ADVERTISEMENT

ಅಶ್ವತ್ಥನಾರಾಯಣ ವಿರುದ್ಧದ ಆರೋಪ ಆ‌ಧಾರರಹಿತ: ಬಸವರಾಜ ಬೊಮ್ಮಾಯಿ

​ಪ್ರಜಾವಾಣಿ ವಾರ್ತೆ
Published 6 ಮೇ 2022, 5:41 IST
Last Updated 6 ಮೇ 2022, 5:41 IST
ಬಸವರಾಜ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ   

ಬೆಂಗಳೂರು: ‘ಪಿಎಸ್‌ಐ ನೇಮಕಾತಿ ಹಗರಣದಲ್ಲಿ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರ ಬಗ್ಗೆ ಕಾಂಗ್ರೆಸ್‌ನವರು ಆಧಾರರಹಿತ ಆರೋಪ ಮಾಡುತ್ತಿದ್ದಾರೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಸುದ್ದಿಗಾರರ ಜೊತೆ ಗುರುವಾರ ಮಾತನಾಡಿದ ಅವರು, ‘ಆರೋಪ ಮಾಡುವಾಗ ಸಣ್ಣ ಸಾಕ್ಷ್ಯವಾದರೂ ಬೇಕು. ಆದರೆ, ಜವಾಬ್ದಾರಿಯುತ ಪಕ್ಷವಾದ ಕಾಂಗ್ರೆಸ್‌ ಹಿಟ್‌ ಆ್ಯಂಡ್‌ ರನ್‌ ಮಾಡಲು ಹೊರಟಿದೆ’ ಎಂದು ಆರೋಪಿಸಿದರು.

‘ಕಾಂಗ್ರೆಸ್‌ ಅವಧಿಯಲ್ಲಿ ಹಲವು ಪರೀಕ್ಷೆಗಳಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ ಆಗಿದೆ. ಆ ಸಂದರ್ಭದಲ್ಲಿ ಅವರು ಯಾವುದೇ ಕ್ರಮ ತೆಗೆದುಕೊಂಡಿಲ್ಲ. ಈಗ ನಾವು ಕ್ರಮ ತೆಗೆದುಕೊಳ್ಳುತ್ತೇವೆ. ಅವರ ಪಕ್ಷದ ಕೆಲವರ ಬಂಧನ ಆಗಿದೆ. ಎಲ್ಲಿ ಅವರ ಬಣ್ಣ ಬಯಲಾಗುತ್ತದೊ ಎಂದು ಹೆದರಿ ಸಾಕ್ಷ್ಯಾಧಾರಗಳಿಲ್ಲದೆ ಆರೋಪಗಳನ್ನು ಮಾಡುತ್ತಿದ್ದಾರೆ’ ಎಂದರು.

ADVERTISEMENT

ನಿಷ್ಠುರ ತನಿಖೆ: ‘ಈ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಬಂದ ದೂರುಗಳನ್ನೆಲ್ಲ ಪರಿಗಣಿಸಲಾಗುವುದು. ದಾಖಲೆಗಳನ್ನು ಪರಿಶೀಲಿಸಿ, ಎಲ್ಲವನ್ನೂ ತನಿಖೆ ಮಾಡುತ್ತೇವೆ. ಮುಕ್ತ, ನಿಷ್ಪಕ್ಷಪಾತ, ನಿಷ್ಠುರ ತನಿಖೆ ಆಗಬೇಕು ಎನ್ನುವುದು ನಮ್ಮ ನಿಲುವು. ಹೀಗಾಗಿ, ಹಲವು ಅಧಿಕಾರಿಗಳ ತಂಡ ರಚಿಸಿ ಕಾರ್ಯಾಚರಣೆ ಮಾಡುತ್ತಿದ್ದೇವೆ’ ಎಂದರು. ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ‘ದಿವ್ಯಾ ಹಾಗರಗಿಯಷ್ಟೆ ಅಲ್ಲ. ಇನ್ನೂ ಹಲವರು ಈ ಪ್ರಕರಣದಲ್ಲಿ ಇದ್ದಾರೆ. ಎಲ್ಲರ ಮೇಲೂ ಕ್ರಮ ತೆಗೆದುಕೊಳ್ಳುತ್ತೇವೆ. ಅಧಿಕಾರಿಗಳನ್ನು ಅಮಾನತು ಮಾಡಿದ್ದೇ ಇದಕ್ಕೆ ಸಾಕ್ಷಿ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.