ಬೆಂಗಳೂರು: ಕಾಂಗ್ರೆಸ್ ವಿರುದ್ಧ ಜಂಟಿ ಹೋರಾಟಕ್ಕೆ ಬಿಜೆಪಿ, ಜೆಡಿಎಸ್ ನಿರ್ಧರಿಸಿದ ಬೆನ್ನಲ್ಲೆ, ಇದೇ 27ರಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಹಮ್ಮಿಕೊಳ್ಳಲಾಗಿದೆ. ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಈ ಸಭೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೂಡಾ ಭಾಗವಹಿಸಲಿದ್ದಾರೆ.
ಹೋಟೆಲ್ ರ್ಯಾಡಿಸನ್ ಬ್ಲೂನಲ್ಲಿ (ಏಟ್ರಿಯಾ ಹೋಟೆಲ್) ಸಂಜೆ 6.30ಕ್ಕೆ ಸಭೆ ನಡೆಯಲಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನ ಪರಿಷತ್ ಸಭಾನಾಯಕ ಎನ್.ಎಸ್. ಬೋಸರಾಜು, ಕೆಪಿಸಿಸಿ ಕಾರ್ಯಾಧ್ಯಕ್ಷರು ಸಭೆಯಲ್ಲಿ ಭಾಗವಹಿಸಲಿದ್ದಾರೆ.
ಈಗಾಗಲೇ ಅನುಷ್ಠಾನಗೊಳಿಸಿರುವ ಗ್ಯಾರಂಟಿ ಯೋಜನೆಗಳ ಪರಾಮರ್ಶೆ, ನಿಗಮ– ಮಂಡಳಿ, ಪ್ರಾಧಿಕಾರಗಳಿಗೆ ನೇಮಕ, ವಿಧಾನಸಭೆ ಅಧಿವೇಶನದಲ್ಲಿ ನಡೆದ ಚರ್ಚೆ, ಪಕ್ಷದ ವಿರುದ್ಧದ ಬಿಜೆಪಿ– ಜೆಡಿಎಸ್ ಜಂಟಿ ಹೋರಾಟವನ್ನು ಎದುರಿಸಲು ರೂಪಿಸಬೇಕಾದ ಕಾರ್ಯತಂತ್ರ, ಲೋಕಸಭಾ ಚುನಾವಣೆ ದೃಷ್ಟಿಯಿಂದ ಪಕ್ಷ ಸಂಘಟನೆ ಮುಂತಾದ ವಿಷಯಗಳು ಸಭೆಯಲ್ಲಿ ಚರ್ಚೆಗೆ ಬರುವ ಸಾಧ್ಯತೆಯಿದೆ.
ಇದೇ 19ರಂದು ಸಂಜೆ 6.30ಕ್ಕೆ ಸಿಎಲ್ಪಿ ಸಭೆ ನಡೆಯಬೇಕಿತ್ತು. ಆದರೆ, ಅದೇ ದಿನ ಸಚಿವರ ಜೊತೆ ರಾಹುಲ್ ಗಾಂಧಿ ಸಭೆ ನಡೆಸಲಿದ್ದಾರೆ ಎಂಬ ಕಾರಣಕ್ಕೆ ಸಿಎಲ್ಪಿ ಸಭೆಯನ್ನು ರದ್ದುಪಡಿಸಲಾಗಿತ್ತು. ಇದೇ 17 ಮತ್ತು 18ರಂದು ನಗರದಲ್ಲಿ ನಡೆದ 26 ವಿರೋಧ ಪಕ್ಷಗಳ ಸಭೆಗೆ ಸೋನಿಯಾ ಗಾಂಧಿ ಜೊತೆ ಬಂದಿದ್ದ ರಾಹುಲ್, 18ರಂದು ರಾತ್ರಿಯೇ ದೆಹಲಿಗೆ ವಾಪಸಾಗಿದ್ದರು. ಹೀಗಾಗಿ, ಸಚಿವರ ಜೊತೆ ನಿಗದಿಯಾಗಿದ್ದ ಸಭೆಯೂ ರದ್ದಾಗಿತ್ತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.