ಹುಬ್ಬಳ್ಳಿ: ರಾಜ್ಯದಲ್ಲಿ ನೆರೆ ಸಮಸ್ಯೆ ನಿರ್ವಹಣೆಗೆ ಹೊಸ ವ್ಯವಸ್ಥೆ ರೂಪಿಸಿಕೊಳ್ಳಲು ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಶನಿವಾರ ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೀದರ್, ಬೆಳಗಾವಿ, ರಾಯಚೂರು ಜಿಲ್ಲೆಯಲ್ಲಿ ಹೆಚ್ಚು ಮಳೆಯಾಗಿದೆ.ಅತಿವೃಷ್ಟಿ ಕುರಿತು ವರದಿ ತರಿಸಿಕೊಳ್ಳಲಾಗಿದೆ ಎಂದು ತಿಳಿಸಿದರು.
ಮಹಾರಾಷ್ಟ್ರದ ಜಲಾಶಯಗಳಿಂದ ನೀರು ಬಿಡುವ ಮುನ್ನವೇ ಅಲ್ಲಿನ ಅಧಿಕಾರಿಗಳ ಜೊತೆ ಸಂಪರ್ಕದಲ್ಲಿರುವಂತೆ ಸೂಚಿಸಲಾಗಿದೆ. ಅಲ್ಲದೇ ಬೆಳಗಾವಿ, ಬೀದರ್ನಲ್ಲಿ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲು ಸೂಚಿಸಲಾಗಿದೆ.ಮಳೆಯಿಂದ ಮನೆ ಬಿದ್ದ ತಕ್ಷಣವೇ ₹ 10 ಸಾವಿರ, ಪೂರ್ಣ ಪ್ರಮಾಣದಲ್ಲಿ ಬಿದ್ದರೆ ಎಬಿಸಿ ಮಾರ್ಗಸೂಚಿ ಅನುಸಾರ ₹ 3 ಲಕ್ಷ, ₹ 5 ಲಕ್ಷ ಪರಿಹಾರ ವಿತರಿಸಲು ತಿಳಿಸಿದ್ದೇವೆ ಎಂದು ಮಾಹಿತಿ ನೀಡಿದರು.
ಇನ್ನು ರಾಜ್ಯದಲ್ಲಿ ಬೆಳೆಹಾನಿ ಕುರಿತು ಜಂಟಿ ಸರ್ವೆ ಮಾಡಿ ವರ್ಗೀಕರಣ ಮಾಡಲು ತಿಳಿಸಲಾಗಿದೆ.ಪ್ರತಿ ವರ್ಷ ಸಮಸ್ಯೆ ಉಂಟಾಗುವ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಟಾಸ್ಕ್ ಫೋರ್ಸ್ ರಚಿಸಲು ಸೂಚಿಸಲಾಗಿದೆ.ಹಿಂದೆ ಮನೆ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕಡಿಮೆ ಪರಿಹಾರವನ್ನು ನೀಡಲಾಗಿರುವ ಕುರಿತು ವರದಿ ಪಡೆದು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗುವುದು. ಈ ಹಿಂದಿನ ಸರ್ಕಾರದ ತಾಂತ್ರಿಕ ತಪ್ಪಿನಿಂದ ಪ್ರಧಾನ ಮಂತ್ರಿ ಆವಾಸ್ ಯೋಜನೆಯ 18 ಲಕ್ಷ ಮನೆಗಳು ಮಂಜೂರು ಆಗಿದ್ದು ರದ್ದಾಗಿದೆ. ಅದನ್ನು ಸರಿಪಡಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.