ADVERTISEMENT

ಪೌರತ್ವ ಕಾಯ್ದೆ ಜಾರಿಗೆ ಬದ್ಧ: ಗೃಹ ಸಚಿವ ಬಸವರಾಜ ಬೊಮ್ಮಾಯಿ

​ಪ್ರಜಾವಾಣಿ ವಾರ್ತೆ
Published 17 ಡಿಸೆಂಬರ್ 2019, 19:35 IST
Last Updated 17 ಡಿಸೆಂಬರ್ 2019, 19:35 IST
   

ಬೆಂಗಳೂರು:‘ಪೌರತ್ವ ಕಾಯ್ದೆ ಈಗ ರಾಷ್ಟ್ರದ ಕಾನೂನು ಆಗಿದ್ದು, ಅದು ಕರ್ನಾಟಕಕ್ಕೂ ಅನ್ವಯವಾಗುತ್ತದೆ. ಅದನ್ನು ಅನುಷ್ಠಾನಗೊಳಿಸಲು ಬದ್ಧ’ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.

ಪೌರತ್ವ ಕಾಯ್ದೆಯನ್ನು ರಾಜ್ಯದಲ್ಲೂ ಅನುಷ್ಠಾನ ಮಾಡಲಾಗುವುದೇ ಎಂಬ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ‘ಕೆಲವು ರಾಜ್ಯಗಳು ರಾಜಕೀಯ ಕಾರಣಗಳಿಗಾಗಿ ವಿರೋಧಿಸುತ್ತಿವೆ. ನಾವು ಕಾನೂನಿಗೆ ಅನುಸಾರವಾಗಿಯೇ ನಡೆಯುತ್ತೇವೆ’ ಎಂದು ತಿಳಿಸಿದರು.

‘ನಮ್ಮ ಸರ್ಕಾರ ಸಂವಿಧಾನಾತ್ಮಕ ನಿಲುವು ತೆಗೆದುಕೊಳ್ಳುತ್ತದೆ. ಕೇಂದ್ರ ಸರ್ಕಾರ ಸಂವಿಧಾನದ ಪ್ರಕಾರವೇ ಕಾಯ್ದೆಗೆ ತಿದ್ದುಪಡಿ ತಂದಿದೆ. ಅದಕ್ಕೆ ರಾಷ್ಟ್ರಪತಿಯವರೂ ಅಂಕಿತ ಹಾಕಿದ್ದಾರೆ. ಇದರಿಂದ ಇದು ನೆಲದ ಕಾನೂನು ಆಗಿದೆ’ ಎಂದು ಹೇಳಿದರು.

ADVERTISEMENT

‘ಪೌರತ್ವ ಕಾಯ್ದೆ ಜಾರಿ ವಿರೋಧಿಸಿ ಎಂತಹುದೇ ಸ್ಥಿತಿ ಎದುರಾದರೂ ಅದನ್ನು ನಿಭಾಯಿಸಲು ಸರ್ಕಾರ ಸಿದ್ಧವಿದೆ. ನಮ್ಮದು ಶಾಂತಿ ಪ್ರಿಯ ರಾಜ್ಯ. ಆದರೂ ಮುಂಜಾಗ್ರತಾ ಕ್ರಮಗಳನ್ನು
ತೆಗೆದುಕೊಳ್ಳಲಾಗಿದೆ. ರಾಜ್ಯದಲ್ಲಿಪ್ರತಿಭಟನೆಗಳು ಶಾಂತಿಯುತವಾಗಿಯೇ ನಡೆದಿವೆ’ ಎಂದು ಬೊಮ್ಮಾಯಿ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.