ADVERTISEMENT

ಚಿಕ್ಕಮಗಳೂರು: ಜಿ.ಪಂ, ತಾ.ಪಂ ಅಧ್ಯಕ್ಷರ ವಶ, ಬಿಡುಗಡೆ

ಇಂದಿರಾ ಕ್ಯಾಂಟೀನ್‌ ಉದ್ಘಾಟನೆ ವೇಳೆ ಶಿಷ್ಟಾಚಾರ ಉಲ್ಲಂಘನೆ– ಆರೋಪ: ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 6 ಡಿಸೆಂಬರ್ 2018, 18:46 IST
Last Updated 6 ಡಿಸೆಂಬರ್ 2018, 18:46 IST
ಚಿಕ್ಕಮಗಳೂರಿನಲ್ಲಿ ಗುರುವಾರ ಇಂದಿರಾ ಕ್ಯಾಂಟೀನ್‌ ಉದ್ಘಾಟನಾ ಸಮಾರಂಭದ ವೇಳೆ ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಜಯಣ್ಣ ಅವರನ್ನು ಪೊಲೀಸರು ಎಳೆದೊಯ್ದರು---– ಪ್ರಜಾವಾಣಿ ಚಿತ್ರ
ಚಿಕ್ಕಮಗಳೂರಿನಲ್ಲಿ ಗುರುವಾರ ಇಂದಿರಾ ಕ್ಯಾಂಟೀನ್‌ ಉದ್ಘಾಟನಾ ಸಮಾರಂಭದ ವೇಳೆ ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಜಯಣ್ಣ ಅವರನ್ನು ಪೊಲೀಸರು ಎಳೆದೊಯ್ದರು---– ಪ್ರಜಾವಾಣಿ ಚಿತ್ರ   

ಚಿಕ್ಕಮಗಳೂರು: ಇಂದಿರಾ ಕ್ಯಾಂಟೀನ್‌ ಉದ್ಘಾಟನೆಗೆ ಆಹ್ವಾನ ನೀಡಿಲ್ಲ ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಸುಜಾತಾ ಕೃಷ್ಣಪ್ಪ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಜಯಣ್ಣ, ಬಿಜೆಪಿ ಸದಸ್ಯರು ಗುರುವಾರ ಇಲ್ಲಿ ಪ್ರತಿಭಟನೆ ನಡೆಸಿದರು.

ಕ್ಯಾಂಟೀನ್‌ ಉದ್ಘಾಟನೆಗೂ ಸ್ವಲ್ಪಹೊತ್ತು ಮುಂಚೆ ಪ್ರವೇಶ ದ್ವಾರದಲ್ಲಿ ಸುಜಾತಾ, ಜಯಣ್ಣ, ತಾಲ್ಲೂಕು ಪಂಚಾಯಿತಿ ಸದಸ್ಯರಾದ ರೇಖಾ ಅನಿಲ್‌, ದ್ರಾಕ್ಷಾಯಣಿ ಪೂರ್ಣೇಶ್‌, ಭವ್ಯಾ ನಟೇಶ್‌ ಪ್ರತಿಭಟನೆ ಮಾಡಿದರು. ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಮುಂದಾದಾಗ ತಳ್ಳಾಟ ನೂಕಾಟ ನಡೆಯಿತು. ಪ್ರತಿಭಟನಾನಿರತರನ್ನು ಪೊಲೀಸರು ವಾಹನದಲ್ಲಿ ಬಸವನಹಳ್ಳಿ ಠಾಣೆಗೆ ಕರೆದೊಯ್ದರು.

ಶಿಷ್ಟಾಚಾರ ಉಲ್ಲಂಘನೆಗೆ ಕಾರಣರಾದ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಬೇಕು, ಪ್ರತಿಭಟನೆ ಸಂದರ್ಭದಲ್ಲಿ ಮತ್ತೊಂದು ಪಕ್ಷದ ಕೆಲವರು ಬಿಜೆಪಿ ಮತ್ತು ಶಾಸಕ ಸಿ.ಟಿ.ರವಿ ಅವರಿಗೆ ಧಿಕ್ಕಾರ ಕೂಗಿದ್ದು ಅವರನ್ನು ಬಂಧಿಸಬೇಕು ಎಂದು ಶಾಸಕ ಸಿ.ಟಿ.ರವಿ ನೇತೃತ್ವದಲ್ಲಿ ಬಿಜೆಪಿಯವರು ಬಸವನಹಳ್ಳಿ ಠಾಣೆ ಆವರಣದಲ್ಲಿ ಮಧ್ಯಾಹ್ನ ಪ್ರತಿಭಟನೆ ಮಾಡಿದರು.

ADVERTISEMENT

‘ಈ ಬಗ್ಗೆ ವಿಚಾರಣೆ ಮಾಡಲಾಗುವುದು. ಒಂದು ವಾರದೊಳಗೆ ಕ್ರಮ ವಹಿಸಲಾಗುವುದು’ ಎಂದು ಡಿವೈಎಸ್ಪಿ ಚಂದ್ರಶೇಖರ್‌ ತಿಳಿಸಿದ ನಂತರ ಪ್ರತಿಭಟನಾಕಾರರು ಸುಮ್ಮನಾದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.