಾರ ಅವಕಾಶ ನೀಡುವ ಮೂಲಕ ಪ್ರಾದೇಶಿಕ ಭಾಷೆ ಮಾತನಾಡುವವರ ಬಗ್ಗೆ ಸಹಾನುಭೂತಿ ತೋರಬೇಕು’ ಎಂದು ಅವರು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.