ADVERTISEMENT

ಕಸ್ತೂರಿ ರಂಗನ್ ವರದಿಗೆ ವಿರೋಧ

​ಪ್ರಜಾವಾಣಿ ವಾರ್ತೆ
Published 1 ಡಿಸೆಂಬರ್ 2018, 19:21 IST
Last Updated 1 ಡಿಸೆಂಬರ್ 2018, 19:21 IST
ಬಾಳೆಹೊನ್ನೂರಿನಲ್ಲಿ ಕಸ್ತೂರಿ ರಂಗನ್ ವರದಿ ಜಾರಿ ವಿರೋಧಿಸಿ ಶನಿವಾರ ನಡೆದ ಬಂದ್ ವೇಳೆ ಸಾವಿರಾರು ಜನರು ಮೆರವಣೆಗೆ ನಡೆಸಿದರು. (ಬಾಳೆಹೊನ್ನೂರು ಚಿತ್ರ)
ಬಾಳೆಹೊನ್ನೂರಿನಲ್ಲಿ ಕಸ್ತೂರಿ ರಂಗನ್ ವರದಿ ಜಾರಿ ವಿರೋಧಿಸಿ ಶನಿವಾರ ನಡೆದ ಬಂದ್ ವೇಳೆ ಸಾವಿರಾರು ಜನರು ಮೆರವಣೆಗೆ ನಡೆಸಿದರು. (ಬಾಳೆಹೊನ್ನೂರು ಚಿತ್ರ)   

ಬಾಳೆಹೊನ್ನೂರು (ಚಿಕ್ಕಮಗಳೂರು): ಕಸ್ತೂರಿ ರಂಗನ್ ವರದಿ ಜಾರಿ ವಿರೋಧಿಸಿ ಪಟ್ಟಣದ ‘ಕಸ್ತೂರಿ ರಂಗನ್ ವರದಿ ವಿರೋಧಿ ಸಮಿತಿ’ ಕರೆ ನೀಡಿದ್ದ ಬಂದ್‌ನಿಂದಾಗಿ ಬಾಳೆಹೊನ್ನೂರು ಪಟ್ಟಣದಲ್ಲಿ ಅಂಗಡಿ ಮುಂಗಟ್ಟು ಬಂದ್ ಮಾಡಿ, ಜನರು ಬೀದಿಗೆ ಇಳಿದು ಶನಿವಾರ ಪ್ರತಿಭಟನೆ ನಡೆಸಿದರು.

ಬೆಳಿಗ್ಗೆಯಿಂದ ಮಧ್ಯಾಹ್ನದವರೆಗೂ ಯಾವುದೇ ಅಂಗಡಿ ಮುಂಗಟ್ಟುಗಳು, ಬ್ಯಾಂಕ್, ಪೆಟ್ರೋಲ್ ಬಂಕ್ ತೆರೆಯಲಿಲ್ಲ. ಬಂದ್‌ನಿಂದಾಗಿ ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿತ್ತು. ಖಾಸಗಿ ವಾಹನಗಳ ಸಂಚಾರವೂ ವಿರಳವಾಗಿತ್ತು. ಬಸ್ ಸಂಚಾರ ಎಂದಿನಂತೆ ಇತ್ತು.

ಮಾರ್ಕಂಡೇಶ್ವರ ದೇವಸ್ಥಾನದ ಸಮೀಪದಿಂದ ಮೆರವಣಿಗೆ ಹೊರಟ ಸಾವಿರಾರು ಸಂಖ್ಯೆಯ ಜನರು ರೋಟರಿ ವೃತ್ತದವರೆಗೆ ಸಾಗಿ ಬಸ್ ನಿಲ್ದಾಣದಲ್ಲಿ ಸಭೆ ನಡೆಸಿದರು.

ADVERTISEMENT

ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅದಿಚುಂಚನಗಿರಿ ಶೃಂಗೇರಿ ಶಾಖಾ ಮಠದ ಗುಣನಾಥ ಸ್ವಾಮೀಜಿ, ಕಸ್ತೂರಿ ರಂಗನ್ ವರದಿ ಮಲೆನಾಡನ್ನು ನಾಶ ಮಾಡಲಿದೆ. ವರದಿ ಜಾರಿಯಾಗದಂತೆ ವ್ಯಾಪಕ ಹೋರಾಟ ಮಾಡಬೇಕು ಎಂದರು.
ಪರಿಸರವಾದಿ ವಿಠಲ ಹೆಗ್ಡೆ ಮಾತನಾಡಿ, ಕೊಡಗು ಹಾಗೂ ಕೇರಳದಲ್ಲಿ ಈಚೆಗೆ ಸುರಿದ ಭಾರಿ ಮಳೆಯಿಂದಾಗಿ ಉಂಟಾದ ಹಾನಿ ಕಂಡು ಗೋವಾ ಫೌಂಡೇಶನ್‌ ನ್ಯಾಯಾಲಯದಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರ ಪರಿಣಾಮ ಕಸ್ತೂರಿ ರಂಗನ್ ವರದಿ ಕುರಿತು ಭಾದಿತ ಪ್ರದೇಶದ ಜನರು ಡಿ.3 ರೊಳಗೆ ಆಕ್ಷೇಪಣೆ ಸಲ್ಲಿಸುವಂತೆ ಆದೇಶ ನೀಡಿದೆ ಎಂದರು.

