ADVERTISEMENT

ಅಕ್ಟೋಬರ್ ತಿಂಗಳಲ್ಲಿ ಏಳನೇ ವೇತನ ಆಯೋಗ ರಚನೆ: ಸಿಎಂ ಬೊಮ್ಮಾಯಿ ಘೋಷಣೆ

​ಪ್ರಜಾವಾಣಿ ವಾರ್ತೆ
Published 6 ಸೆಪ್ಟೆಂಬರ್ 2022, 18:16 IST
Last Updated 6 ಸೆಪ್ಟೆಂಬರ್ 2022, 18:16 IST
ಸಿಎಂ ಬಸವರಾಜ ಬೊಮ್ಮಾಯಿ
ಸಿಎಂ ಬಸವರಾಜ ಬೊಮ್ಮಾಯಿ   

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ವೇತನ ಮತ್ತು ಭತ್ಯೆಗಳನ್ನು ಪರಿಷ್ಕರಿಸಲು ಇದೇ ಅಕ್ಟೋಬರ್ ತಿಂಗಳಲ್ಲಿ ಏಳನೇ ವೇತನ ಆಯೋಗವನ್ನು ರಚಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು.

ವಿಧಾನ ಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಸಹಯೋಗದಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಮಂಗಳವಾರ ಆಯೋಜಿಸಿದ್ದ ಸರ್ಕಾರಿ ನೌಕರರ ದಿನಾಚರಣೆಯಲ್ಲಿ ಅವರು ಮಾತನಾಡಿದರು.

‘ಸರ್ಕಾರಿ ನೌಕರರ ಬೇಡಿಕೆ ಗಳಿಗೆ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಲಿದೆ. ನೌಕರರಿಗೆ ಆರೋಗ್ಯ ವಿಮೆ ಒದಗಿಸುವ ಆರೋಗ್ಯ ಸಂಜೀವಿನಿ ಯೋಜನೆ ಅನುಷ್ಠಾನಕ್ಕೆ ಈಗಾಗಲೇ ಆದೇಶ ಹೊರಡಿಸಲಾಗಿದೆ’ ಎಂದರು.

ADVERTISEMENT

ನೌಕರರು ಸರ್ಕಾರದ ಪ್ರಮುಖವಾದ ಒಂದು ಭಾಗ ಮತ್ತು ಅಂಗ. ಬೆಳಿಗ್ಗೆಯಿಂದ ಸಂಜೆಯವರೆಗೆ ಮಾಡುವ ಕೆಲಸ ಕರ್ತವ್ಯ ಎನಿಸುತ್ತದೆ. ಬದುಕಿನಲ್ಲಿ ಸೇವೆ ಮಾಡಿ ಸಂತೃಪ್ತಿ ಪಡೆಯುವುದು ಕಾಯಕ. ಸರ್ಕಾರಕ್ಕೆ ತೆರಿಗೆ ಪಾವತಿಸುವ ಪ್ರಜೆಗಳೇ ನಮ್ಮ ಮಾಲೀಕರು. ಕಾಲಕ್ಕೆ ತಕ್ಕಂತೆ ತಂತ್ರಜ್ಞಾನವನ್ನು ಅಳವಡಿಸಿಕೊಂಡು ಪ್ರಜೆಗಳ ನೋವು ನಲಿವುಗಳಿಗೆ ಸ್ಪಂದಿಸಿ ಎಂದರು.

ಆರೋಗ್ಯ ಸಂಜೀವಿನಿ ನಗದು ರಹಿತ ವೈದ್ಯಕೀಯ ಸೇವಾ ಯೋಜನೆಗೆ ಚಾಲನೆ ನೀಡಿದರು. 30 ನೌಕರರಿಗೆ ತಲಾ ₹ 50 ಸಾವಿರ ರೂಪಾಯಿ ನಗದು ಒಳಗೊಂಡ ರಾಜ್ಯ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿ ಪ್ರದಾನ ಮಾಡಿದರು.

ಪ್ರಾಸ್ತಾವಿಕ ಭಾಷಣ ಮಾಡಿದ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಸರ್ಕಾರಿ ಸೇವೆಗೆ ಬರಲು ದೇವರ ಆಶೀರ್ವಾದ ಇರಬೇಕು. ಆದಕಾರಣ, ಸರ್ಕಾರಿ ನೌಕರರು ಸಮಾಜಕ್ಕೆ ತಮ್ಮದೇ ಆದ ಕೊಡುಗೆ ನೀಡಬೇಕು ಎಂದು ಸಲಹೆ ನೀಡಿದರು.

ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಸಂಪುಟ ಶಾಖೆಯ ಉಪ ಕಾರ್ಯದರ್ಶಿ ಆರ್. ಚಂದ್ರಶೇಖರ್ ಅವರು ಪ್ರಶಸ್ತಿ ಪುರಸ್ಕೃತರ ಪರವಾಗಿ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸಿದರು.

ಕಾರ್ಯಕ್ರಮದ ಯಶಸ್ಸಿಗೆ ಶ್ರಮಿಸಿದ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಆಡಳಿತ ಸುಧಾರಣಾ ವಿಭಾಗದ ಅಧೀನ ಕಾರ್ಯದರ್ಶಿ ಬಿ ಎಸ್ ಲಕ್ಷ್ಮಣ್ ಅವರನ್ನು ಮುಖ್ಯಮಂತ್ರಿ ಗೌರವಿಸಿದರು.

ಕಂದಾಯ ಸಚಿವ ಆರ್ ಅಶೋಕ, ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ ಪ್ರಸಾದ್, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಕಾರ್ಯದರ್ಶಿ ಪಿ. ಹೇಮಲತಾ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.