ಸಿದ್ದರಾಮಯ್ಯ
(ಪಿಟಿಐ ಚಿತ್ರ)
ಮೋದಿ ಅವರು ಪ್ರಧಾನಿಯಾದ ಬಳಿಕ ರಚಿಸಲಾದ 15ನೇ ಹಣಕಾಸು ಆಯೋಗದಲ್ಲಿ ರಾಜ್ಯಕ್ಕೆ ತೀವ್ರ ಅನ್ಯಾಯ ಆಯಿತು. ದಕ್ಷಿಣ ಭಾರತದ ರಾಜ್ಯಗಳು ಉತ್ತರ ಭಾರತದ ರಾಜ್ಯಗಳಿಗಿಂತ ಪರಿಣಾಮಕಾರಿಯಾಗಿ ಜನಸಂಖ್ಯೆ ನಿಯಂತ್ರಣ ಮಾಡಿದವು. ಚಿನ್ನದ ಮೊಟ್ಟೆ ಇಡುವ ಕೋಳಿಯನ್ನೇ ಕೊಂದು ಹಾಕಬೇಡಿ. ಹಾಲು ಕೊಡುವ ಕೆಚ್ಚಲು ಕತ್ತರಿಸಬೇಡಿ ಎಂದು ಒತ್ತಾಯಿಸಲು ನಾವು ಪ್ರತಿಭಟನೆ ನಡೆಸಿದ್ದೇವೆ ಎಂದು ಸಿದ್ದರಾಮಯ್ಯ ಹೇಳಿದರು.
ಸಿ.ಎಂ. ಹೇಳಿದ್ದೇನು?
*15ನೇ ಹಣಕಾಸು ಆಯೋಗದಿಂದಾಗಿ ತೆರಿಗೆಯೊಂದರಲ್ಲೇ ರಾಜ್ಯಕ್ಕೆ ₹62,098 ಅನ್ಯಾಯವಾಗಿದೆ. ಇದನ್ನು ನಾವು ಪ್ರಶ್ನಿಸಬಾರದೇ? ಆದರೆ, ಬಿಜೆಪಿಯವರು ನಿರಂತರ ಸುಳ್ಳುಗಳ ಮೂಲಕ ತಮ್ಮ ದ್ರೋಹ ಮರೆಮಾಚಲು ನೋಡುತ್ತಿದ್ದಾರೆ
*ಕೇಂದ್ರದ ಬಜೆಟ್ ಗಾತ್ರ ಹೆಚ್ಚಾದ ಹಾಗೆ ರಾಜ್ಯದ ತೆರಿಗೆ ಪಾಲು ಹೆಚ್ಚಾಗಬೇಕಿತ್ತು. ಆದರೆ, ಈ ಪ್ರಮಾಣದಲ್ಲೂ ನಮಗೆ ಹಂಚಿಕೆ ಆಗಿಲ್ಲ. ಇದನ್ನು ಕೇಂದ್ರದ ಅಂಕಿ ಅಂಶಗಳೇ ಹೇಳುತ್ತಿವೆ. ಕೇಂದ್ರದ ಬಜೆಟ್ ಗಾತ್ರ ದುಪ್ಪಟ್ಟಾಗಿದೆ. ಆದರೆ, ರಾಜ್ಯದ ಪಾಲಿನ ತೆರಿಗೆ ಪಾಲು ಅರ್ಧಕ್ಕಿಂತ ಕಡಿಮೆ ಆಗಿದೆ. ನಮ್ಮ ಪಾಲು ದುಪ್ಪಟ್ಟಾಗಬೇಕಾದ ಜಾಗದಲ್ಲಿ ಅರ್ಧಕ್ಕಿಂತ ಕಡಿಮೆ ಆಗಿರುವುದು ಅನ್ಯಾಯ ಅಲ್ಲವೇ?
