
ಬೆಂಗಳೂರು: ಹುಬ್ಬಳ್ಳಿಯಲ್ಲಿ ನಡೆದ ಮಹಿಳೆ ವಿವಸ್ತ್ರ ಪ್ರಕರಣದ ತನಿಖೆಯನ್ನು ಮುಖ್ಯಮಂತ್ರಿಯವರ ಅನುಮತಿ ಪಡೆದು ಸಿಐಡಿಗೆ ವಹಿಸಲಾಗುವುದು ಎಂದು ಗೃಹ ಸಚಿವ ಜಿ.ಪರಮೇಶ್ವರ ಹೇಳಿದರು.
ಸುದ್ದಿಗಾರರ ಜತೆ ಶುಕ್ರವಾರ ಮಾತನಾಡಿದ ಅವರು, ‘ಘಟನೆಯ ಸತ್ಯಾಸತ್ಯತೆಯನ್ನು ಸಿಐಡಿ ತನಿಖೆ ಮಾಡಿ ಸರ್ಕಾರಕ್ಕೆ ವರದಿ ನೀಡಬೇಕು. ಆನಂತರ ಸರ್ಕಾರ ಯಾರು ತಪ್ಪಿತಸ್ಥರು, ಘಟನೆಯಲ್ಲಿ ಯಾರ ನಿರ್ಲಕ್ಷ್ಯ ಇದೆ ಎಂದು ಪರಿಗಣಿಸಿ ಮುಂದಿನ ತೀರ್ಮಾನ ಮಾಡಲಿದೆ’ ಎಂದು ವಿವರಿಸಿದರು.
‘ಮಹಿಳೆಯ ವಿವಸ್ತ್ರ ಆಗುವುದಕ್ಕೆ ಪೊಲೀಸರು ಬಿಟ್ಟಿಲ್ಲ. ಪೊಲೀಸರು ಕೂಡಲೇ ಕ್ರಮ ವಹಿಸಿದ್ದಾರೆ. ಪೊಲೀಸರು ವಿವಸ್ತ್ರಗೊಳಿಸಿಲ್ಲ, ಆಕೆಯೇ ಮಾಡಿಕೊಂಡಿದ್ದಾಳೆ ಎಂಬ ವಿಚಾರವನ್ನು ಈಗಾಗಲೇ ತಿಳಿಸಿದ್ದೇನೆ. ಆದರೂ ವಿವರವಾದ ತನಿಖೆ ಮಾಡಬೇಕು ಎಂಬ ಚಿಂತನೆ ನಡೆಸಲಾಗಿದೆ’ ಎಂದರು.
ಬಳ್ಳಾರಿಗೆ ಹೋಗಿಲ್ಲ: ‘ನಾನು ಗೃಹ ಇಲಾಖೆ ಸಚಿವ. ಘಟನೆ ನಡೆದ ಕೂಡಲೇ ನಾನು ಹೋಗಿದ್ದರೆ, ಪೊಲೀಸರಿಗೆ ಏನೇನೋ ಸೂಚನೆಗಳನ್ನು ಕೊಟ್ಟಿದ್ದಾರೆ, ಅವರ ಪರವಾಗಿ ಸೂಚನೆ ನೀಡಿದ್ದಾರೆ ಎಂಬ ಆರೋಪಗಳು ಬರುತ್ತವೆ. ನಾನು ಭೇಟಿ ನೀಡುವಾಗ ಯೋಚನೆ ಮಾಡಿ, ತನಿಖೆಗೆ ಯಾವುದೇ ತೊಂದರೆ ಆಗಬಾರದು ಎಂಬ ಕಾರಣದಿಂದ ತಡ ಮಾಡುತ್ತೇನೆ. ಅದೇ ಕಾರಣದಿಂದ ಈವರೆಗೂ ಒಳ್ಳಾರಿಗೆ ಹೋಗಿಲ್ಲ’ ಎಂದು ಅವರು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.