ಚಿತ್ರದುರ್ಗ: ಪ್ರೌಢಶಾಲೆಯ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಬಂಧಿತರಾಗಿರುವ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರು ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಜಿಲ್ಲಾ ನ್ಯಾಯಾಲಯ ಜ.12ಕ್ಕೆ ಮುಂದೂಡಿದೆ.
ದೋಷಾರೋಪಪಟ್ಟಿ ಸಲ್ಲಿಕೆಯಾದ ಬಳಿಕ ಜಾಮೀನು ಕೋರಿ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲಾಗಿತ್ತು. ನ್ಯಾಯಾಧೀಶೆ ಬಿ.ಕೆ.ಕೋಮಲಾ ಅರ್ಜಿ ವಿಚಾರಣೆಯನ್ನು ಕೈಗೆತ್ತಿಕೊಂಡರು. ಶರಣರ ಪರ ವಕೀಲರು ವಾದ ಮಂಡಿಸಿದರು.
ಪ್ರಕರಣ ತನಿಖಾ ಹಂತದಲ್ಲಿದ್ದಾಗ ಇದೇ ನ್ಯಾಯಾಲಯ ಶರಣರ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು. ಇದನ್ನು ಪ್ರಶ್ನಿಸಿ ಶರಣರ ಪರ ವಕೀಲರು ಹೈಕೋರ್ಟ್ ಮೆಟ್ಟಿಲೇರಿದ್ದರು. ಅರ್ಜಿ ವಿಚಾರಣೆಯ ಹಂತದಲ್ಲಿ ಇರುವಾಗಲೇ ತನಿಖಾಧಿಕಾರಿಗಳು ನ್ಯಾಯಾಲಯಕ್ಕೆ ದೋಷಾರೋಪಪಟ್ಟಿ ಸಲ್ಲಿಸಿದ್ದರು. ಹೈಕೋರ್ಟ್ನಲ್ಲಿದ್ದ ಅರ್ಜಿಯನ್ನು ಹಿಂಪಡೆದ ಶರಣರ ಪರ ವಕೀಲರು, ಜಾಮೀನು ಕೋರಿ ಜಿಲ್ಲಾ ನ್ಯಾಯಾಲಯಕ್ಕೆ ಹೊಸ ಅರ್ಜಿ ಸಲ್ಲಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.