ಚಿಕ್ಕಬಳ್ಳಾಪುರ: ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ, ಶಾಸಕ ಡಾ.ಕೆ.ಸುಧಾಕರ್ ಅವರು ಕೂಡ ಮಂಗಳವಾರ ರಾಜೀನಾಮೆ ನೀಡಿ ಅತೃಪ್ತರ ಬಣ ಸೇರುತ್ತಾರೆ ಎಂಬ ವದಂತಿ ದಟ್ಟವಾಗಿದೆ.
ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರ ಆಪ್ತ ಬಳಗಕ್ಕೆ ಸೇರಿದ ಸುಧಾಕರ್ ಅವರು ಕೂಡ ವಿಧಾನಸೌಧದಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಸಭೆಗೆ ಹಾಜರಾಗಿಲ್ಲ ಎಂಬುದು ವದಂತಿಗೆ ಪುಷ್ಟಿ ನೀಡುವಂತಿದೆ.
ಕಳೆದ ನಾಲ್ಕು ದಿನಗಳಿಂದ ಸುಧಾಕರ್ ಅವರು ರಾಜೀನಾಮೆ ನೀಡುತ್ತಾರೆ ಎಂಬ ವದಂತಿ ಹರಿದಾಡುತ್ತಲೇ ಇದೆ. ಆದರೆ ಈ ಕುರಿತು ಸುಧಾಕರ್ ಅವರು ತಮ್ಮ ಸ್ಪಷ್ಟನೆ ನೀಡಿಲ್ಲ. ಬದಲು ಮಾಧ್ಯಮದವರಿಂದ ಅಂತರ ಕಾಯ್ದುಕೊಂಡಿದ್ದಾರೆ.
ಮಂಗಳವಾರ ಕೂಡ ಅವರನ್ನು ಪ್ರತಿಕ್ರಿಯೆಗಾಗಿ ಸಂಪರ್ಕಿಸಲಾಯಿತು. ಆದರೆ ಅವರ ಮೊಬೈಲ್ ಸ್ವಿಚ್ಡ್ಆಫ್ ಆಗಿತ್ತು.
ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದ ಸುಧಾಕರ್ ಅವರು ಸಮ್ಮಿಶ್ರ ಸರ್ಕಾರದ ಆರಂಭದಿಂದಲೂ ಸರ್ಕಾರವನ್ನು ಟೀಕಿಸುತ್ತಲೇ ತಮ್ಮ ಅಸಮಾಧಾನ ಹೊರಹಾಕುತ್ತ ಬಂದಿದ್ದರು.
ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ನೇಮಕ ಮಾಡಲು ನಿರಾಕರಿಸಿದ ಬಳಿಕವಂತೂ ಆಕ್ರೋಶ ಭುಗಿಲೆದ್ದಿತ್ತು. ಇತ್ತೀಚೆಗಷ್ಟೇ ಸುಧಾಕರ್ ಅವರನ್ನು ಮಂಡಳಿಗೆ ಅಧ್ಯಕ್ಷರನ್ನಾಗಿ ನೇಮಿಸುವ ಮೂಲಕ ಮುನಿಸು ತಣಿಸುವ ಕೆಲಸ ಮಾಡಲಾಗಿತ್ತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.