ಬೆಂಗಳೂರು: ಕೆ.ಸಿ. ವ್ಯಾಲಿ ಯೋಜನೆಯಡಿ ಬೆಂಗಳೂರು ನಗರದಿಂದ 400 ಎಂ ಎಲ್ ಡಿ ಸಂಸ್ಕರಿಸಿದ ನೀರನ್ನು ಕೋಲಾರ ಜಿಲ್ಲೆಗೆ ಒದಗಿಸಬೇಕಾಗಿದೆ. ಆದರೆ ಪ್ರಸ್ತುತ ಕೇವಲ 284 ಎಂ ಎಲ್ ಡಿ ನೀರು ಮಾತ್ರ ಲಭ್ಯವಿದೆ. ಮಳೆ ನೀರು ಸಾಕಷ್ಟು ಪ್ರಮಾಣದಲ್ಲಿ ಒಳಚರಂಡಿ ಸೇರದೆ, ಸಂಸ್ಕರಣೆಗೆ ಲಭ್ಯವಾಗುತ್ತಿಲ್ಲ. ಹೀಗಾಗಿ ಹೆಚ್ಚಿನ ನೀರು ಲಭ್ಯವಾಗಿಸಲು ಬೆಂಗಳೂರು ಜಲ ಮಂಡಳಿಯು ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.
ಎಸ್ಟಿಪಿಗಳ ಸಾಮರ್ಥ್ಯ ವರ್ಧನೆಗೆ ಸಹ ಕ್ರಮ ಕೈಗೊಳ್ಳುವಂತೆ ಅವರು ಮಂಗಳವಾರ ಇಲ್ಲಿ ಕೋಲಾರ ಜಿಲ್ಲೆಯ ಜನಪ್ರತಿನಿಧಿಗಳ ನಿಯೋಗದೊಂದಿಗೆ ಚರ್ಚೆ ನಡೆಸುತ್ತಿದ್ದ ವೇಳೆ ಅಧಿಕಾರಿಗಳಿಗೆ ತಿಳಿಸಿದರು.
ಇದೇ ಸಂದರ್ಭದಲ್ಲಿ ಎತ್ತಿನಹೊಳೆ ಯೋಜನೆಯಡಿ ಭೂಸ್ವಾಧೀನ ಪ್ರಕ್ರಿಯೆಯಲ್ಲಿನ ತೊಡಕು ನಿವಾರಿಸಿ, ಕಾಮಗಾರಿ ಚುರುಕುಗೊಳಿಸುವುದಾಗಿ ನಿಯೋಗದ ಸದಸ್ಯರಿಗೆ ಮುಖ್ಯಮಂತ್ರಿಯವರು ಭರವಸೆ ನೀಡಿದರು.
ಸಭೆಯಲ್ಲಿ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ, ಸಣ್ಣ ನೀರಾವರಿ ಹಾಗೂ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ. ಮಾಧುಸ್ವಾಮಿ, ಅಬಕಾರಿ ಹಾಗೂ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವ ಕೆ. ನಾಗೇಶ್, ಲೋಕಸಭಾ ಸದಸ್ಯ ಎಸ್. ಮುನಿಸ್ವಾಮಿ, ಶಾಸಕ ಕೆ.ಆರ್. ರಮೇಶ್ ಕುಮಾರ್ ಹಾಗೂ ಕೋಲಾರ ಜಿಲ್ಲೆಯ ಶಾಸಕರು, ಸರ್ಕಾರದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.