ಬೆಂಗಳೂರು: ಇದೇ ತಿಂಗಳ 30 ಮತ್ತು 31ರಂದು ನಡೆಯಲಿರುವ ಸಾಮಾನ್ಯ ಪ್ರವೇಶ ಪರೀಕ್ಷೆಗೆ (ಸಿಇಟಿ) ಹೊರರಾಜ್ಯ ಮತ್ತು ಹೊರ ದೇಶದಿಂದ ಬರುವ ವಿದ್ಯಾರ್ಥಿಗಳಿಗೆ ಕ್ವಾರಂಟೈನ್ನಿಂದ ವಿನಾಯಿತಿ ನೀಡಲಾಗಿದೆ.
ಕೋವಿಡ್ 19 ಹಿನ್ನೆಲೆಯಲ್ಲಿ ಪರೀಕ್ಷೆಯನ್ನು ಕಟ್ಟುನಿಟ್ಟಾಗಿ ನಡೆಸುವ ಕುರಿತಂತೆ ವಿವರವಾದ ಕಾರ್ಯಾಚರಣಾ ವಿಧಾನವನ್ನು (ಎಸ್ಓಪಿ) ಆರೋಗ್ಯ ಇಲಾಖೆ ಸೋಮವಾರ ಪ್ರಕಟಿಸಿದೆ.
ಹೊರರಾಜ್ಯ– ದೇಶದ ವಿದ್ಯಾರ್ಥಿಗಳು ಮತ್ತು ಅವರ ಜೊತೆಗಿರುವ ಸಹಾಯಕರ ಬಗ್ಗೆ ಸೂಕ್ತ ಮುನ್ನೆಚ್ಚರಿಕೆ ವಹಿಸಿ, ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಬೇಕು. ಈ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೊಠಡಿ ವ್ಯವಸ್ಥೆ ಮಾಡಬೇಕು ಎಂದು ಇಲಾಖೆ ಸೂಚಿಸಿದೆ.
ಉಳಿದಂತೆ, ಪರೀಕ್ಷೆಗೆ ಹಾಜರಾಗುವ ಎಲ್ಲ ವಿದ್ಯಾರ್ಥಿಗಳು ಮಾಸ್ಕ್ ಧರಿಸುವುದು ಕಡ್ಡಾಯ. ಪರಿವೀಕ್ಷಕರು ಮತ್ತು ಮೇಲ್ವಿಚಾರಕರಿಗೆ ಕೈಗವಸು ಮತ್ತು ವೈದ್ಯಕೀಯ ಮಾಸ್ಕ್ ಒದಗಿಸಬೇಕು. ಯಾವುದೇ ಪರೀಕ್ಷಾ ಕೇಂದ್ರ ಕಂಟೈನ್ಮೆಂಟ್ ಪ್ರದೇಶದಲ್ಲಿ ಇರಬಾರದು. ಅಲ್ಲದೆ, ಕೇಂದ್ರವನ್ನು ಮೂರು ದಿನಗಳ ಮೊದಲು ಸೋಂಕು ನಿವಾರಕ ಸಿಂಪಡಿಸಿ ಸ್ವಚ್ಛಗೊಳಿಸಬೇಕು. ಪರೀಕ್ಷೆ ಬರೆಯಲು ಬರುವ ವಿದ್ಯಾರ್ಥಿಗಳು ಮತ್ತು ಅವರ ಪೋಷಕರು ಗುಂಪುಗೂಡಲು ಅವಕಾಶ ನೀಡಬಾರದು.
ನೆಗಡಿ, ಜ್ವರ, ಗಂಟಲು ಕೆರೆತದಿಂದ ಬಳಲುತ್ತಿರುವ ಅಥವಾ ಕಂಟೈನ್ಮೆಂಟ್ ವಲಯದಿಂದ ಬರುವ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಪ್ರತ್ಯೇಕ ಕೊಠಡಿ ಕಾದಿರಿಸಬೇಕು. ಪ್ರತಿ ಕೊಠಡಿಯಲ್ಲಿ ಗರಿಷ್ಠ 24 ವಿದ್ಯಾರ್ಥಿಗಳಿರಬೇಕು ಎಂದೂ ಆರೋಗ್ಯ ಇಲಾಖೆ ಹೇಳಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.