ADVERTISEMENT

ದೇಶದ್ರೋಹದ ಆರೋಪದಡಿ ಮಕ್ಕಳ ವಿಚಾರಣೆ: ಬೀದರ್ ಪೊಲಿಸರಿಗೆ ನೋಟಿಸ್‌

​ಪ್ರಜಾವಾಣಿ ವಾರ್ತೆ
Published 1 ಡಿಸೆಂಬರ್ 2021, 22:45 IST
Last Updated 1 ಡಿಸೆಂಬರ್ 2021, 22:45 IST
   

ಬೆಂಗಳೂರು: ‘ದೇಶದ್ರೋಹ ಆರೋಪದ ಹಿನ್ನೆಲೆಯಲ್ಲಿ ಬೀದರ್‌ನ ಶಾಹಿನ್ ಶಿಕ್ಷಣ ಸಂಸ್ಥೆಯ ಮಕ್ಕಳನ್ನು ಸಮವಸ್ತ್ರ, ಮತ್ತು ಶಸ್ತ್ರಾಸ್ತ್ರದೊಂದಿಗೆ ವಿಚಾರಣೆ ನಡೆಸಿದ ಐವರು ಪೊಲೀಸ್ ಸಿಬ್ಬಂದಿಗೆ ಷೋಕಾಸ್ ನೋಟಿಸ್ ನೀಡಲಾಗಿದೆ’ ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ತಿಳಿಸಿದೆ.

ಈ ಸಂಬಂಧ ವಕೀಲೆ ನಯನ ಜ್ಯೋತಿ ಝಾವರ್ ಹಾಗೂ ಮಾನವ ಹಕ್ಕುಗಳ ಸಂಘಟನೆ ‘ಸಿಕ್ರಮ್’ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಋತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.

ಸರ್ಕಾರದ ಪರ ವಕೀಲರು ಜ್ಞಾಪನಾ ಪತ್ರ ಸಲ್ಲಿಸಿ, ‘ಮಕ್ಕಳನ್ನು ವಿಚಾರಣೆಗೆ ಒಳಪಡಿಸುವಾಗ ಬಾಲ ನ್ಯಾಯ ಕಾಯ್ದೆಯ ಸಂಬಂಧಪಟ್ಟ ಕಲಂಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಸೂಚಿಸಿ ಈಗಾಗಲೇ ರಾಜ್ಯದ ಎಲ್ಲ ಪೊಲೀಸ್ ಅಧಿಕಾರಿಗಳಿಗೆ ರಾಜ್ಯ ಪೊಲೀಸ್ ಮಹಾನಿರ್ದೇಶಕರು ಸುತ್ತೋಲೆ ಹೊರಡಿಸಿದ್ದಾರೆ’ ಎಂದು ನ್ಯಾಯಪೀಠಕ್ಕೆ ತಿಳಿಸಿದರು.

ADVERTISEMENT

‘ತಪ್ಪಿತಸ್ಥ ಪೊಲೀಸ್ ಸಿಬ್ಬಂದಿ ಮತ್ತು ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತಿದೆ. ಈಗಾಗಲೇ ಐವರು ಪೊಲೀಸರಿಗೆ ಷೋಕಾಸ್ ನೋಟಿಸ್ ನೀಡಲಾಗಿದೆ. ಅವರಿಂದ ಉತ್ತರ ಬರಬೇಕಾಗಿದೆ. ನಂತರ ಮುಂದಿನ ಕಾನೂನು ಕ್ರಮ ಜರುಗಿಸಲಾಗುವುದು’ ಎಂದು ವಿವರಿಸಿದರು.

ಇದಕ್ಕೆ ಅತೃಪ್ತಿ ವ್ಯಕ್ತಪಡಿಸಿದ ನ್ಯಾಯಪೀಠ,‘ಕೇವಲ ಷೋಕಾಸ್ ನೋಟಿಸ್ ನೀಡಿದರೆ ಸಾಕಾಗುವುದಿಲ್ಲ. ಸರ್ಕಾರ ಏನು ಕ್ರಮ ಕೈಗೊಂಡಿದೆ ಎಂಬುದು ಮುಖ್ಯ’ ಎಂದ ನ್ಯಾಯಪೀಠ ವಿಚಾರಣೆಯನ್ನು 2022ರ ಮಾರ್ಚ್‌ಗೆ ಮುಂದೂಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.