ADVERTISEMENT

1.14 ಲಕ್ಷ ಫಲಾನುಭವಿಗಳಿಗೆ ಸೌಲಭ್ಯ: ₹900 ಕೋಟಿ ಬಿಡುಗಡೆ ಮಾಡಿದ ಸಿಎಂ ಬೊಮ್ಮಾಯಿ

ಫಲಾನುಭವಿಗಳ ಖಾತೆಗೆ ನೇರವಾಗಿ ಮೊದಲ ಕಂತಿನಲ್ಲಿ ಹಣ ವರ್ಗಾವಣೆ

​ಪ್ರಜಾವಾಣಿ ವಾರ್ತೆ
Published 11 ಮಾರ್ಚ್ 2023, 19:30 IST
Last Updated 11 ಮಾರ್ಚ್ 2023, 19:30 IST
ಹಿಂದುಳಿದ ವರ್ಗಗಳ ನಿಗಮಗಳ ಫಲಾನುಭವಿಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿವಿಧ ಸವಲತ್ತುಗಳನ್ನು ಶನಿವಾರ ವಿತರಿಸಿದರು. ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಇದ್ದರು
ಹಿಂದುಳಿದ ವರ್ಗಗಳ ನಿಗಮಗಳ ಫಲಾನುಭವಿಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿವಿಧ ಸವಲತ್ತುಗಳನ್ನು ಶನಿವಾರ ವಿತರಿಸಿದರು. ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಇದ್ದರು   

ಬೆಂಗಳೂರು: ಹಿಂದುಳಿದ ವರ್ಗಗಳ ವಿವಿಧ ನಿಗಮಗಳ ವತಿಯಿಂದ 1.14 ಲಕ್ಷ ಫಲಾನುಭವಿಗಳಿಗೆ ವಿವಿಧ ಸೌಲಭ್ಯ ಕಲ್ಪಿಸುವ ಕಾರ್ಯಕ್ರಮಗಳಿಗಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶನಿವಾರ ₹ 900 ಕೋಟಿ ಬಿಡುಗಡೆ ಮಾಡಿದರು.

ವಿಧಾನಸೌಧದ ಮೆಟ್ಟಿಲುಗಳ ಮೇಲೆ ನಡೆದ ಕಾರ್ಯಕ್ರಮದಲ್ಲಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಯ ವಿವಿಧ ಕಟ್ಟಡ ಕಾಮಗಾರಿಗಳ ಶಂಕುಸ್ಥಾಪನೆ ನೆರವೇರಿಸಿ, ಫಲಾನುಭವಿಗಳಿಗೆ ಅವರು ಸವಲತ್ತುಗಳನ್ನು ವಿತರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿ, ‘ಗಂಗಾ ಕಲ್ಯಾಣ ಯೋಜನೆಯಡಿ 19 ಸಾವಿರ
ಫಲಾನುಭವಿಗಳಿಗೆ ಬೇರೆ ಬೇರೆ ನಿಗಮಗಳ ವತಿಯಿಂದ ಕೊಳವೆಬಾವಿ ಮಂಜೂರು ಮಾಡಲಾಗಿದೆ. ಫಲಾನುಭವಿಗಳ ಖಾತೆಗೆ ನೇರವಾಗಿ ಮೊದಲ ಕಂತಿನಲ್ಲಿ ತಲಾ ₹ 75 ಸಾವಿರ ವರ್ಗಾಯಿಸಲಾಗಿದೆ. ಕೇವಲ ಐದು ತಿಂಗಳಲ್ಲಿ ಗಂಗಾ ಕಲ್ಯಾಣ ಯೋಜನೆ ಅನುಷ್ಠಾನಗೊಳಿಸುತ್ತಿದ್ದೇವೆ’ ಎಂದರು.

ADVERTISEMENT

‘ವಿದ್ಯಾಸಿರಿ ಯೋಜನೆ ಹಾಗೂ ಹಾಸ್ಟೆಲ್ ಮೂಲಕ ಸುಮಾರು ಒಂದು ಲಕ್ಷ ವಿದ್ಯಾರ್ಥಿಗಳಿಗೆನೆರವು ನೀಡಲಾಗಿದೆ. ಹಿಂದುಳಿದ ವರ್ಗದವರಿಗೆ ‘ಕಾಯಕ’ ಕಾರ್ಯಕ್ರಮದಡಿ ₹ 50 ಸಾವಿರದವರೆಗೆ ನೆರವು ನೀಡಲಾಗುತ್ತಿದೆ. 33 ಸಾವಿರ ಮಕ್ಕಳಿಗೆ ವಿದ್ಯಾರ್ಥಿನಿಲಯ ಸೌಕರ್ಯ ಕಲ್ಪಿಸಲಾಗಿದೆ. ಈ ವರ್ಷ ಹೆಚ್ಚುವರಿ ಒಂದು ಲಕ್ಷ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ವ್ಯವಸ್ಥೆ ಕಲ್ಪಿಸಲಾಗಿದೆ’ ಎಂದರು.

‘ಕೃಷಿ ಕಾರ್ಮಿಕರ ಮಕ್ಕಳಿಗೂ ವಿದ್ಯಾನಿಧಿ ವಿಸ್ತರಿಸಲಾಗಿದೆ. ಒಟ್ಟು 24 ಸಾವಿರ ಪೌರಕಾರ್ಮಿಕರ ಸೇವೆ ಕಾಯಂ ಮಾಡಲಾಗಿದೆ. ಸ್ಮಶಾನ ಕಾರ್ಮಿಕರ ಜೀವನಕ್ಕೆ ಭದ್ರತೆ ನೀಡಲಾಗಿದೆ. ಕುರಿಗಾಹಿಗಳಿಗೆ ₹ 350 ಕೋಟಿ ವೆಚ್ಚದಲ್ಲಿ ಸಹಾಯ, ಲಂಬಾಣಿ ಸಮುದಾಯದವರಿಗೆ ಹಕ್ಕುಪತ್ರವನ್ನು ನೀಡಲಾಗಿದೆ’ ಎಂದರು.

‘ಒಂದು ವಾರದೊಳಗೆ ಕುರುಬರಹಟ್ಟಿ, ಗೊಲ್ಲರ ಹಟ್ಟಿ, ಲಂಬಾಣಿ ತಾಂಡಾಗಳ ಒಂದು ಲಕ್ಷ ಜನರಿಗೆ ಹಕ್ಕುಪತ್ರ ನೀಡಲಾಗುವುದು. ವಿದ್ಯಾರ್ಥಿನಿಯರಿಗೆ ಉಚಿತ ಬಸ್‌ ಪಾಸ್ ಸೌಲಭ್ಯ ಜಾರಿಗೊಳಿಸಲಾಗಿದೆ’ ಎಂದೂ ವಿವರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.