ADVERTISEMENT

ವಸತಿ ಯೋಜನೆಗಳ ಅನುಷ್ಠಾನ: 3 ತಿಂಗಳೊಳಗೆ ಸಾಲ ಮಂಜೂರಾತಿಗೆ ಯಡಿಯೂರಪ್ಪ ಸೂಚನೆ

​ಪ್ರಜಾವಾಣಿ ವಾರ್ತೆ
Published 11 ಫೆಬ್ರುವರಿ 2021, 6:55 IST
Last Updated 11 ಫೆಬ್ರುವರಿ 2021, 6:55 IST
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ   

ಬೆಂಗಳೂರು: ಪ್ರಧಾನಮಂತ್ರಿ ಆವಾಸ್, ಮುಖ್ಯಮಂತ್ರಿಯವರ ಒಂದು ಲಕ್ಷ‌ ಮನೆ ಸೇರಿದಂತೆ ನಗರ ಪ್ರದೇಶಗಳಲ್ಲಿನ ವಸತಿ ಯೋಜನೆ ಫಲಾನುಭವಿಗಳಿಗೆ ಮೂರು ತಿಂಗಳೊಳಗೆ ಸಾಲ ಮಂಜೂರು ಮಾಡುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪ್ರಮುಖ ಬ್ಯಾಂಕ್‌ಗಳ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಪ್ರಧಾನಮಂತ್ರಿ ಸ್ವನಿಧಿ, ಪ್ರಧಾನಮಂತ್ರಿ ಆವಾಸ್ ಮತ್ತು ಮುಖ್ಯಮಂತ್ರಿಯವರ ಒಂದು ಲಕ್ಷ ಮನೆಗಳ ಪ್ರಗತಿಗೆ ಸಂಬಂಧಿಸಿದಂತೆ ಗುರುವಾರ ವಿಧಾನಸೌಧದಲ್ಲಿ ಸಭೆ ನಡೆಸಿದ ಅವರು, ಮೂರು ತಿಂಗಳೊಳಗೆ ಸಾಲ ಮಂಜೂರು ಮಾಡದಿದ್ದರೆ ಮುಂದಿನ ಕ್ರಮ‌ ಜರುಗಿಸಲಾಗುವುದು ಎಂದು ಎಚ್ಚರಿಸಿದ್ದಾರೆ.

ಸಭೆ ಬಳಿಕ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ವಸತಿ ಸಚಿವ ವಿ. ಸೋಮಣ್ಣ, 'ವಸತಿ ಯೋಜನೆಗಳ ಫಲಾನುಭವಿಗಳಿಗೆ ಸಾಲ‌ ಮಂಜೂರು ಮಾಡಲು ಬ್ಯಾಂಕುಗಳು ಸದಾ ತಕರಾರು ತೆಗೆಯುತ್ತಿದ್ದವು. ಇನ್ನು ಮುಂದೆ ಫಲಾನುಭವಿಯ ಆಧಾರ್ ಕಾರ್ಡ್ ಹಾಗೂ ಹಕ್ಕುಪತ್ರದ ಆಧಾರದಲ್ಲಿ ಸಾಲ‌ ಮಂಜೂರು‌ ಮಾಡುವಂತೆ ಮುಖ್ಯಮಂತ್ರಿ ಬ್ಯಾಂಕ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ' ಎಂದರು.

ADVERTISEMENT

ಇತರ ನಗರ ಪ್ರದೇಶಗಳಲ್ಲಿ ಪ್ರತಿ ಫಲಾನುಭವಿಗೆ ₹2.5 ಲಕ್ಷ ಮತ್ತು ಬೆಂಗಳೂರಿನಲ್ಲಿ ಸ್ವಲ್ಪ ಹೆಚ್ಚು ಮೊತ್ತದ ಸಾಲ‌ ಮಂಜೂರು ಮಾಡುವಂತೆ ಸೂಚನೆ ನೀಡಿದ್ದಾರೆ. ‌ಒಟ್ಟು 3.40 ಲಕ್ಷ‌ ಫಲಾನುಭವಿಗಳಿಗೆ ಸಾಲ ದೊರೆಯಲಿದೆ ಎಂದು ಹೇಳಿದರು.

ಮುಖ್ಯಮಂತ್ರಿ ಒಂದು ಲಕ್ಷ ಮನೆ ಯೋಜನೆಯಲ್ಲಿ ಈಗಾಗಲೇ 53,000 ಮನೆಗಳ ನಿರ್ಮಾಣ ಆರಂಭವಾಗಿದೆ. ಜೂನ್ ನಲ್ಲಿ ಮೊದಲ ಹಂತದಲ್ಲಿ ಫಲಾನುಭವಿಗಳಿಗೆ ಮನೆ ಹಂಚಿಕೆ ಮಾಡಲಾಗುವುದು ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.