ಮಂಗಳೂರು: ಬೆಂಗಳೂರಿನ ‘ಚಿಲುಮೆ’ ಪ್ರಕರಣದ ಬಗ್ಗೆ ಹೈಕೋರ್ಟ್ ನ್ಯಾಯಮೂರ್ತಿ ಅವರಿಂದ ತನಿಖೆ ನಡೆಸಬೇಕು ಎಂಬ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರ ಬೇಡಿಕೆಯನ್ನು ತಳ್ಳಿಹಾಕಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ‘ನಮ್ಮ ಪೊಲೀಸರೇ ತನಿಖೆ ಮಾಡುತ್ತಿದ್ದಾರೆ. ಅವರಿಂದಲೇ ತನಿಖೆ ನಡೆಯಲಿದೆ’ ಎಂದರು.
ಶನಿವಾರ ಇಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ಕಾಂಗ್ರೆಸ್ನವರು ಎಲ್ಲದಕ್ಕೂ ಹೈಕೋರ್ಟ್ ನ್ಯಾಯಮೂರ್ತಿಯಿಂದ ತನಿಖೆ ನಡೆಸಬೇಕು ಎಂದು ಹೇಳುತ್ತಾರೆ. ಅವರು ಅಧಿಕಾರದಲ್ಲಿದ್ದಾಗ ಬಿಡಿಎ ಪ್ರಕರಣದ ತನಿಖೆಯನ್ನು ನ್ಯಾಯಾಧೀಶರಿಗೆ ವಹಿಸಲಾಗಿತ್ತು. ಅವರು ಹಗರಣದಿಂದ ಪಾರಾಗಲು ಆ ವಿಚಾರಣೆ ಅನುಕೂಲವಾಯಿತು ಅಷ್ಟೇ. ಪೊಲೀಸ್ ತನಿಖೆಯೇ ಬಹಳ ತ್ವರಿತಗತಿಯಲ್ಲಿ ನಡೆಯುತ್ತಿದೆ. ಚಿಲುಮೆ ಸಂಸ್ಥೆ ವಿರುದ್ಧ ಮೊನ್ನ ದೂರು ದಾಖಲಾಗಿದ್ದು, ನಿನ್ನೆ ಬಂಧನವಾಗಿದೆ’ ಎಂದು ಸಮರ್ಥಿಸಿಕೊಂಡರು.
ಮತದಾರರ ಪಟ್ಟಿ ಪರಿಷ್ಕರಣೆ ಚುನಾವಣಾ ಆಯೋಗದ ನಿಯಮಿತವಾಗಿ ಕೈಗೊಳ್ಳುವ ಪ್ರಕ್ರಿಯೆ. ಅದರಲ್ಲಿ ಸರ್ಕಾರದ ಪಾತ್ರ ಏನೂ ಇಲ್ಲ. ಕಾಂಗ್ರೆಸ್ನವರು ಸೋಲುವ ಭೀತಿಯಿಂದ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ ಎಂದರು
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.