*ಕೇಂದ್ರದ ನಿರಂತರ ದ್ರೋಹ ಹಾಗೂ ವಂಚನೆಯಿಂದ ರಾಜ್ಯದ ತೆರಿಗೆ ಸಂಗ್ರಹ ಪ್ರಮಾಣ ಶೇ 15ರಿಂದ ಕೆಳಗೆ ಜಾರಿ ಶೇ 9ಕ್ಕೆ ಕುಸಿದಿದೆ. ಈ ದೊಡ್ಡ ಕುಸಿತಕ್ಕೆ ಕೇಂದ್ರದ ಮಲತಾಯಿ ಧೋರಣೆ ಮತ್ತು ವಂಚನೆಯೇ ಕಾರಣ
*ರಾಜ್ಯದಿಂದ ಆಯ್ಕೆಯಾಗಿರುವ ಬಿಜೆಪಿ ಸಂಸದರು ಕೋಲೆ ಬಸವನ ರೀತಿಯಲ್ಲಿ ಮೋದಿ ಅವರ ಎದುರಿಗೆ ತಲೆ ಅಲ್ಲಾಡಿಸುವುದು ಬಿಟ್ಟರೆ ರಾಜ್ಯದ ಪಾಲನ್ನು ಬಾಯಿ ಬಿಟ್ಟು ಕೇಳಲೇ ಇಲ್ಲ
*ರಾಜ್ಯಕ್ಕೆ ಆಗಿರುವ ಅನ್ಯಾಯ ಸರಿಪಡಿಸಲು ವಿಶೇಷ ಅನುದಾನವಾಗಿ ₹11,495 ಕೋಟಿ ಕೊಡಲಾಗುವುದು ಎಂದು ಕೇಂದ್ರ ಪ್ರಕಟಿಸಿತು. ಆದರೆ, ಈ ಹಣ ಕೊಡಬೇಡಿ ಎಂದು ತಡೆ ಹಿಡಿದವರೇ ನಿರ್ಮಲಾ ಸೀತಾರಾಮನ್. ಆದರೆ, ಈಗೇಕೆ ಸುಳ್ಳು ಹೇಳುತ್ತಿದ್ದೀರಿ ನಿರ್ಮಲಾ ಮೇಡಂ
*ರಾಜ್ಯಕ್ಕೆ ಭೀಕರ ಬರಗಾಲ ಬಂತು. ರಾಜ್ಯದ ಪಾಲಿನ ಬರ ಪರಿಹಾರ ಕೊಡಿ ಎಂದು ಸೆಪ್ಟೆಂಬರ್ನಿಂದ ಒತ್ತಾಯಿಸುತ್ತಲೇ ಇದ್ದೇವೆ. ಆದರೆ, ಇದುವರೆಗೂ ಒಂದೇ ಒಂದು ರೂಪಾಯಿ ಬರ ಪರಿಹಾರ ಕೊಟ್ಟಿಲ್ಲ
*ರಾಯಚೂರಿಗೆ ಏಮ್ಸ್ ಕೊಡುತ್ತೇವೆ ಎಂದು ಭರವಸೆ ನೀಡಿದರು. ಮುಖ್ಯಮಂತ್ರಿಯಾದ ಬಳಿಕ ನಾನು ಮೂರು ಬಾರಿ ಪತ್ರ ಬರೆದೆ. ಆದರೆ, ಇವತ್ತಿನವರೆಗೂ ಏಮ್ಸ್ ಮಂಜೂರಾಗಲಿಲ್ಲ. ಪತ್ರಗಳಿಗೆ ಉತ್ತರವೂ ಬರಲಿಲ್ಲ
*ಇಷ್ಟೆಲ್ಲಾ ರಾಜ್ಯದ ಜನರಿಗೆ ದ್ರೋಹ ಮಾಡಿ ಈಗ ನಮ್ಮ ಗ್ಯಾರಂಟಿ ಯೋಜನೆಗಳನ್ನು ‘ಬಿಟ್ಟಿಭಾಗ್ಯ’ ಎನ್ನುತ್ತಿದ್ದಾರೆ. ಬಡವರು, ಮಧ್ಯಮ ವರ್ಗದವರಿಗೆ ನೆರವು ನೀಡುವುದು ಬಿಟ್ಟಿಭಾಗ್ಯವೇ
* ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು ಈಗ ಪ್ರಧಾನಿ ನರೇಂದ್ರ ಮೋದಿ ಅವರನ್ನು ಹೊಗಳುತ್ತಾ ಕುಳಿತಿದ್ದಾರೆ. ಹಾಗಿದ್ದರೆ, ಮೇಕೆದಾಟು, ಕೃಷ್ಣ ಮೇಲ್ದಂಡೆ ಹಾಗೂ ಮಹದಾಯಿ ಯೋಜನೆಗೆ ಅವರು ಅನುಮತಿ ಕೊಡಿಸಲಿ. ರಾಜ್ಯದ ಪಾಲಿನ ಹಣ ಕೊಡಿಸಲಿ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.