ADVERTISEMENT

ಕೋವಿಡ್ ಲಸಿಕೆ ಬಗ್ಗೆ ಟೀಕಿಸುವ ಸಿದ್ದರಾಮಯ್ಯ ಅವರಿಗೆ ಜನರೇ ಉತ್ತರಿಸಬೇಕು: ಸಿಎಂ

​ಪ್ರಜಾವಾಣಿ ವಾರ್ತೆ
Published 22 ಅಕ್ಟೋಬರ್ 2021, 6:08 IST
Last Updated 22 ಅಕ್ಟೋಬರ್ 2021, 6:08 IST
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ   

ಹುಬ್ಬಳ್ಳಿ: ಕೋವಿಡ್ ಲಸಿಕೆ ಬಗ್ಗೆ ಟೀಕೆ ಮಾಡುವ ಸಿದ್ದರಾಮಯ್ಯ ಅವರಿಗೆ 100 ಕೋಟಿ ಡೋಸ್‌ ಲಸಿಕೆ ಪಡೆದ ಜನರೇ ಎದ್ದುನಿಂತು ಉತ್ತರ ಹೇಳಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದರು.

ನಗರದಲ್ಲಿ ಶುಕ್ರವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು ಲಸಿಕೆ ಎಂಬುದೇ ಸುಳ್ಳು ಎಂದು ಸಿದ್ದರಾಮಯ್ಯ ಅಪಪ್ರಚಾರ ಮಾಡುತ್ತಿದ್ದಾರೆ. ಅಷ್ಟೊಂದು ಜನಕ್ಕೆ ಲಸಿಕೆ ಕೊಟ್ಟೇ ಇಲ್ಲ ಎನ್ನುತ್ತಿದ್ದಾರೆ. ಇಂಥ ಪ್ರಶ್ನೆಗಳು ಬರುತ್ತವೆ ಎನ್ನುವ ಕಾರಣಕ್ಕಾಗಿಯೇ ಲಸಿಕೆ ಪಡೆದವರ ಮಾಹಿತಿ ಸಂಗ್ರಹಿಸಲಾಗಿದೆ. ಆಧಾರ್‌ ಸಂಖ್ಯೆಯನ್ನು ಅದಕ್ಕೆ ಜೋಡಿಸಲಾಗಿದೆ. ವೈಜ್ಞಾನಿಕವಾಗಿ ದಾಖಲೆ ನೋಂದಣೆ ಮಾಡಿಯೇ ಲಸಿಕೆ ನೀಡಲಾಗಿದೆ. 100 ಕೋಟಿ ಡೋಸ್‌ ಲಸಿಕೆ ಕೊಟ್ಟಿದ್ದು ನಿಜ. ಅವರ ಆರೋಪದಲ್ಲಿ ಏನೂ ನಿಜವಿಲ್ಲ ಎಂದರು.

ಹಾನಗಲ್‌ ಹಾಗೂ ಸಿಂದಗಿ ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿಯವರು ಚೀಲದಲ್ಲಿ ಹಣ ಹೊತ್ತು ತಂದಿದ್ದಾರೆ ಎನ್ನುವ ಕಾಂಗ್ರೆಸ್‌ ಆರೋಪದ ಕುರಿತು ಪ್ರತಿಕ್ರಿಯಿಸಿ ‘ಕುಂದಗೋಳ ಸೇರಿದಂತೆ ಹಿಂದಿನ ಉಪಚುನಾವಣೆಗಳಲ್ಲಿ ಕಾಂಗ್ರೆಸ್‌ನವರು ಏನು ಮಾಡಿದ್ದಾರೆ ಎನ್ನುವುದು ಎಲ್ಲರಿಗೂ ಗೊತ್ತಿದೆ. ವಿರೋಧ ಪಕ್ಷದಲ್ಲಿದ್ದಾಗ ಸಿದ್ದರಾಮಯ್ಯ ಸೇರಿದಂತೆ ಹಲವರು ಈ ರೀತಿ ಹೇಳುವುದು ರೆಡಿಮೇಡ್‌ ಕಾಮನ್‌ ಡೈಲಾಗ್‌’ ಎಂದು ಜರಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.