ಪ್ರತಿಭಟನೆಯಲ್ಲಿ ವಿವಿಧ ಸಂಘಟನೆ, ಸಂಘ ಸಂಸ್ಥೆಗಳ ಮುಖಂಡರು ಪಾಲ್ಗೊಂಡಿದ್ದರು.

ಕಸ್ತೂರಿ ರಂಗನ್‌ ವರದಿ; 5ರಂದು ಸಂಪುಟ ಉಪ ಸಮಿತಿ ಸಭೆ

ಬೆಂಗಳೂರು: ಕಸ್ತೂರಿ ರಂಗನ್‌ ವರದಿ ಆಧರಿಸಿ ಪಶ್ಚಿಮ ಘಟ್ಟದ 56,825 ಚದರ ಕಿಲೋ ಮೀಟರ್‌ ಪ್ರದೇಶವನ್ನು ‘ಪರಿಸರ ಸೂಕ್ಷ್ಮ ‍ಪ್ರದೇಶ’ವೆಂದು ಘೋಷಿಸಿ ಕೇಂದ್ರ ಸರ್ಕಾರ ನಾಲ್ಕನೇ ಬಾರಿಗೆ ಹೊರಡಿಸಿದ ಕರಡು ಅಧಿಸೂಚನೆಗೆ ಆಕ್ಷೇಪ ಸಲ್ಲಿಸಲು ರಾಜ್ಯ ಸರ್ಕಾರ ಸಿದ್ಧತೆ ನಡೆಸಿದೆ.

ವರದಿಯಲ್ಲಿರುವ ಸಾಧಕಬಾಧಕಗಳ ಕುರಿತು ಚರ್ಚಿಸಲು ಅರಣ್ಯ ಸಚಿವ ಆರ್‌. ಶಂಕರ್‌ ಅಧ್ಯಕ್ಷತೆಯಲ್ಲಿ ಈಗಾಗಲೇ ಸಂಪುಟ ಉಪ ಸಮಿತಿ ರಚಿಸಲಾಗಿದೆ. ಈ ಸಮಿತಿ ಡಿ. 5ರಂದು ಸಭೆ ಸೇರಲಿದೆ.

ನಾಲ್ಕನೇ ಅಧಿಸೂಚನೆ ಅ. 3ರಂದು ಹೊರಬಿದ್ದಿದೆ. ಅಧಿಸೂಚನೆ ಪ್ರಕಟವಾದ ದಿನದಿಂದ 60 ದಿನಗಳವರೆಗೆ ಆಕ್ಷೇಪಣೆ ಸಲ್ಲಿಸಲು ಅವಕಾಶವಿದೆ. ಆದರೆ, ಈ ಅವಧಿಯ ಒಳಗೆ ಆಕ್ಷೇಪಣೆ ಸಲ್ಲಿಸಲು ಸಾಧ್ಯವಾಗಿಲ್ಲ. ಹೀಗಾಗಿ, ಆಕ್ಷೇಪಣೆ ಸಲ್ಲಿಸುವ ಅವಧಿಯನ್ನು ಇನ್ನಷ್ಟು ವಿಸ್ತರಿಸುವಂತೆ ಕೋರಿ ಕೇಂದ್ರಕ್ಕೆ ರಾಜ್ಯ ಸರ್ಕಾರ ಪತ್ರ ಬರೆದಿದೆ.

ವರದಿಗೆ ಸಂಬಂಧಪಟ್ಟಂತೆ ಚರ್ಚಿಸಲು ರಚಿಸಲಾಗಿರುವ ಸಂಪುಟ ಉಪ ಸಮಿತಿ ಸಭೆ ಸೇರಿ ಕೈಗೊಳ್ಳುವ ತೀರ್ಮಾನವನ್ನು ಸಚಿವ ಸಂಪುಟ ಸಭೆಯಲ್ಲಿ ಮಂಡಿಸಿದ ಬಳಿಕ ಸಲ್ಲಿಸಲಾಗುವುದು. ಅಲ್ಲಿಯವರೆಗೆ ಕಾಲಾವಕಾಶ ನೀಡುವಂತೆ ಕೇಂದ್ರಕ್ಕೆ ಬರೆದಿರುವ ಪತ್ರದಲ್ಲಿ ಕೋರಲಾಗಿದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.