ADVERTISEMENT

ಇಂದು ಸಂಜೆ ಪ್ರವೀಣ್ ನೆಟ್ಟಾರು ಮನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿ

​ಪ್ರಜಾವಾಣಿ ವಾರ್ತೆ
Published 28 ಜುಲೈ 2022, 9:50 IST
Last Updated 28 ಜುಲೈ 2022, 9:50 IST
 ಪ್ರವೀಣ್ ನೆಟ್ಟಾರು
ಪ್ರವೀಣ್ ನೆಟ್ಟಾರು   

ಮಂಗಳೂರು: ಹತ್ಯೆಯಾಗಿರುವ ಸುಳ್ಯ ತಾಲ್ಲೂಕಿನ ಬೆಳ್ಳಾರೆ ಗ್ರಾಮದ ಪ್ರವೀಣ್ ನೆಟ್ಟಾರು ಮನೆಗೆ ಗುರುವಾರ ಸಂಜೆ 6.30ರ ಸುಮಾರಿಗೆ ಮುಖ್ಯಮಂತ್ರಿ ಭೇಟಿ ನೀಡುವರು.

ಬೆಂಗಳೂರಿನಿಂದ 3.30ಕ್ಕೆ ಹೊರಟು, ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಜೆ 4.25ಕ್ಕೆ ಬರಲಿರುವ ಮುಖ್ಯಮಂತ್ರಿ, ರಸ್ತೆ ಮಾರ್ಗವಾಗಿ ಸುಳ್ಯ ತಾಲ್ಲೂಕಿನ ಬೆಳ್ಳಾರೆಗೆ ಬಂದು, ಪ್ರವೀಣ್ ಕುಟುಂಬದ ಸದಸ್ಯರನ್ನು ಭೇಟಿ ಮಾಡುವರು. ರಾತ್ರಿ ಪುನಃ ಬೆಂಗಳೂರಿಗೆ ತೆರಳುವರು ಎಂದು ಪ್ರಕಟಣೆ ತಿಳಿಸಿದೆ.

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.ಜಾಕೀರ್ ಸವಣೂರು ಹಾಗೂ ಶಫಿಕ್ ಬಂಧಿತರು. ತನಿಖೆ ಪ್ರಗತಿಯಲ್ಲಿದೆ ಎಂದು ಕಾನೂನು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಪ್ರಜಾವಾಣಿಗೆ ತಿಳಿಸಿದ್ದಾರೆ.

ADVERTISEMENT

ಪ್ರಕರಣ ಸಂಬಂಧ ಇನ್ನಷ್ಟು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

–––

'ಹತ್ಯೆ ಹಿಂದಿನ ಸಂಚು ಶೀಘ್ರ ಬಹಿರಂಗ'–ಎಡಿಜಿಪಿ ಅಲೋಕ್ ಕುಮಾರ್

ಪ್ರವೀಣ್ ಹತ್ಯೆ ಪ್ರಕರಣ ಸಂಬಂಧ ಜಾಕೀರ್ ಹಾಗೂ ಶಫಿಕ್ ಅವರನ್ನು ಬಂಧಿಸಿದ್ದೇವೆ ಎಂದು ರಾಜ್ಯ ಕಾನೂನು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ತಿಳಿಸಿದರು.

ದಕ್ಷಿಣ ಕನ್ನಡ ಜಿಲ್ಲೆಯ ನೆಟ್ಟಾರುವಿನಲ್ಲಿರುವ ಪ್ರವೀಣ್ ಅವರ ಮನೆಗೆ ಗುರುವಾರ ಭೇಟಿ ನೀಡಿ ಪ್ರಕರಣದ ತನಿಖೆಯ ಪ್ರಗತಿ ಬಗ್ಗೆ ಅವರು ಮಾಹಿತಿ ನೀಡಿದರು.

ಪ್ರವೀಣ್ ಅವರ ಪತ್ನಿ ನೂತನಾ, ತಂದೆ ಶೇಖರ ಪೂಜಾರಿ, ಅಮ್ಮ ರತ್ನಾವತಿ ಅವರಿಂದ ಹೆಚ್ಚಿನ ಮಾಹಿತಿ ಪಡೆದರು.
ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಅಲೋಕ್ ಕುಮಾರ್,'ಹತ್ಯೆ ಮಾಡಿದ ಇಬ್ಬರು 'ಆರೋಪಿಗಳನ್ನು ಬಂಧಿಸಿದ್ದೇವೆ. ಇನ್ನಷ್ಟು ವಿಚಾರಣೆ ನಡೆಸಬೇಕಿದೆ. ಆಳವಾಗಿ ತನಿಖೆ ನಡೆಸಿದ ಬಳಿಕವಷ್ಟೇ ಅವರ ಜಾಲ ಎಷ್ಟು ವ್ಯಾಪಿಸಿದೆ. ಈ ಕೃತ್ಯದ ಹಿಂದೆ ಯಾರಿದ್ದಾರೆ. ಯಾವುದಾದರೂ ಸಂಘಟನೆಯ ಕೈವಾಡ ಇದೆಯೇ ಎಂಬುದು ತನಿಖೆ ಬಳಿಕ ತಿಳಿಯಲಿದೆಎಂಬುದು ತಿಳಿಯಲಿದೆ. ಶೀಘ್ರವೇ ಇದು ಬಹಿರಂಗವಾಗಲಿದೆ'' ಎಂದರು.

ಲಾಠಿಚಾರ್ಜ್ ನಡೆಸಿದ ಪೊಲೀಸರ ವಿರುದ್ಧ ಪ್ರವೀಣ್ ಕುಟುಂಬಸ್ಥರು ಹಾಗೂ ಬಿಜೆಪಿ ಕಾರ್ಯಕರ್ತರು ಅಕ್ರೋಶ ತೋಡಿಕೊಂಡರು.
ಸುಳ್ಯ ಸರ್ಕಲ್ ಇನ್ಸ್ಪೆಕ್ಟರ್ ನವೀನಚಂದ್ರ ಜೋಗಿ, ಸುಬ್ರಹ್ಮಣ್ಯ ನಗರ ಠಾಣೆಯ ಪಿಎಸ್ಐ ಜಂಬೂರಾಜ್ ಮಹಾಜನ್, ಪುತ್ತೂರು ನಗರ ಠಾಣೆಯ ಪಿಎಸ್ಐ ರಾಜೇಶ್ ಬೆಳ್ಳಾರೆ ಠಾಣೆಯ ಹೆಡ್ ಕಾನ್ಸ್ಟೆಬಲ್ ಬಾಲಕೃಷ್ಣ ಹಾಗೂ ಕಾನ್ಸ್ಟೆಬಲ್‌ ಮಂಜುನಾಥ ಅವರು ಕಾರ್ಯಕರ್ತರ ಮೇಲೆ ವಿನಾ ಕಾರಣ ಹಲ್ಲೆ ನಡೆಸಿದ್ದಾರೆ. ಅವರನ್ನು ಅಮಾನತು ಮಾಡಬೇಕು ಎಂದು ಬಿಜೆಪಿ ಕಾರ್ಯಕರ್ತರು ಹಾಗೂ ಪ್ರವೀಣ್ ಕುಟುಂಬಸ್ಥರು ಅಲೋಕ್ ಕುಮಾರ್ ಅವರನ್ನು ಒತ್ತಾಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.