ನವದೆಹಲಿ: ರಾಜ್ಯಕ್ಕೆ ಕಳೆದ ವರ್ಷದ ಬಾಬ್ತಿನಲ್ಲಿ ₹ 11,400 ಕೋಟಿ ಜಿಎಸ್ಟಿ ಬಾಕಿ ಬರಬೇಕಿದೆ. ಈ ಹಣವನ್ನು ಬಿಡುಗಡೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಶನಿವಾರ ಕೇಂದ್ರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರೊಂದಿಗಿನ ಭೇಟಿಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಸಿಕ ಕಂತಿನ ರೂಪದಲ್ಲಿ ಬಾಕಿ ಹಣ ಬಿಡುಗಡೆ ಮಾಡುವ ಭರವಸೆಯನ್ನು ಸಚಿವರು ನೀಡಿದ್ದಾರೆ ಎಂದರು.
'ಕರ್ನಾಟಕಕ್ಕೆ ಸಿಗಬೇಕಿರುವ ಜಿಎಸ್ಟಿ ಪರಿಹಾರವನ್ನು ಪಾವತಿಸಲು ನಿರ್ಮಲಾ ಸೀತಾರಾಮನ್ ಅವರಿಗೆ ವಿನಂತಿಸಿದೆ. ಪರಿಹಾರದ ಮೊತ್ತವನ್ನು ಕಂತುಗಳಲ್ಲಿ ನೀಡಲು ಅವರು ಒಪ್ಪಿಕೊಂಡಿದ್ದಾರೆ' ಎಂದು ಬೊಮ್ಮಾಯಿ ಹೇಳಿಕೆ ನೀಡಿದರು.
ಕೇಂದ್ರ ಸರ್ಕಾರದ ಹಲವು ಯೋಜನೆಗಳಿಗೆ ಅನುದಾನ ನೀಡುವಂತೆಯೂ ಇದೇ ವೇಳೆ ಕೋರಲಾಗಿದೆ. ಕೃಷಿ ಕ್ಷೇತ್ರದ ಅಭಿವೃದ್ಧಿಗಾಗಿ ನಬಾರ್ಡ್ ನೆರವಿಗೆ ಮನವಿ ಮಾಡಿಕೊಳ್ಳಲಾಗಿದೆ. ರಾಜ್ಯದ ಯಾವುದೇ ಬೇಡಿಕೆ ಇದ್ದರೂ ಈಡೇರಿಸುವುದಾಗಿ ಸಚಿವರು ತಿಳಿಸಿದ್ದಾರೆ ಎಂದು ಅವರು ಹೇಳಿದರು.
ಕೇಂದ್ರ ಸರ್ಕಾರವು ವಿವಿಧ ರಾಜ್ಯಗಳಿಗೆ ಬಾಕಿ ಉಳಿಸಿಕೊಂಡಿರುವ ಜಿಎಸ್ಟಿ ಪರಿಹಾರ ಮೊತ್ತದಲ್ಲಿ ಕರ್ನಾಟಕಕ್ಕೆ ₹ 11,800 ಕೋಟಿ ಬರಬೇಕಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.