ನವದೆಹಲಿ: ಸಂಪುಟ ವಿಸ್ತರಣೆ ಅಥವಾ ಪುನರ್ ರಚನೆಗೆ ಅನುಮತಿ ಪಡೆಯಲು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರೊಂದಿಗೆ ಚರ್ಚಿಸಬೇಕೆಂಬ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಪ್ರಯತ್ನ ಮಂಗಳವಾರ ಯಶಸ್ವಿ ಆಗಲಿಲ್ಲ.
‘ನಡ್ಡಾ ಅವರ ಭೇಟಿ ಸಾಧ್ಯವಾಗಲಿಲ್ಲ. ಆದ್ದರಿಂದ ದೂರವಾಣಿ ಮೂಲಕವೇ ಮಾತನಾಡಿ ಈ ಕುರಿತು ಪ್ರಸ್ತಾಪಿಸಿದೆ. ಆದರೆ, ಎರಡು–ಮೂರು ದಿನಗಳ ನಂತರ ಚರ್ಚಿಸುವುದಾಗಿ ಅವರು ತಿಳಿಸಿದ್ದಾರೆ’ ಎಂದು ಬೊಮ್ಮಾಯಿ ಸುದ್ದಿಗಾರರಿಗೆ
ತಿಳಿಸಿದರು.
ಸಂಸತ್ ಭವನದಲ್ಲಿ ಮಧ್ಯಾಹ್ನ ಅಮಿತ್ ಶಾ ಅವರನ್ನು ಭೇಟಿಯಾದ ಬೊಮ್ಮಾಯಿ ಅವರು ಈ ವಿಷಯ ಪ್ರಸ್ತಾಪಿಸಿದ್ದಾರೆ. ಸಂಪುಟ ವಿಸ್ತರಣೆ ಹಾಗೂ ನಿಗಮ– ಮಂಡಳಿಗಳ ನೇಮಕಕ್ಕೆ ಒತ್ತಡ ಹೆಚ್ಚಿದ್ದು ಕೂಡಲೇ ಅನುಮತಿ ನೀಡಬೇಕು ಎಂದು ಕೋರಿದ್ದಾರೆ. ಆದರೆ, ನಡ್ಡಾ ಅವರೊಂದಿಗೆ ಚರ್ಚಿಸಿಯೇ ನಿರ್ಧಾರ ಕೈಗೊಳ್ಳಬೇಕು ಎಂದು ಸೂಚಿಸಿದ್ದಾಗಿ ಮೂಲಗಳು ಹೇಳಿವೆ.
ಫೆಬ್ರುವರಿ 15ರೊಳಗೆ ಸಂಪುಟ ವಿಸ್ತರಣೆ ಹಾಗೂ ನಿಗಮ–ಮಂಡಳಿಗಳ ನೇಮಕ ಪ್ರಕ್ರಿಯೆಗೆ ಅನುಮತಿ ದೊರೆಯುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.