ಬೆಂಗಳೂರು: ‘ಮಕ್ಕಳನ್ನು ದತ್ತು ಪಡೆಯುವುದಕ್ಕೆ ಸಂಬಂಧಿಸಿದಂತೆ ಪೋಷಕರ ಪೂರ್ವಾಪರ ವಿಚಾರಣೆ ನಡೆಸುವ ನಿಟ್ಟಿನಲ್ಲಿ ನ್ಯಾಯಾಲಯ ನೀಡಿರುವ ನಿರ್ದೇಶನದಂತೆ ಕರಡು ನಿಯಮಗಳನ್ನು ಸಿದ್ಧಪಡಿಸಲಾಗಿದೆ’ ಎಂದು ರಾಜ್ಯ ಸರ್ಕಾರ ಹೈಕೋರ್ಟ್ಗೆ ತಿಳಿಸಿದೆ.
ಈ ಕುರಿತಂತೆ ‘ಲೆಟ್ಸ್ಕಿಟ್’ ಪ್ರತಿಷ್ಠಾನ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ನ್ಯಾಯಮೂರ್ತಿ ಬಿ.ವೀರಪ್ಪ ನೇತೃತ್ವದ ವಿಭಾಗೀಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು.
ವಿಚಾರಣೆ ವೇಳೆ ಸರ್ಕಾರದ ಪರ ವಕೀಲೆ ಎಚ್.ವೀಣಾ, ‘ಮಕ್ಕಳನ್ನು ದತ್ತು ಪಡೆಯುವುದಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ 2021ರ ಆಗಸ್ಟ್ 19ರಂದು ಹಲವು ನಿರ್ದೇಶನಗಳನ್ನು ನೀಡಿತ್ತು. ಅದರಲ್ಲಿ ಬಾಲ ನ್ಯಾಯ ಕಾಯ್ದೆಯ ಕಲಂ 11ರ ಅಡಿ ನಿಯಮಗಳನ್ನು ರೂಪಿಸುವಂತೆ ಆದೇಶಿಸಲಾಗಿತ್ತು. ಈ ಆದೇಶದನ್ವಯ ಕರಡು ನಿಯಮಗಳನ್ನು ಸಿದ್ಧಪಡಿಸಲಾಗಿದ್ದು ಅವುಗಳನ್ನು ಅಂತಿಮಗೊಳಿಸಿ ಸಚಿವ ಸಂಪುಟದ ಅನುಮೋದನೆ ಪಡೆಯಲಾಗುವುದು’ ಎಂದರು.
ಇದಕ್ಕೆ ಪ್ರತಿಷ್ಠಾನದ ಪರ ವಕೀಲ ರಮೇಶ್ ಪುತ್ತಿಗೆ, ‘ಕರಡು ನಿಯಮಗಳನ್ನು ಅರ್ಜಿದಾರರಿಗೆ ಮತ್ತು ಬಾಲ ನ್ಯಾಯ ಮಂಡಳಿಗಳಿಗೆ ನೀಡಿದರೆ ಏನಾದರೂ ತಿದ್ದುಪಡಿಗಳಿದ್ದರೆ ಸೂಚಿಸಬಹುದು’ ಎಂದರು.
ಇದನ್ನು ದಾಖಲಿಸಿಕೊಂಡ ನ್ಯಾಯಪೀಠ, ‘ಡಿಸೆಂಬರ್ನಲ್ಲಿ ಬೆಳಗಾವಿಯಲ್ಲಿ ಅಧಿವೇಶನ ಆರಂಭವಾಗಲಿದೆಯಲ್ಲಾ ಅಲ್ಲಿ ಒಪ್ಪಿಗೆ ಪಡೆದುಕೊಳ್ಳಿ’ ಎಂದು ಸೂಚಿಸಿತು.
ಇದೇ ವೇಳೆ ಸರ್ಕಾರಿ ವಕೀಲೆ ವೀಣಾ ಅವರು, ‘ಮೈಸೂರಿನ ಜೀವನ್ ಜ್ಯೋತಿ ಟ್ರಸ್ಟ್ನಲ್ಲಿ 12 ದಿನದ ಹೆಣ್ಣು ಶಿಶುವನ್ನು ಪೋಷಕರು ಬಿಟ್ಟು ಹೋದ ಪ್ರಕರಣದ ಬಗ್ಗೆ ಸಮಗ್ರ ತನಿಖೆ ನಡೆಸಿ ನ್ಯಾಯಾಲಯದ ಆದೇಶದಂತೆ ಮುಚ್ಚಿದ ಲಕೋಟೆಯಲ್ಲಿ ವರದಿ ಸಲ್ಲಿಸಲಾಗಿದೆ’ ಎಂದು ನ್ಯಾಯಪೀಠಕ್ಕೆ ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.