ADVERTISEMENT

ಬೆಳಗಾವಿಗೆ ಬಾರದ ಬಿಎಸ್‌ವೈ: ಆಕ್ರೋಶ

​ಪ್ರಜಾವಾಣಿ ವಾರ್ತೆ
Published 4 ಆಗಸ್ಟ್ 2019, 14:13 IST
Last Updated 4 ಆಗಸ್ಟ್ 2019, 14:13 IST

ಬೆಳಗಾವಿ: ಕೃಷ್ಣಾ ನದಿ ಉಕ್ಕಿ ಹರಿಯುತ್ತಿರುವುದರಿಂದ ಹೆಚ್ಚಿನ ಹಾನಿಯಾಗಿರುವುದು, ಜನರು ಸಂತ್ರಸ್ತರಾಗಿರುವುದು ಜಿಲ್ಲೆಯಲ್ಲಿ. ಆದರೆ, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಆ. 5ರಂದು ಕೈಗೊಳ್ಳಲಿರುವ ನೆರೆಪೀಡಿತ ಪ್ರದೇಶಗಳ ಭೇಟಿ ಪಟ್ಟಿಯಿಂದ ಬೆಳಗಾವಿಯನ್ನು ಪರಿಗಣಿಸದಿರುವುದು ಇಲ್ಲಿನವರ ಆಕ್ರೋಶಕ್ಕೆ ಕಾರಣವಾಗಿದೆ.

ಚಿಕ್ಕೋಡಿ, ರಾಯಬಾಗ, ಅಥಣಿ ತಾಲ್ಲೂಕುಗಳಲ್ಲಿ ಪ್ರವಾಹ ಭೀತಿ ಇದೆ. ಈಗಾಗಲೇ ತೋಟಪಟ್ಟಿಗಳು ಸೇರಿದಂತೆ ಹಲವು ಗ್ರಾಮಗಳಿಗೆ ನೀರು ನುಗ್ಗಿದ್ದರಿಂದ ನೂರಾರು ಮಂದಿಯನ್ನು ಸ್ಥಳಾಂತರಿಸಲಾಗಿದೆ. ಸಾವಿರಾರು ಎಕರೆ ಬೆಳೆ ಹಾನಿಗೊಳಗಾಗಿದೆ. ಇದನ್ನು ಮುಖ್ಯಮಂತ್ರಿ ವೀಕ್ಷಿಸಿ, ಪರಿಹಾರ ಕಲ್ಪಿಸಬೇಕು ಎನ್ನುವುದು ಜನರ ಒತ್ತಾಯವಾಗಿದೆ.

ಭಾನುವಾರ ಬೆಳಿಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ್ದ ಅವರು, ಜಿಲ್ಲೆಗೆ ಭೇಟಿ ನೀಡುವುದಾಗಿ ತಿಳಿಸಿದ್ದರು. ಆದರೆ, ರಾತ್ರಿವರೆಗೂ ಜಿಲ್ಲಾಡಳಿತಕ್ಕೆ ಅಧಿಕೃತ ಮಾಹಿತಿ ಬಂದಿರಲಿಲ್ಲ.

ADVERTISEMENT

ಈ ಬಗ್ಗೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ಡಾ.ಎಸ್.ಬಿ. ಬೊಮ್ಮನಹಳ್ಳಿ, ‘ಮುಖ್ಯಮಂತ್ರಿ ಜಿಲ್ಲಾ ಪ್ರವಾಸದ ಬಗ್ಗೆ ಮಾಹಿತಿ ಬಂದಿಲ್ಲ. ಅಥಣಿ, ಚಿಕ್ಕೋಡಿ, ರಾಯಬಾಗ ಭಾಗದಲ್ಲಿ ಮಳೆಯಾಗುತ್ತಿರುವುದರಿಂದ ಅವರು ಹೆಲಿಕಾಪ್ಟರ್‌ನಲ್ಲಿ ವೀಕ್ಷಿಸುವುದೂ ಸಾಧ್ಯವಾಗುತ್ತಿಲ್ಲ. ನಾಳೆವರೆಗೆ ಹವಾಮಾನ ಸಹಕರಿಸಿದರೆ ಅಥಣಿ ಭಾಗದಲ್ಲಿ ವೀಕ್ಷಣೆ ನಡೆಸಬಹುದು’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.