ADVERTISEMENT

ಸಿಗರೇಟ್‌ ಲಂಚ| ಸಿಸಿಬಿ ಅಧಿಕಾರಿಗಳ ವಿರುದ್ಧ ಎಸಿಬಿ ಎಫ್‌ಐಆರ್

​ಪ್ರಜಾವಾಣಿ ವಾರ್ತೆ
Published 21 ಮೇ 2020, 13:55 IST
Last Updated 21 ಮೇ 2020, 13:55 IST
ಸಿಸಿಬಿ ಎಸಿಪಿ ಪ್ರಭುಶಂಕರ್‌
ಸಿಸಿಬಿ ಎಸಿಪಿ ಪ್ರಭುಶಂಕರ್‌    

ಬೆಂಗಳೂರು: ಸಿಗರೇಟ್‌ ವಿತರಕರು ಹಾಗೂ ನಕಲಿ ಮಾಸ್ಕ್‌ ತಯಾರಿಕಾ ಕಂಪನಿಗಳಿಂದ ಲಂಚ ಪಡೆದ ಆರೋಪಕ್ಕೆ ಒಳಗಾಗಿರುವ ಸಿಸಿಬಿ ಎಸಿಪಿ ಪ್ರಭುಶಂಕರ್‌ ಹಾಗೂ ಇನ್‌ಸ್ಪೆಕ್ಟರ್‌ಗಳಾದ ಅಜಯ್‌ ಹಾಗೂ ನಿರಂಜನ ಕುಮಾರ್‌ ವಿರುದ್ಧ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಗುರುವಾರ ಎಫ್‌ಐಆರ್‌ ದಾಖಲಿಸಿದೆ.

ಸಿಸಿಬಿ ಆರ್ಥಿಕ ಅಪರಾಧ ತಡೆ ವಿಭಾಗದಲ್ಲಿದ್ದ ಪ್ರಭುಶಂಕರ್‌, ಅಜಯ್‌ ಹಾಗೂ ನಿರಂಜನ ಕುಮಾರ್, ಲಾಕ್‌ಡೌನ್‌ ಸಮಯದಲ್ಲಿ ವಿವಿಧ ಕಂಪನಿಗಳ ಸಿಗರೇಟ್‌ಗಳನ್ನು ದುಬಾರಿ ಬೆಲೆಗೆ ಮಾರಲು ಅವಕಾಶ ಮಾಡಿಕೊಡಲು ಲಂಚ ಪಡೆದ ಆರೋಪಕ್ಕೆ ಒಳಗಾಗಿದ್ದಾರೆ. ಲಾಕ್‌ಡೌನ್‌ ವೇಳೆ ತಂಬಾಕು ಉತ್ಪನ್ನಗಳು ಮತ್ತು ಮದ್ಯ ಮಾರಾಟ ನಿಷೇಧಿಸಲಾಗಿತ್ತು.

ಇಲ್ಲಿನ ಕಾಟನ್‌ಪೇಟೆ ಪೊಲೀಸ್‌ ಠಾಣೆಯಲ್ಲಿ ಮೂವರ ವಿರುದ್ಧ ಸುಲಿಗೆ ಪ್ರಕರಣವೂ ದಾಖಲಾಗಿದ್ದು, ಪ್ರಭುಶಂಕರ್‌‌ ಅವರಿಗೆ ಈ ಪ್ರಕರಣದಲ್ಲಿ ಜಾಮೀನು ಸಿಕ್ಕಿದೆ. ಸದ್ಯ ಮೂವರೂ ಅಧಿಕಾರಿಗಳು ಸಸ್ಪೆಂಡ್‌ ಆಗಿದ್ದಾರೆ.

ADVERTISEMENT

ಸಿಸಿಬಿ‌ ಅಧಿಕಾರಿಗಳು ಲಂಚ ಪಡೆದ ಮೂರು ಪ್ರಕರಣಗಳನ್ನು ಭ್ರಷ್ಟಾಚಾರ ನಿಯಂತ್ರಣಾ ಕಾಯ್ದೆ (ಪಿ.ಸಿ. ಆ್ಯಕ್ಟ್‌) ಅಡಿ ತನಿಖೆ ನಡೆಸುವಂತೆ ಡಿಜಿ ಮತ್ತು ಐಜಿ ಪ್ರವೀಣ್‌ ಸೂದ್‌ ಈಚೆಗೆ ಎಸಿಬಿಗೆ ಆದೇಶಿಸಿದ್ದರು. ಈ ಕಾಯ್ದೆಯ ಸೆಕ್ಷನ್‌ 17(ಎ) ಅನ್ವಯ ಸಕ್ಷಮ ಪ್ರಾಧಿಕಾರದ ಒಪ್ಪಿಗೆ ಪಡೆದು ಎಫ್‌ಐಆರ್‌ ದಾಖಲಿಸಲಾಗಿದೆ.

ಯಾವುದೇ ಸರ್ಕಾರಿ ಅಧಿಕಾರಿ ವಿರುದ್ಧ ಎಫ್‌ಐಆರ್‌ ದಾಖಲಿಸಲು ಸಕ್ಷಮ ಪ್ರಾಧಿಕಾರದ ಪೂರ್ವಾನುಮತಿ ಕಡ್ಡಾಯ. ಆರೋಪ ಸಾಬೀತಾದರೆ ಕನಿಷ್ಠ 3ರಿಂದ 7ವರ್ಷದವರೆಗೆ ಜೈಲು ಶಿಕ್ಷೆ ವಿಧಿಸಲು ಅವಕಾಶವಿದೆ.

ಪ್ರಭುಶಂಕರ್‌ ಮತ್ತವರ ಸಹೊದ್ಯೋಗಿಗಳು ಎಂ.ಡಿ. ಅಂಡ್‌ ಸನ್ಸ್‌, ಮಹಾವೀರ್‌ ಟ್ರೇಡರ್ಸ್‌ ಮತ್ತಿತರ ಸಿಗರೇಟ್‌ ವಿತರಕರಿಂದ ₹ 85 ಲಕ್ಷ ಲಂಚ ಪಡೆದ ಆರೋಪಕ್ಕೆ ಓಳಗಾಗಿದ್ದಾರೆ. ಇನ್ನೊಂದು ಪ್ರಕರಣದಲ್ಲಿ, ಎನ್–‌ 95 ನಕಲಿ ಮಾಸ್ಕ್‌ ತಯಾರಿಸುತ್ತಿದ್ದಾಗ ಸಿಕ್ಕಿಬಿದ್ದ ಆರೋಪಿಗೆ ರಕ್ಷಣೆ ನೀಡಲು ₹ 15 ಲಕ್ಷ ಲಂಚ ಪಡೆದಿದ್ದಾರೆ ಎಂದು ದೂರಲಾಗಿದೆ. ಆರೋಪಿ ಅಧಿಕಾರಿಗಳ ಬಳಿ ₹ 52 ಲಕ್ಷ ವಶಪಡಿಸಿಕೊಳ್ಳಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.