ADVERTISEMENT

ಸಿಇಟಿ: 28ಕ್ಕೆ ‘ಸೀಟು ಹಂಚಿಕೆ ಮಂಥನ’

​ಪ್ರಜಾವಾಣಿ ವಾರ್ತೆ
Published 25 ಜೂನ್ 2025, 15:50 IST
Last Updated 25 ಜೂನ್ 2025, 15:50 IST
   

ಬೆಂಗಳೂರು: ಪ್ರಸಕ್ತ ವರ್ಷದ ಸಿಇಟಿ ಅಭ್ಯರ್ಥಿಗಳು ಹಾಗೂ ಪೋಷಕರಿಗೆ ಸೀಟು ಹಂಚಿಕೆ ವಿಧಾನದ ಬಗ್ಗೆ ಸ್ಪಷ್ಟವಾದ ಮಾಹಿತಿ ನೀಡಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಜೂನ್‌ 28ರಂದು ರಾಜ್ಯದ ಎಲ್ಲ ಸರ್ಕಾರಿ ಎಂಜಿನಿಯರಿಂಗ್‌ ಕಾಲೇಜುಗಳಲ್ಲಿ ‘ಸೀಟು ಹಂಚಿಕೆ ಮಂಥನ' ಕಾರ್ಯಾಗಾರ ಆಯೋಜಿಸಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್‌ ಹೇಳಿದರು.

ಸುದ್ದಿಗಾರರ ಜತೆ ಮಾತನಾಡಿದ ಅವರು, ರಾಜ್ಯದ 16 ಸರ್ಕಾರಿ ಎಂಜಿನಿಯರಿಂಗ್‌ ಕಾಲೇಜು, 8 ಅನುದಾನಿತ, 6 ವಿಟಿಯು ಸಂಯೋಜಿತ ಎಂಜಿನಿಯರಿಂಗ್‌ ಕಾಲೇಜುಗಳು ಹಾಗೂ 9 ಜಿಲ್ಲೆಗಳ ಸರ್ಕಾರಿ ಪಾಲಿಟೆಕ್ನಿಕ್‌ ಕಾಲೇಜುಗಳಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪೋಷಕರು, ವಿದ್ಯಾರ್ಥಿಗಳ ಅನುಮಾನಗಳಿಗೆ ಪರಿಹಾರ ಲಭಿಸಲಿದೆ ಎಂದರು. 

ಸರ್ಕಾರಿ ಎಂಜಿನಿಯರಿಂಗ್‌ ಕಾಲೇಜುಗಳು ಇಲ್ಲದ ಚಿಕ್ಕಮಗಳೂರು, ಹುಬ್ಬಳ್ಳಿ (ಧಾರವಾಡ ಜಿಲ್ಲೆ),
ಕೆ.ಜಿ.ಎಫ್ (ಕೋಲಾರ), ಮಂಗಳೂರು, ಶಿವಮೊಗ್ಗ, ತುಮಕೂರು, ಉಡುಪಿ, ವಿಜಯಪುರ, ಸುರಪುರ (ಯಾದಗಿರಿ) ಸರ್ಕಾರಿ ಪಾಲಿಟೆಕ್ನಿಕ್‌ ಕಾಲೇಜುಗಳಲ್ಲಿ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ ಎಂದು ವಿವರ ನೀಡಿದರು.

ಕೌನ್ಸೆಲಿಂಗ್‌ ಹೇಗೆ ನಡೆಯುತ್ತದೆ? ಕಾಲೇಜು ಆಯ್ಕೆ ಹೇಗೆ? ಆಪ್ಷನ್‌ ಎಂಟ್ರಿ ಯಾವ ರೀತಿ ಮಾಡಬೇಕು? ಇಂತಹ ಪ್ರಶ್ನೆಗಳಿಗೆ ಉತ್ತರ ದೊರೆಯಲಿದೆ. ಮಧ್ಯವರ್ತಿಗಳ ಹಾವಳಿ ತಪ್ಪಿಸಲು, ಮೋಸದ ಜಾಲಗಳನ್ನು ನಿಯಂತ್ರಿಸಲು ಪೋಷಕರು ಹಾಗೂ ವಿದ್ಯಾರ್ಥಿ ಸಮುದಾಯದಕ್ಕೆ ಸ್ಪಷ್ಟ ಹಾಗೂ ನಿಖರ ಮಾಹಿತಿ ನೀಡುವ ಅಗತ್ಯವಿದೆ. ಈ ಕಾರಣಕ್ಕೆ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು. 

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.