
ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆ
ಬೆಂಗಳೂರು: ‘ಮಕ್ಕಳಲ್ಲಿಯೂ ಕ್ಯಾನ್ಸರ್ ಪ್ರಕರಣ ಹೆಚ್ಚಿನ ಸಂಖ್ಯೆಯಲ್ಲಿ ದೃಢಪಡುತ್ತಿದ್ದು, ಕಳೆದ ವರ್ಷ ರಾಜ್ಯದಲ್ಲಿ 1,882 ಪ್ರಕರಣಗಳು ದೃಢಪಟ್ಟಿವೆ’ ಎಂದು ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆ ತಿಳಿಸಿದೆ.
ಇದೇ 15ರಂದು ಅಂತರರಾಷ್ಟ್ರೀಯ ಮಕ್ಕಳ ಕ್ಯಾನ್ಸರ್ ದಿನ ಆಚರಿಸುತ್ತಿರುವ ಪ್ರಯುಕ್ತ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಸಂಸ್ಥೆ, ‘ಕಳೆದ ವರ್ಷ ಕ್ಯಾನ್ಸರ್ ಪೀಡಿತರಲ್ಲಿ 312 ಮಕ್ಕಳು ಮೃತಪಟ್ಟಿದ್ದಾರೆ. ಸಂಸ್ಥೆಯ ಮಕ್ಕಳ ಗಂಥಿ ವಿಜ್ಞಾನ ವಿಭಾಗದಲ್ಲಿ ಕಳೆದ ವರ್ಷ 590 ಪ್ರಕರಣಗಳು ವರದಿಯಾಗಿವೆ. ಮಕ್ಕಳ ಚಿಕಿತ್ಸೆಗಾಗಿಯೇ 65 ಹಾಸಿಗೆಗಳ ಪ್ರತ್ಯೇಕ ವಾರ್ಡ್ ಹೊಂದಲಾಗಿದೆ’ ಎಂದು ಸಂಸ್ಥೆಯ ನಿರ್ದೇಶಕ ಡಾ.ಟಿ.ನವೀನ್ ಮಾಹಿತಿ ನೀಡಿದ್ದಾರೆ.
‘ಯಾವುದೇ ಶಂಕಿತ ಕ್ಯಾನ್ಸರ್ ಗಡ್ಡೆ, ತೀವ್ರ ಜ್ವರ, ರಕ್ತಸ್ರಾವ, ವಾಂತಿಯೊಂದಿಗೆ ಆಗಾಗ ತಲೆನೋವು, ರಾತ್ರಿ ಸಮಯ ಬೆವರುವಿಕೆ, ತೂಕನಷ್ಟ ಸೇರಿ ಕ್ಯಾನ್ಸರ್ನ ವಿವಿಧ ಲಕ್ಷಣಗಳು ಕಾಣಸಿಕೊಂಡರೆ ಮಕ್ಕಳನ್ನು ತಪಾಸಣೆಗೆ ಒಳಪಡಿಸಬೇಕು. ಸಂಸ್ಥೆಗೆ ಚಿಕಿತ್ಸೆಗಾಗಿ ರಾಜ್ಯದ ವಿವಿಧೆಡೆಯಿಂದ ಮಾತ್ರವಲ್ಲದೆ, ತಮಿಳುನಾಡು, ಆಂಧ್ರ ಪ್ರದೇಶ, ಪಶ್ಚಿಮ ಬಂಗಾಳ ಹಾಗೂ ಈಶಾನ್ಯ ರಾಜ್ಯಗಳಿಂದಲೂ ಬರುತ್ತಿದ್ದಾರೆ. ಕ್ಯಾನ್ಸರ್ನಿಂದ ಬಳಲುತ್ತಿರುವ ಮಕ್ಕಳ ಆರೈಕೆಗೆ ಪೂರಕವಾದ ವೈದ್ಯಕೀಯ ಸೌಲಭ್ಯ ಅಳವಡಿಸಿಕೊಳ್ಳಲಾಗಿದೆ’ ಎಂದು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.