ಥಾವರಚಂದ್ ಗೆಹಲೋತ್
ಬೆಂಗಳೂರು: ಹಿಂದೂ ಉಪಜಾತಿಗಳ ಜೊತೆ ಕ್ರಿಶ್ಚಿಯನ್ ಪದ ಸೇರ್ಪಡೆ ಕುರಿತಂತೆ ಮರು ಪರಿಶೀಲಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಜ್ಯಪಾಲ ಥಾವರಚಂದ್ ಗೆಹಲೋತ್ ಪತ್ರ ಬರೆದಿದ್ದಾರೆ.
ಬ್ರಾಹ್ಮಣ ಕ್ರಿಶ್ಚಿಯನ್, ಒಕ್ಕಲಿಗ ಕ್ರಿಶ್ಚಿಯನ್, ಕುರುಬ ಕ್ರಿಶ್ಚಿಯನ್ ಹೀಗೆ ಹಿಂದೂ ಉಪಜಾತಿಗಳ ಜೊತೆ ಕ್ರಿಶ್ಚಿಯನ್ ಪದ ಸೇರಿಸಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿ ರಾಜ್ಯ ಬಿಜೆಪಿ ನಾಯಕರ ನಿಯೋಗವು ಇತ್ತೀಚೆಗೆ ರಾಜ್ಯಪಾಲರಿಗೆ ದೂರು ನೀಡಿತ್ತು.
ಈ ಪತ್ರವನ್ನು ಉಲ್ಲೇಖಿಸಿ ಮುಖ್ಯಮಂತ್ರಿಗೆ ಪತ್ರ ಬರೆದಿರುವ ರಾಜ್ಯಪಾಲರು, ‘ನನ್ನ ಅರಿವಿನ ಪ್ರಕಾರ ರಾಜ್ಯದ ಜಾತಿ ಪಟ್ಟಿಯಲ್ಲಿ ಬ್ರಾಹ್ಮಣ ಕ್ರಿಶ್ಚಿಯನ್, ಒಕ್ಕಲಿಗ ಕ್ರಿಶ್ಚಿಯನ್, ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಜಾತಿಗಳ ಹೆಸರು ಇಲ್ಲ. ಅಲ್ಲದೆ, ಕ್ರೈಸ್ತ ಧರ್ಮದಲ್ಲೂ ಇಂತಹ ಜಾತಿಗಳು ಗುರುತಿಸಿಕೊಂಡಿಲ್ಲ. ಹಿಂದೂ ಉಪಜಾತಿಗಳ ಜೊತೆ ಕ್ರಿಶ್ಚಿಯನ್ ಧರ್ಮ ಸೇರ್ಪಡೆಯಿಂದ ಸಾಮಾಜಿಕ ಅಶಾಂತಿಯ ಜೊತೆಗೆ ದೀರ್ಘಾವಧಿಯಲ್ಲಿ ಸಾಮಾಜಿಕ ಸಾಮರಸ್ಯಕ್ಕೆ ಅಪಾಯ ತರುವ ಸಾಧ್ಯತೆ ಇದೆ. ಈ ವಿಚಾರಗಳನ್ನು ಗಣನೆಗೆ ತೆಗೆದುಕೊಂಡು, ಈ ಬಗ್ಗೆ ಮರು ಪರಿಶೀಲನೆ ನಡೆಸುವುದು ಅಗತ್ಯವಾಗಿದೆ’ ಎಂದು ಅಭಿಪ್ರಾಯಪಟ್ಟಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.