
ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ವಯಂಪ್ರೇರಿತವಾಗಿ ದಾಖಲಿಸಿಕೊಂಡಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್) ಹೈಕೋರ್ಟ್ ವಿಲೇವಾರಿ ಮಾಡಿದೆ.
ಈ ಕುರಿತ ಪಿಐಎಲ್ ಅನ್ನು ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ನೇತೃತ್ವದ ವಿಭಾಗೀಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು. ವಿಚಾರಣೆ ವೇಳೆ ಸರ್ಕಾರದ ಪರ ಹಾಜರಾಗಿದ್ದ ರಾಜ್ಯ ಅಡ್ವೊಕೇಟ್ ಜನರಲ್ ಕೆ.ಶಶಿಕಿರಣ ಶೆಟ್ಟಿ ಅವರು ಘಟನಾ ತರುವಾಯ ಸರ್ಕಾರ ಕೈಗೊಂಡಿರುವ ಸುರಕ್ಷತಾ ಕ್ರಮಗಳ ಕುರಿತಂತೆ ನ್ಯಾಯಪೀಠಕ್ಕೆ ಅರುಹಿದರು.
‘ಜನಸಂದಣಿ ನಿಯಂತ್ರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಪ್ರಮಾಣಿತ ಕಾರ್ಯಾಚರಣೆ ವಿಧಾನ (ಎಸ್ಒಪಿ) ಬಿಡುಗಡೆ ಮಾಡಿದೆ. ಸಭೆ, ಸಮಾರಂಭ ಮತ್ತು ಕಾರ್ಯಕ್ರಮಗಳಲ್ಲಿ ಜನಸಂದಣಿ ನಿಯಂತ್ರಿಸಲು ‘ಕರ್ನಾಟಕ ಜನಸಂದಣಿ ನಿಯಂತ್ರಣ’ ಮಸೂದೆ ಸಿದ್ಧಪಡಿಸಲಾಗಿದೆ’ ಎಂದರು.
‘ಭವಿಷ್ಯದಲ್ಲಿ ಈ ಕುರಿತು ಕಾಯ್ದೆ ಜಾರಿಗೊಳಿಸಲು ಸರ್ಕಾರ ಉದ್ದೇಶಿಸಿದೆ. ಅಂತೆಯೇ, ಅರ್ಜಿಗೆ ಸಂಬಂಧಿಸಿದಂತೆ ನ್ಯಾಯಾಲಯ ನೇಮಿಸಿರುವ ಅಮಿಕಸ್ ಕ್ಯೂರಿಯಾದ ಪದಾಂಕಿತ ಹಿರಿಯ ವಕೀಲೆ ಎಸ್.ಸುಶೀಲಾ ಅವರ ಸಲಹೆ-ಶಿಫಾರಸುಗಳನ್ನು ಪರಿಗಣಿಸಲಾಗುವುದು’ ಎಂದು ನ್ಯಾಯಪೀಠಕ್ಕೆ ಭರವಸೆ ನೀಡಿದರು. ಶಶಿಕಿರಣ ಶೆಟ್ಟಿಯವರ ಈ ಹೇಳಿಕೆ ದಾಖಲಿಸಿಕೊಂಡ ನ್ಯಾಯಪೀಠ ಅರ್ಜಿ ಇತ್ಯರ್ಥಪಡಿಸಿತು.
ಪ್ರಕರಣವೇನು?:
2025ರ ಜೂನ್ 4ರಂದು ನಡೆದಿದ್ದ ಐಪಿಎಲ್ ಟ್ರೋಫಿ ಫೈನಲ್ ಪಂದ್ಯದಲ್ಲಿ ಆರ್ಸಿಬಿ ತಂಡ ಜಯಗಳಿಸಿತ್ತು. ಮರುದಿನ (ಜೂ.5) ನಗರದಲ್ಲಿ ಆರ್ಸಿಬಿ ವಿಜಯೋತ್ಸವ ಹಮ್ಮಿಕೊಳ್ಳಲಾಗಿತ್ತು. ಪರಿಣಾಮ ಲಕ್ಷಾಂತರ ಜನ ಚಿನ್ನಸ್ವಾಮಿ ಕ್ರೀಡಾಂಗಣದ ಮುಂದೆ ಜಮಾಯಿಸಿದ್ದರು. ಈ ವೇಳೆ ಕಾಲ್ತುಳಿತ ಉಂಟಾಗಿ 11 ಜನ ಮೃತಪಟ್ಟು, 56 ಜನ ಗಾಯಗೊಂಡಿದ್ದರು. ಘಟನೆ ಕುರಿತಂತೆ ಹೈಕೊರ್ಟ್ ಸ್ವಯಂಪ್ರೇರಿತ ಪಿಐಎಲ್ ದಾಖಲಿಸಿಕೊಂಡು ವಿಚಾರಣೆ ನಡೆಸಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.