ADVERTISEMENT

ಕೇಂದ್ರ ಸರ್ಕಾರದಿಂದ ಸಂವಿಧಾನ ವಿರೋಧಿ ನಡೆ: ಸಿದ್ದರಾಮಯ್ಯ

ಪೌರತ್ವ ತಿದ್ದುಪಡಿ ಮಸೂದೆ ಬಗ್ಗೆ ಅಸಮಾಧಾನ

​ಪ್ರಜಾವಾಣಿ ವಾರ್ತೆ
Published 10 ಡಿಸೆಂಬರ್ 2019, 7:23 IST
Last Updated 10 ಡಿಸೆಂಬರ್ 2019, 7:23 IST
ಸಿದ್ದರಾಮಯ್ಯ
ಸಿದ್ದರಾಮಯ್ಯ   

ಬೆಂಗಳೂರು:ಪೌರತ್ವ (ತಿದ್ದುಪಡಿ) ಮಸೂದೆ ಅನುಷ್ಠಾನಕ್ಕೆ ಮುಂದಾಗಿರುವ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮಸೂದೆಗೆ ಸಂಬಂಧಿಸಿ ಸರಣಿ ಟ್ವೀಟ್ ಮಾಡಿರುವ ಅವರು,ಕೇಂದ್ರ ಸರ್ಕಾರವು ಧರ್ಮದ ಆಧಾರದಲ್ಲಿ ಪೌರತ್ವವನ್ನು ನಿರ್ಧರಿಸಲು ಹೊರಟಿರುವುದು ಸರಿಯಲ್ಲ ಎಂದಿದ್ದಾರೆ.

‘ಧರ್ಮದ ಆಧಾರದಲ್ಲಿ ಪೌರತ್ವವನ್ನು ನಿರ್ಧರಿಸುವುದು ಸಂವಿಧಾನ ವಿರೋಧಿ ನಡೆ. ಈ ಮಸೂದೆಯಲ್ಲಿ ಮುಸ್ಲಿಮರನ್ನು ಗುರಿಯಾಗಿಸಿ ಹತ್ತಿಕ್ಕುವ ದುರುದ್ದೇಶ ಇದೆಯೇ ಹೊರತು ವಲಸೆ ಸಮಸ್ಯೆಯನ್ನು ಪರಿಹರಿಸುವ ಸದುದ್ದೇಶ ಖಂಡಿತ ಇಲ್ಲ’ ಎಂದು ಟ್ವೀಟ್‌ನಲ್ಲಿ ಉಲ್ಲೇಖಿಸಿದ್ದಾರೆ.

ಅವಸರದಿಂದ ಮಧ್ಯರಾತ್ರಿ ಲೋಕಸಭೆ ಅಂಗೀಕರಿಸಿದ ‘ಪೌರತ್ವ (ತಿದ್ದುಪಡಿ) ಮಸೂದೆ’ ಸಂವಿಧಾನದ ಮೂಲ‌ ಆಶಯಗಳಾದ ಸಮಾನತೆ ಮತ್ತು ಜಾತ್ಯತೀತತೆಯನ್ನು ಉಲ್ಲಂಘಿಸಿರುವುದು ಸ್ಪಷ್ಟವಾಗಿದೆ. ಈ ಮಸೂದೆ ಧರ್ಮದ ಆಧಾರದಲ್ಲಿ ದೇಶ ಒಡೆಯುವ ಬಿಜೆಪಿಯ ಗುಪ್ತ ಅಜೆಂಡಾದ ಭಾಗವಾಗಿದೆ ಎಂದು ಅವರು ದೂರಿದ್ದಾರೆ.

ದ್ವಿರಾಷ್ಟ್ರ ಸಿದ್ದಾಂತವನ್ನು ಪ್ರತಿಪಾದಿಸಿದ್ದ ಬಿಜೆಪಿಯ ಮೂಲಪುರುಷರ ಆಶಯವನ್ನು ಕೇಂದ್ರ ಸರ್ಕಾರ ಈಡೇರಿಸಲು ಹೊರಟಿರುವುದು ಸ್ಪಷ್ಟ. ದೇಶ ಒಡೆಯಲು ಹೊರಟಿರುವ ಬಿಜೆಪಿ ಸಂಚಿನ ವಿರುದ್ದ ಜಾತ್ಯತೀತ ಭಾರತ ಸಂಘಟಿತವಾಗಬೇಕು ಎಂದು ಕರೆ ನೀಡಿರುವ ಸಿದ್ದರಾಮಯ್ಯ, ಹೆಚ್ಚುತ್ತಿರುವ ನಿರುದ್ಯೋಗ, ಮುಚ್ಚುತ್ತಿರುವ ಕೈಗಾರಿಕೆಗಳು, ಏರುತ್ತಿರುವ ಸಾಮಗ್ರಿಗಳ ಬೆಲೆ, ಕುಸಿಯುತ್ತಿರುವ ಜಿಡಿಪಿ, ದಿವಾಳಿಯಾಗುತ್ತಿರುವ ಬ್ಯಾಂಕುಗಳ ಸ್ಥಿತಿಯಿಂದ ಜನ‌ಮನ ಬೇರೆಡೆ ಸೆಳೆಯಲು ಬಿಜೆಪಿ ಪೌರತ್ವ ಮಸೂದೆಯ ಅಸ್ತ್ರ ಬಳಸಲು ಹೊರಟಿದೆ ಎಂದು ಟೀಕಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.