ADVERTISEMENT

ಯಾತ್ರೆ ಹೊರಟವರು ಶುದ್ಧಹಸ್ತರಾ: ಸಿಎಂ ಬೊಮ್ಮಾಯಿ ಪ್ರಶ್ನೆ

​ಪ್ರಜಾವಾಣಿ ವಾರ್ತೆ
Published 16 ಏಪ್ರಿಲ್ 2022, 15:22 IST
Last Updated 16 ಏಪ್ರಿಲ್ 2022, 15:22 IST
ಬಸವರಾಜ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ   

ಬೆಂಗಳೂರು: ಗುತ್ತಿಗೆದಾರ ಸಂತೋಷ್‌ ಪಾಟೀಲ ಆತ್ಮಹತ್ಯೆ ಪ್ರಕರಣವನ್ನು ಮುಂದಿಟ್ಟುಕೊಂಡು ರಾಜ್ಯ ಸರ್ಕಾರದ ವಿರುದ್ಧ ಯಾತ್ರೆ ಹೊರಟಿರುವ ಕಾಂಗ್ರೆಸ್‌ನವರು ಶುದ್ಧಹಸ್ತರಾ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಶ್ನಿಸಿದರು.

ಸುದ್ದಿಗಾರರ ಜತೆ ಶನಿವಾರ ಮಾತನಾಡಿದ ಅವರು, ‘ಕಾಂಗ್ರೆಸ್‌ನವರ ಕಾಲದಲ್ಲಿ ಏನೆಲ್ಲಾ ನಡೆದಿದೆ? ಇವರ ಕಪಾಟುಗಳಲ್ಲಿ ಭ್ರಷ್ಟಾಚಾರದ ಎಷ್ಟು ಅಸ್ಥಿಪಂಜರಗಳಿವೆ ಎಂಬುದು ನಮಗೆ ಗೊತ್ತಿದೆ. ಈ ಪ್ರಕರಣವನ್ನು ಮುಂದಿಟ್ಟುಕೊಂಡು ಬಿಜೆಪಿ ವಿರುದ್ಧ ಅಭಿಪ್ರಾಯ ರೂಪಿಸುವ ಕಾಂಗ್ರೆಸ್‌ ನಾಯಕರ ಪ್ರಯತ್ನ ಯಶಸ್ವಿಯಾಗುವುದಿಲ್ಲ’ ಎಂದರು.

ಸಂತೋಷ್‌ ಆತ್ಮಹತ್ಯೆ ಪ್ರಕರಣದಲ್ಲಿ ಅವರ ಕುಟುಂಬದವರು ನೀಡಿದ್ದ ದೂರಿನ ಆಧಾರದಲ್ಲಿ ಎಫ್‌ಐಆರ್‌ ದಾಖಲಿಸಲಾಗಿದೆ. ಈ ಪ್ರಕ್ರಿಯೆಯಲ್ಲಿ ಯಾವ ಲೋಪವೂ ಆಗಿಲ್ಲ. ಮರಣೋತ್ತರ ಪರೀಕ್ಷೆ ಮತ್ತು ವಿಧಿವಿಜ್ಞಾನ ಪ್ರಯೋಗಾಲಯದ ತಜ್ಞರ ವರದಿಗಳ ಆಧಾರದಲ್ಲಿ ಮುಂದಿನ ತನಿಖೆ ನಡೆಯಲಿದೆ. ಕಾಂಗ್ರೆಸ್‌ನವರು ವಕೀಲರು, ನ್ಯಾಯಾಧೀಶರು ಎಲ್ಲವೂ ಆಗಿ ತೀರ್ಪು ಕೊಡಲು ಹೊರಟಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಈಗ ಪ್ರಾಥಮಿಕ ಹಂತದ ತನಿಖೆ ನಡೆಯುತ್ತಿದೆ. ತನಿಖೆಯ ವೇಳೆ ಲಭ್ಯವಾಗುವ ಮಾಹಿತಿ ಆಧಾರದಲ್ಲಿ ಭ್ರಷ್ಟಾಚಾರ ಕಾಯ್ದೆಯಡಿ ಹೊಸ ಸೆಕ್ಷನ್‌ ಸೇರಿಸಬೇಕೆ? ಉನ್ನತಮಟ್ಟದ ತನಿಖೆಗೆ ಆದೇಶಿಸಬೇಕೆ? ಎಂಬುದನ್ನು ನಿರ್ಧರಿಸಲಾಗುವುದು. ತಾವು ಯಾರಿಗೂ ಪ್ರಮಾಣಪತ್ರ ನೀಡುವ ಪ್ರಶ್ನೆಯೇ ಇಲ್ಲ. ಮೊದಲು ತನಿಖೆ ಆಗಬೇಕು. ನಂತರ ನ್ಯಾಯಾಲಯದಲ್ಲಿ ವಿಚಾರಣೆ ನಡೆಯಬೇಕು. ಆ ಬಳಿಕವೇ ತೀರ್ಮಾನ ಆಗಬೇಕು ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.